ಕುಶಾಲನಗರ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗಿರುವ ಪೈಸಾರಿ ಜಾಗಗಳ ಒತ್ತುವರಿಗೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ಹೇಳಿದರು.
ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದ ನಂತರ ಪ್ರಥಮ ಬಾರಿಗೆ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಶಾಲನಗರ ಪಟ್ಟಣದಲ್ಲಿ ಪೈಸಾರಿ ಜಾಗಗಳ ಒತ್ತುವರಿಯಾಗಿದೆ. ಎಂತಹ ಪ್ರಭಾವಿ ವ್ಯಕ್ತಿ ಪೈಸಾರಿ ಒತ್ತುವರಿ ಮಾಡಿದ್ದರೂ ನಿರ್ದಾಕ್ಷಿಣ್ಯವಾಗಿ ತೆರವಿಗೆ ಕ್ರಮ ವಹಿಸಲಾಗುವುದು ಎಂದರು. ಪಟ್ಟಣದಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಹೀಗಾಗಿ ಈ ಬಗ್ಗೆ ಪರಿಶೀಲನೆ ನಡೆಸಲು ಈಗಾಗಲೇ ಮುಖ್ಯಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಮ್ಮಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರ ರಸ್ತೆಯಲ್ಲಿ ಇರುವ ಪಂಚಾಯಿತಿಯ ಹಳೆ ಮಳಿಗೆಗಳನ್ನು ತೆರವುಗೊಳಿಸಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಅಲ್ಲದೆ ಈ ಮಳಿಗೆಗೆಗಳನ್ನು ಬಾಡಿಗೆ ನೀಡುವಾಗ ಬಡ ಬೀದಿ ವ್ಯಾಪಾರಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಪಟ್ಟಣದ ಮಾರ್ಷಲ್ ಕಾರ್ಯಪ್ಪ ವೃತ್ತವನ್ನು ತಕ್ಷಣವೇ ನಿರ್ಮಾಣ ಮಾಡಿ ಕೊಡವ ಸಮಾಜದ ಸಹಯೋಗದಲ್ಲಿ ಕಾರ್ಯಪ್ಪ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಗುವುದು. ಇನ್ನು ಪಟ್ಟಣದ ಕೆಲವು ರಸ್ತೆಗಳು ಹಾಳಾಗಿದ್ದು, ಅವುಗಳನ್ನು ತಕ್ಷಣವೇ ದುರಸ್ಥಿಗೊಳಿಸಲಾಗುವುದು. ಪಟ್ಟಣದ ಕಸವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡಲಾವುದು. ಗುಂಡುರಾವ್ ಲೇಔಟ್ನ್ನು ತಕ್ಷಣವೇ ಸುಂದರ ನಗರವಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ವಿಜಯ್ಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯರಾದ ಮಧುಸೂಧನ್, ರಶ್ಮಿ, ಲಲಿತಾ, ಗೋಪಾಲ್ ಮತ್ತು ಶಿವಶಂಕರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.