ADVERTISEMENT

ಪಾರಂಪರಿಕ ತಾಣ: ಕೇಂದ್ರ ಸರ್ಕಾರ ಕಾರಣ

​ಪ್ರಜಾವಾಣಿ ವಾರ್ತೆ
Published 6 ಜುಲೈ 2012, 8:25 IST
Last Updated 6 ಜುಲೈ 2012, 8:25 IST

ಸೋಮವಾರಪೇಟೆ: ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರ ಕೆ.ಜಿ.ಸುರೇಶ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯನ್ನು ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಪ್ರಯತ್ನಿಸಿದರೆ ತಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಈ ಹಿಂದೆ ರಂಜನ್ ಹೇಳಿಕೆ ನೀಡಿದ್ದರು. ಅದನ್ನು ಕೆ.ಪಿ.ಚಂದ್ರಕಲಾ ತಪ್ಪಾಗಿ ತಿಳಿದುಕೊಂಡು ಶಾಸಕರ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸಂಸದರು ರಾಜೀನಾಮೆ ನೀಡಲಿ: ಜಿಲ್ಲೆ ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರಲು, ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ಕಾರಣ, ಇದರ ನೈತಿಕ ಹೊಣೆ ಹೊತ್ತು ಇಲ್ಲಿಯ ಕಾಂಗ್ರೆಸ್ ಸಂಸದ ಎಚ್. ವಿಶ್ವನಾಥ್ ಕೂಡಲೇ ರಾಜೀನಾಮೆ ನೀಡಿ ಹೋರಾಟಕ್ಕೆ ಇಳಿಯಬೇಕು ಎಂದು ಸುರೇಶ್ ಆಗ್ರಹಿಸಿದರು.

ಪ್ರಾರಂಭದಿಂದಲೂ ಶಾಸಕ ಅಪ್ಪಚ್ಚು ರಂಜನ್, ಜಿಲ್ಲೆ ವಿಶ್ವಪಾರಂಪರಿಕ ತಾಣದ ಪಟ್ಟಿಗೆ ಸೇರ್ಪಡೆಗೊಂಡರೆ, ಗುಡ್ಡಗಾಡು ಪ್ರದೇಶದಲ್ಲಿ ಜೀವಿಸುತ್ತಿರುವ ಕೊಡಗಿನ ಜನತೆ ಸಂಕಷ್ಟಕ್ಕೆ ಸಿಲುಕುತ್ತಾರೆ. ಎಂಬ ಸದುದ್ದೇಶದಿಂದ ವಿರೋಧಿಸಿದ್ದರು.
 
ಈಗ ಎಲ್ಲವೂ ಕೈಮೀರಿ ಹೋಗಿದೆ. ಇನ್ನು ಮುಂದೆ ಪಕ್ಷಾತೀತವಾಗಿ ಹೋರಾಟ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಬೇಕಾಗಿದೆ. ವಿಶ್ವಪಾರಂಪರಿಕ ತಾಣದ ಪಟ್ಟ ನಮಗೆ ಬೇಡ ಎಂದು ಹೇಳಿದರು. ಗೋಷ್ಠಿಯಲ್ಲಿ ಪಟ್ಟಣ್ಣ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ಮೂರ್ತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.