ADVERTISEMENT

ಮಹಿಳಾ ಆಯೋಗ ವರದಿ ತಿರಸ್ಕರಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2012, 19:30 IST
Last Updated 21 ಆಗಸ್ಟ್ 2012, 19:30 IST

ಮಡಿಕೇರಿ: ಮಂಗಳೂರಿನ ಹೋಂ ಸ್ಟೇ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ನೀಡಿರುವ ವರದಿಯನ್ನು ತಿರಸ್ಕರಿಸಬೇಕು ಎಂದು ಭಾರತೀಯ ಮಹಿಳಾ ಒಕ್ಕೂಟದ ಕೊಡಗು ಜಿಲ್ಲಾ ಮಂಡಳಿ ಕಾರ್ಯಕರ್ತರು ಸರ್ಕಾರವನ್ನು ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಮಂಡಳಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಂಡಳಿಯ ಅಧ್ಯಕ್ಷೆ ಅಲ್ಫನ್ಸಾ ಕುಟ್ಟಪ್ಪನ್ ಅವರು, ಮಂಗಳೂರಿನ ಹೋಂ ಸ್ಟೇಯಲ್ಲಿ ಇತ್ತೀಚಿಗೆ ಯುವತಿಯರ ಮೇಲೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೀಡಿದ ವರದಿಗೆ ತದ್ವಿರುದ್ಧವಾಗಿ ಮಹಿಳಾ ಆಯೋಗದ ಅಧ್ಯಕ್ಷರು ವರದಿ ಸಲ್ಲಿಸಿದ್ದಾರೆ ಎಂದುಆರೋಪಿಸಿದರು.

ಈ ಕೃತ್ಯದಿಂದಾಗಿ ರಾಜ್ಯದ ಜನತೆ ತಲೆ ತಗ್ಗಿಸುವಂತಾಗಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಮಹಿಳಾ ಆಯೋಗದ ಅಧ್ಯಕ್ಷರನ್ನು ಬದಲಾಯಿಸಿ ಶೋಷಿತರ ಪರವಾಗಿ ಕೆಲಸ ಮಾಡುವಂತಹ ಮಹಿಳೆಯನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಪಡಿತರ ಚೀಟಿಗೆ ಒತ್ತಾಯ: ತಾಲ್ಲೂಕಿನ ಮರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಕಾಡು ಪ್ರದೇಶದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವ ಸುಮಾರು 37 ಆದಿವಾಸಿ ಕುಟುಂಬಗಳಿಗೆ ಪಡಿತರ ಚೀಟಿ ಇಲ್ಲವೆಂದು ತಿಳಿಸಿದರು.

ಈ ಗ್ರಾಮ ಪಂಚಾಯಿತಿ ಕೆಲವು ಸದಸ್ಯರು ಪಡಿತರ ಚೀಟಿ ನೀಡಲು ಅಡ್ಡಿ ಪಡಿಸುತ್ತಿದ್ದು, ಅವರ ಸದಸ್ಯತ್ವವನ್ನು ರದ್ದು ಪಡಿಸಿ, ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಅವರು ಒತ್ತಾಯಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.