ADVERTISEMENT

ಬ್ಯಾಂಕ್ ಎದುರು ಗ್ರಾಹಕರ ಪ್ರತಿಭಟನೆ

ಕೆನರಾ ಬ್ಯಾಂಕ್‌ನಲ್ಲಿ ಸಿಬ್ಬಂದಿ ಕೊರತೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2013, 9:13 IST
Last Updated 5 ಜುಲೈ 2013, 9:13 IST

ಕುಶಾಲನಗರ: ಸಮೀಪದ ಹೆಬ್ಬಾಲೆ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಸಾರ್ವಜನಿಕರ ಕೆಲಸ ಕಾರ್ಯಗಳು ಸಕಾಲದಲ್ಲಿ ಆಗುತ್ತಿಲ್ಲ ಎಂದು ಆರೋಪಿಸಿ ನೂರಾರು ಗ್ರಾಹಕರು ಬ್ಯಾಂಕಿನ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ರೈತರು ಈ ಶಾಖೆಯಲ್ಲಿ ಖಾತೆಗಳನ್ನು ಹೊಂದಿ ವ್ಯವಹರಿಸುತ್ತಿದ್ದಾರೆ. ಆದರೆ, ಕಳೆದ ಹಲವು ದಿನಗಳಿಂದ ಬ್ಯಾಂಕಿನಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಕೆಲಸ ಕಾರ್ಯಗಳು ವಿಳಂಬವಾಗುತ್ತಿವೆ. ಈ ಬಗ್ಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

`ಹೆಬ್ಬಾಲೆಯಲ್ಲಿ 30 ವರ್ಷಗಳಿಂದ ವ್ಯವಹಾರ ನಡೆಸುತ್ತಿರುವ ಶಾಖೆಯಲ್ಲಿ ಹೆಬ್ಬಾಲೆ, ತೊರೆನೂರು ಹಾಗೂ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ 29 ಗ್ರಾಮಗಳಿವೆ. ಈ ಗ್ರಾಮಗಳ ನೂರಾರು ರೈತರು ಈ ಬ್ಯಾಂಕಿನಲ್ಲೇ ವ್ಯವಹರಿಸುತ್ತಿದ್ದಾರೆ. ಆದರೆ, ಸಿಬ್ಬಂದಿ ಕೊರತೆಯಿಂದಾಗಿ ಕೆಲಸ ಕಾರ್ಯಗಳು ವಿಳಂಬವಾಗುತ್ತಿವೆ' ಎಂದು ತೊರೆನೂರಿನ ಗ್ರಾಮ ಪಂಚಾಯಿತಿ ಸದಸ್ಯ ಟಿ.ಬಿ.ಜಗದೀಶ್ ದೂರಿದರು.

ಒಂದು ವಾರದಲ್ಲಿ ಅಗತ್ಯ ಸಿಬ್ಬಂದಿ ನೇಮಕವಾಗದಿದ್ದಲ್ಲಿ ಬ್ಯಾಂಕಿಗೆ ಬೀಗ ಹಾಕಿ ಪ್ರತಿಭಟಿಸುವುದಾಗಿ ಗ್ರಾಹಕರು ಎಚ್ಚರಿಸಿದರು.

ಶಾಖಾ ಉಪ ಪ್ರಬಂಧಕ ಎನ್. ಹರೀಶ್ ಮಾತನಾಡಿ, ಬ್ಯಾಂಕಿನ ಎಲ್ಲ ಗ್ರಾಹಕರ ಕೆಲಸ ಕಾರ್ಯಗಳು ಸುಲಲಿತವಾಗಿ ಸಾಗಿವೆ. ಯಾವುದೇ ತೊಂದರೆ ಆಗಿಲ್ಲ. ಆದರೆ, ಹೆಚ್ಚಿನ  ಸಂಖ್ಯೆಯಲ್ಲಿ ಗ್ರಾಹಕರು ಇರುವುದರಿಂದ ಎಲ್ಲ ಗ್ರಾಹಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಗ್ರಾಹಕರ ದೂರುಗಳನ್ನು ಪ್ರಬಂಧಕರಲ್ಲಿ ಮಂಡಿಸಲಾಗಿದೆ. ಕೆಲವು ದಿನಗಳಲ್ಲಿ ಅಗತ್ಯ ಸಿಬ್ಬಂದಿ ನೇಮಿಸುವ ಅವರು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಗ್ರಾಹಕರಾದ ಮಂಜುನಾಥ್, ರೂಪ, ಪುಟ್ಟಗೌರಮ್ಮ, ಮಹಾದೇವಿ, ಹೆಬ್ಬಾಲೆ ಗ್ರಾಮ ಪಂಚಾಯಿತಿ ಸದಸ್ಯರಾದ ಸದಾಶಿವ ಮತ್ತು ಮಾಜಿ ಸದಸ್ಯ ಟಿ.ಜಿ. ಹರೀಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.