ಸೋಮವಾರಪೇಟೆ: 2008-09ನೇ ಸಾಲಿನಲ್ಲಿ ಎಸ್.ಜಿ.ಮೇದಪ್ಪ ವಿಧಾನ ಪರಿಷತ್ ಸದಸ್ಯರಾಗಿದ್ದ ಅವಧಿಯಲ್ಲಿ ಶಾಸಕರ ಹಾಗೂ ಗಡಿ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ಕಾಮಗಾರಿಗಳನ್ನು ನಿರ್ವಹಿಸದೆ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಎಂ.ಲೋಕೇಶ್ ಆರೋಪಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಆರೋಪಗಳಿಗೆ ಪೂರಕವಾದ ದಾಖಲೆಗಳಿದ್ದು, ಈ ಕುರಿತು ಲೋಕಾಯುಕ್ತರು ಹಾಗೂ ಸೇರಿದಂತೆ ಸಂಬಂಧಿಸಿದ ಇಲಾಖೆಗೂ ದೂರು ಸಲ್ಲಿಸಿದ್ದು, ಉನ್ನತ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
ಅವ್ಯವಹಾರ ನಡೆದಿರುವ ಕುರಿತು 16 ಕಾಮಗಾರಿಗಳ ಪಟ್ಟಿ ಬಿಡುಗಡೆ ಮಾಡಿದ ಲೋಕೇಶ್, ಹಲವೆಡೆ ಒಂದೇ ಕಾಮಗಾರಿಗೆ ಎರಡು ಕ್ರಿಯಾಯೋಜನೆ ತಯಾರಿಸಿ ಬಿಲ್ ಮಾಡಲಾಗಿದೆ. ಮುಂದಿನ 15 ದಿನಗಳೊಳಗೆ ಸಮಗ್ರ ತನಿಖೆ ನಡೆಸದಿದ್ದರೆ ತಹಶೀಲ್ದಾರ್ ಕಚೇರಿ ಎದುರು ಪಕ್ಷದ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಅವ್ಯವಹಾರದ ಬಗ್ಗೆ ದನಿ ಎತ್ತಿದ ಕಾಂಗ್ರೆಸ್ ಸದಸ್ಯೆ ಸರಿತಾ ಪೂಣಚ್ಚ ಅವರನ್ನು ಸಭೆಯಿಂದ ಹೊರ ಹೋಗುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸೂಚಿಸಿರುವುದನ್ನು ಖಂಡಿಸಿದರು.
ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಎ. ಲಾರೆನ್ಸ್, ತಾಲ್ಲೂಕು ಪಂಚಾಯಿತಿ ಸದಸ್ಯ ಜೆ.ಆರ್.ಫಾಲಾಕ್ಷ, ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಕಾರ್ಯಾಧ್ಯಕ್ಷ ಕೆ.ಎ.ಯಾಕೂಬ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಎಲ್.ಜಿ.ಮದನ್ ಹಾಗೂ ನಗರ ಕಾರ್ಯದರ್ಶಿ ನಾಗರಾಜ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.