ADVERTISEMENT

ಭ್ರಷ್ಟಾಚಾರದಿಂದ ಸ್ವಾತಂತ್ರ್ಯಕ್ಕೆ ಕಪ್ಪು ಚುಕ್ಕೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2012, 5:25 IST
Last Updated 16 ಆಗಸ್ಟ್ 2012, 5:25 IST

ವಿರಾಜಪೇಟೆ: ಉನ್ನತ ಸಂಸ್ಕೃತಿ, ಪರಂಪರೆಯನ್ನು ಹೊಂದಿರುವ ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರಕಿ ಆರೂವರೆ ದಶಕ ಕಳೆದರೂ ಭಯೋತ್ಪಾದನೆ, ಭ್ರಷ್ಟಾಚಾರಗಳು ಸ್ವಾತಂತ್ರ್ಯಕ್ಕೆ ಕಪ್ಪುಚುಕ್ಕೆಯಂತಾಗಿವೆ ಎಂದು ತಹಶೀಲ್ದಾರ್ ಎಚ್.ಸಿ.ಚಾಮು ಹೇಳಿದರು.

ವಿರಾಜಪೇಟೆ ತಾಲ್ಲೂಕು ಆಡಳಿತ ಬುಧವಾರ ಇಲ್ಲಿಯ ತಾಲ್ಲೂಕು ಮೆೃದಾನದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ದೇಶ ಇಂದು ವೈಜ್ಞಾನಿಕವಾಗಿ, ಆರ್ಥಿಕವಾಗಿ ಪ್ರಗತಿ ಹೊಂದಿದ್ದರೂ ದೇಶದಲ್ಲಿ ಆಗಾಗ ನಡೆಯುತ್ತಿರುವ ಅಹಿತಕರ ಘಟನೆಗಳಿಂದ ಸ್ವಾತಂತ್ರ್ಯವೇ ಅರ್ಥಹೀನವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಭೆಯನ್ನು ಉದ್ದೇಶಿಸಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಧರಣಿಕಟ್ಟಿ, ಅಧ್ಯಕ್ಷತೆ ವಹಿಸಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿ.ಕೆ.ಸತೀಶ್‌ಕುಮಾರ್ ಮಾತನಾಡಿದರು.

ವೇದಿಕೆಯಲ್ಲಿ ಚೇಂಬರ್ ಆಫ್ ಕಾಮರ್ಸ್‌ನ ಸ್ಥಾನೀಯ ಸಮಿತಿ ಅಧ್ಯಕ್ಷ ಕಾಶಿ ಕಾವೇರಪ್ಪ, ಮಾಜಿ ಯೋಧರ ಜಿಲ್ಲಾ ಸಮಿತಿ ಅಧ್ಯಕ್ಷ ಸಿ.ಗಣೇಶ್, ನಂಜಪ್ಪ, ಪಶುವೈದ್ಯಾಧಿಕಾರಿ ಡಾ.ಕೆ.ಕೆ.ಅಯ್ಯಪ್ಪ, ಪಂಚಾಯಿತಿ ಉಪಾಧ್ಯಕ್ಷೆ ಕೌಶರ್, ಸರ್ಕಲ್ ಇನ್‌ಸ್ಪೆಕ್ಟರ್ ಗಂಗಾಧರಸ್ವಾಮಿ, ಸಬ್ ಇನ್‌ಪೆಕ್ಟರ್ ಅನೂಪ್ ಮಾದಪ್ಪ ಪಟ್ಟಣ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮಾಜಿ ಯೋಧರಾದ ಬಿ.ಅಪ್ಪಾಜಿ, ಕೆ.ಗಣಪತಿ ಹಾಗೂ ಎ.ಟಿ.ಬೋಪಯ್ಯ ಅವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ ಸ್ವಾಗತಿಸಿದರು. ಉಪನ್ಯಾಸಕ ಚಾರ್ಲ್ಸ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಬಿ.ಎಸ್.ದೇವರ್ ವಂದಿಸಿದರು.

ಸಭೆಗೂ ಮುನ್ನ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಯಿತು. ಸಭೆಯ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.