ADVERTISEMENT

ಪಶುವೈದ್ಯಾಧಿಕಾರಿ ವಿರುದ್ಧ ಗ್ರಾಮಸ್ಥರ ದೂರು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 6:05 IST
Last Updated 13 ಸೆಪ್ಟೆಂಬರ್ 2011, 6:05 IST

ಸೋಮವಾರಪೇಟೆ: ಪಶುವೈದ್ಯಕೀಯ ಇಲಾ ಖೆಯ ಸಹಾಯಕ ನಿರ್ದೇಶಕ ಡಾ.ಲಕ್ಷ್ಮೀಕಾಂತ್ ರೈತರೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ ಹಾಗೂ ಸೂಕ್ತ ಮಾಹಿತಿ ನೀಡುತ್ತಿಲ್ಲ. ಕೂಡಲೆ ಇವರನ್ನು ವರ್ಗಾಯಿಸಬೇಕೆಂದು ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿ ಕುಶಾಲಪ್ಪ ಅವರನ್ನು ಒತ್ತಾಯಿಸಿದರು.

ಸಮೀಪದ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ಮತ್ತು ಸಾರ್ವ ಜನಿಕರ ಕುಂದುಕೊರತೆಗಳ ಸಭೆ ಅಲ್ಲಿನ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆದ ಸಂದರ್ಭ, ಪಶು ವೈದ್ಯಾಧಿಕಾರಿಗಳ ವಿರುದ್ಧ ಸಾರ್ವಜನಿಕರು ಅವರ ಮೇಲೆ ಆರೋಪಗಳ ಸುರಿಮಳೆಗೈದರು.

ಪಶು ಸಾಕಣೆ ಮತ್ತು ಬ್ಯಾಂಕ್ ಸಾಲಗಳಿಗೆ ಸಂಬಂಧಿಸಿದಂತೆ ಡಾ.ಲಕ್ಷ್ಮೀಕಾಂತ್ ರೈತರಿಗೆ ಸರಿ ಯಾದ ಮಾಹಿತಿ ನೀಡದೆ ವೃಥಾ ಸತಾಯಿಸು ತ್ತಿದ್ದಾರೆ. ಅರ್ಹ ಫಲಾನುಭವಿಗಳಿಗೆ ಸರ್ಕಾರ ದಿಂದ ದೊರಕುವ ಸವಲತ್ತುಗಳನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಗ್ರಾಮಸ್ಥ ತಿಮ್ಮಯ್ಯ ನೇರವಾಗಿ ಆರೋಪಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿ ಕುಶಾಲಪ್ಪ ಮಧ್ಯೆ ಪ್ರವೇಶಿಸಿ ಸಹಾಯಕ ನಿರ್ದೇಶಕರು ಕೂಡಲೆ ತಮ್ಮ ಕಾರ್ಯವೈಖರಿಯನ್ನು ಸರಿಪಡಿಸಿಕೊಳ್ಳದಿದ್ದರೆ ಶಿಸ್ತುಕ್ರಮ ಕೈಗೊಳ್ಳು ವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಫರ್ವಿನ್‌ತಾಜ್ ಅವರು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಉದ್ಧಟನದಿಂದ ವರ್ತಿಸುತ್ತಿದ್ದು, ಕೂಡಲೆ ಅವರನ್ನು ವರ್ಗಾಯಿಸಬೇಕೆಂದು ಜನರು ಒತ್ತಾಯಿಸಿದರು.

ಬಿಇಓ ರಾಮಚಂದ್ರರಾಜೇ ಅರಸ್ ಮಾತನಾಡಿ ಫರ್ವಿನ್‌ತಾಜ್ ವಿರುದ್ಧ ಹಿಂದಿ ನಿಂದಲೇ ದೂರುಗಳು ಕೇಳಿಬಂದಿವೆ. ಇದರ ಬಗ್ಗೆ ಮೇಲಾಧಿಕಾರಿಗಳಿಗೆ ಸಮಗ್ರ ವರದಿ ಸಲ್ಲಿಸಲಾಗಿದೆ. ಶಿಕ್ಷಕಿ ಫರ್ವಿನ್ ಅವರನ್ನು ವಾರ ದಲ್ಲಿ 3 ದಿನ ಸೂರ್ಲಬ್ಬಿ ಶಾಲೆಗೆ ನಿಯೋಜಿಸಿದ್ದರೂ ಅಲ್ಲಿಗೆ ಹೋಗದೆ ಗೈರು ಹಾಜರಾಗುತ್ತಿದ್ದಾರೆಂದು ಮಾಹಿತಿ ನೀಡಿದರು. ಶಿಕ್ಷಕಿಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಲಾಗುತ್ತದೆ ಎಂದು ಅಧ್ಯಕ್ಷರು ತಿಳಿಸಿದರು.

ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿಗಳಿಗೆ ಅಡುಗೆ ಅನಿಲ ಸೌಕರ್ಯ ಅವಶ್ಯವಿದೆ ಎಂಬ ವಿಚಾರ ಸಭೆಯಲ್ಲಿ ಪ್ರಸ್ತಾಪವಾಯಿತು. ಮುಂದಿನ 15 ದಿನಗಳ ಒಳಗೆ ಗ್ರಾಮ ಪಂಚಾಯಿತಿ ವತಿಯಿಂದ ಸೌಲಭ್ಯ ಕಲ್ಪಿಸಬೇಕೆಂದು ಅಧ್ಯಕ್ಷರು ಸೂಚಿಸಿದರು. ಎಡುಂಡೆ ಗ್ರಾಮಕ್ಕೆ ತುರ್ತಾಗಿ ಸೇತುವೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಪಂಚಾಯಿತಿ ವ್ಯಾಪ್ತಿಯ ಉಂಜಿಗನ ಹಳ್ಳಿಯಲ್ಲಿ ಕಳೆದ 4 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆ ಕಾಮಗಾರಿ ಜರುಗುತ್ತಿರುವುದರಿಂದ ನೀರಿನ ಪೈಪ್‌ಗಳು ಒಡೆದು ಹೋಗಿವೆ. ತಕ್ಷಣ ಕುಡಿಯುವ ನೀರಿನ ಸರಬರಾಜಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಕೂಡಲೆ ಸ್ಥಳ ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ  ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್‌ಗೆ ಅಧ್ಯಕ್ಷರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಇಂದಿರಮ್ಮ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ನೇತ್ರಾವತಿ ಈರಪ್ಪ, ಸದಸ್ಯ ಅರೆಯೂರು ಜಯಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಂಗಮಣಿ, ಉಪಾಧ್ಯಕ್ಷೆ ಗಿರಿಜಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಿ.ನಾಗರಾಜ್ ಉಪಸ್ಥಿತ ರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಬು ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.