ಕುಶಾಲನಗರ: ಸಮೀಪದ ಮಾಲ್ದಾರೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ 22 ವರ್ಷದ ಹೆಣ್ಣಾನೆಯೊಂದು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ಬೆಳಕಿಗೆ ಬಂದಿದೆ.
ಈ ಆನೆಯು ಎರಡು ದಿನಗಳ ಹಿಂದೆಯೇ ಸತ್ತಿದೆ. ಆದರೆ ಗಮನಕ್ಕೆ ಬಾರದೇ ಮಂಗಳವಾರ ಸಂಜೆ ಗಸ್ತು ತಿರುಗುವ ಸಂದರ್ಭದಲ್ಲಿ ವಾಸನೆ ಬಂದಿದ್ದರಿಂದ ಪರಿಶೀಲನೆ ನಡೆಸಿದಾಗ ವಿಷಯ ಬೆಳಕಿಗೆ ಬಂದಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ಉಪ-ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಧನಂಜಯ್, ಕುಶಾಲನಗರ ವಲಯ ಅರಣ್ಯಾಧಿಕಾರಿ ಎಂ.ಎಂ. ಅಚ್ಚಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಣಸೂರು ವನ್ಯಜೀವಿ ವಿಭಾಗ ವೈದ್ಯಾಧಿಕಾರಿ ಡಾ.ಎಸ್. ಉಮಾಶಂಕರ್ ಅವರು ಸ್ಥಳದಲ್ಲಿ ಆನೆ ಮರಣೋತ್ತರ ಪರೀಕ್ಷೆ ನಡೆಸಿದ್ದು ಆನೆ ಅನಾರೋಗ್ಯದಿಂದ ಸತ್ತಿರುವುದಾಗಿ ತಿಳಿಸಿದ್ದಾರೆ.
ನಂತರ ಸ್ಥಳದಲ್ಲಿಯೇ ಅರಣ್ಯ ಸಿಬ್ಬಂದಿಗಳು, ಮಾವುತರು ಆನೆಯ ಅಂತ್ಯಸಂಸ್ಕಾರ ನೆರವೇರಿಸಿದರು. ಉಪ-ವಲಯ ಅರಣ್ಯ ಅಧಿಕಾರಿ ಎಸ್.ಎ. ಸಂದೀಪ್ ಚಾಲಕ ನಾರಾಯಣ ರೈ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.