ಮಡಿಕೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷಾಚರಣೆ ಪ್ರಯುಕ್ತ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಬುಧವಾರ ಅವರ ಬದುಕು, ಸಾಧನೆ ಬಿಂಬಿಸುವ ಧ್ವನಿ ಬೆಳಕು ಕಾರ್ಯಕ್ರಮ ಗಮನ ಸೆಳೆಯಿತು.
ಗಾಂಧೀಜಿ ಅವರ ಹುಟ್ಟು, ಬೆಳವಣಿಗೆ, ವಿದ್ಯಾಭ್ಯಾಸ, ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ವಾಪಸಾದ ಸಂದರ್ಭದಲ್ಲಿ ದೇಶದಲ್ಲಿನ ಪರಿಸ್ಥಿತಿ, ಕ್ವಿಟ್ ಇಂಡಿಯಾ ಚಳವಳಿ, ಸ್ವಾತಂತ್ರ್ಯಕ್ಕಾಗಿ ಅಹಿಂಸಾ ಹೋರಾಟ, ಹಲವು ಸಂದರ್ಭಗಳಲ್ಲಿ ಉಪವಾಸ ಸತ್ಯಾಗ್ರಹ... ಹೀಗೆ ಮಹಾತ್ಮ ಗಾಂಧೀಜಿ ಅವರ ಬದುಕು ಸಾಧನೆಗಳನ್ನು ಒಳಗೊಂಡ ಧ್ವನಿ-ಬೆಳಕಿನ ಚಿತ್ತಾರ ನೋಡುಗರ ಮನಸ್ಸು ತಣಿಸಲು ಯಶಸ್ವಿ ಆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಹುಟ್ಟಿನಿಂದಲ್ಲೇ ಹೋರಾಟದ ಚಿಂತನೆಗಳನ್ನು ಮೈಗೂಡಿಸಿಕೊಂಡು ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಅವರ ತತ್ವ ಸಿದ್ಧಾಂತಗಳ ತಿಳಿದುಕೊಳ್ಳಬೇಕು ಎಂದು ಹೇಳಿದರು.
ಸರ್ವೋದಯ ಸಮಿತಿ ಸದಸ್ಯ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿದರು. ವಾಸು, ಅಂಬೆಕಲ್ ಕುಶಾಲಪ್ಪ, ಅಂಬೆಕಲ್ ನವೀನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗೋಪಾಲ ಕೃಷ್ಣ, ರಾಜ್ಕುಮಾರ್ ರೆಡ್ಡಿ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ದರ್ಶನ್, ಕಾರ್ಮಿಕ ಇಲಾಖೆ ತಾಲ್ಲೂಕು ಅಧಿಕಾರಿ ಯತ್ನಟ್ಟಿ ಹಾಜರಿದ್ದರು. ಚಿನ್ನಸ್ವಾಮಿ ಸ್ವಾಗತಿಸಿದರು. ಸೌಮ್ಯಾ ಕಾರ್ಯಕ್ರಮ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.