ADVERTISEMENT

ಪೌರಸೇವಾ ನೌಕರರ ಬೃಹತ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2011, 9:40 IST
Last Updated 21 ಜನವರಿ 2011, 9:40 IST

ಮಡಿಕೇರಿ: ಜಿಲ್ಲೆಯಲ್ಲಿ ಸರ್ಕಾರಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಪೌರ ಸೇವಾ ನೌಕರರ ಸಂಘದ ವತಿಯಿಂದ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪೌರ ನೌಕರರು ರಜೆ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರಿಂದ ನಗರಸಭೆ ಹಾಗೂ ಪಟ್ಟಣ ಪಂಚಾಯ್ತಿ ಕಚೇರಿಗಳು ಬಿಕೋ ಎನ್ನುವಂತಿದ್ದವು.

ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮತ್ತು ನೌಕರರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಮಡಿಕೇರಿ ನಗರಸಭೆ, ವಿರಾಜಪೇಟೆ, ಸೋಮವಾರಪೇಟೆ ಹಾಗೂ ಕುಶಾಲನಗರ ಪಟ್ಟಣ ಪಂಚಾಯ್ತಿಗಳ ಎಲ್ಲಾ ನೌಕರರು  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ದರು. ತಮಟೆ ಬಾರಿಸುವುದರೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪೌರ ಸಿಬ್ಬಂದಿಗಳು ಆ ಮೂಲಕ ಎಲ್ಲರ ಗಮನಸೆಳೆದರು.

ಆನಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಿರತ ಪೌರ ನೌಕರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪೌರ ನೌಕರರ ಸಂಘದ ಅಧ್ಯಕ್ಷ ನಿಸಾರ್ ಅಹಮದ್, ಕೊಡಗಿನಲ್ಲಿ ಪೌರ ಸಿಬ್ಬಂದಿಗಳ ಮೇಲೆ ಕೆಲವರು ಅನಗತ್ಯವಾಗಿ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಮುಂದೆ ಜಿಲ್ಲೆಯಲ್ಲಿ ಸರ್ಕಾರಿ ಅಧಿಕಾರಿಗಳು ಅಥವಾ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆದದ್ದೇ ಆದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಪೌರ ಸೇವಾ ನೌಕರರ ಸಂಘದ ಗೌರವಾಧ್ಯಕ್ಷ ಟಿ.ಎ. ರಾಮಚಂದ್ರ ಮಾತನಾಡಿದರು.

ಡಿಸಿ ಕಚೇರಿಯ ಲಿಂಗಪ್ಪ ಅವರಿಗೆ ನಂತರ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆ ಯಲ್ಲಿ ರಾಜ್ಯ ಸಮಿತಿ ಸದಸ್ಯ ಉಮ್ಮರ್, ಜಿಲ್ಲಾ ಸಂಘದ ಕಾರ್ಯದರ್ಶಿ ರಮೇಶ್, ಉಪಾಧ್ಯಕ್ಷ ಕೆ.ಕೆ. ಇರ್ಫಾನ್, ಮಡಿಕೇರಿ ತಾಲ್ಲೂಕು ಸಂಘದ ಅಧ್ಯಕ್ಷೆ ಕಾವೇರಿ, ವಿರಾಜಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಗಿರೀಶ್ ಪೂವಯ್ಯ, ಸೋಮವಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ದಾಮೋದರ್, ಕುಶಾಲನಗರ ವಲಯ ಸಮಿತಿ ಅಧ್ಯಕ್ಷ ಜಯರಾಂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.