ADVERTISEMENT

ಮುಖ್ಯಮಂತ್ರಿ ಸಭೆ ಇಂದು

ಕಸ್ತೂರಿ ರಂಗನ್ ವರದಿ ಅನುಷ್ಠಾನ

​ಪ್ರಜಾವಾಣಿ ವಾರ್ತೆ
Published 2 ಜನವರಿ 2014, 8:37 IST
Last Updated 2 ಜನವರಿ 2014, 8:37 IST

ಮಡಿಕೇರಿ: ಕಸ್ತೂರಿ ರಂಗನ್‌ ವರದಿಯ ಅನುಷ್ಠಾನ ಕುರಿತು ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳ ನಾಯಕರು ಹಾಗೂ ಜನಪ್ರತಿನಿಧಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 2ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ ಎಂದು ಸಂಸದ ಎಚ್‌. ವಿಶ್ವನಾಥ್‌ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್‌ ವರದಿ ಕುರಿತು ಜನರ ಅಭಿಪ್ರಾಯ ಪಡೆಯಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಕೊಡಗು ಜಿಲ್ಲೆಯಲ್ಲಿ ರಚಿಸಿಕೊಂಡಿರುವ ‘ಕಸ್ತೂರಿ ರಂಗನ್‌ ವರದಿ ವಿರುದ್ಧ ಹೋರಾಟ ಸಮಿತಿಯ ಸದಸ್ಯರನ್ನೂ ಆಹ್ವಾನಿಸಲಾಗಿದೆ ಎಂದು ಅವರು ತಿಳಿಸಿದರು.

ಕೇಂದ್ರ ಪರಿಸರ ಖಾತೆ ಸಚಿವ ಎಂ. ವೀರಪ್ಪ ಮೊಯಿಲಿ ಅವರು ರಾಜ್ಯಗಳ ಅಭಿಪ್ರಾಯ ಪಡೆಯಲು ಮುಂದಾಗಿರುವುದನ್ನು ಸ್ವಾಗತಿಸಿದ ಅವರು, ರಾಜ್ಯಗಳ ಅಭಿಪ್ರಾಯದಂತೆ ಕೇಂದ್ರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.

ಪುಸ್ತಕ ಬಿಡುಗಡೆ: ನನ್ನ ನಾಲ್ಕನೇ ಪುಸ್ತಕ ‘ಮಲ್ಲಿಗೆ ಮಾತು’ ಕೃತಿ  ಜ. 4ರಂದು ಬೆಳಿಗ್ಗೆ 10.30ಕ್ಕೆ ಮಡಿಕೇರಿಯ ಕೂರ್ಗ್‌ ಇಂಟರ್‌ನ್ಯಾಷನಲ್‌ ಹೋಟೆಲ್‌ನಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಅವರು ತಿಳಿಸಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಅವರು ಪುಸ್ತಕವನ್ನು ಬಿಡಗಡೆ ಮಾಡಲಿದ್ದಾರೆ. ಅತಿಥಿಯಾಗಿ ಸಾಹಿತಿ ಸಿ.ಪಿ. ಬೆಳ್ಳಿಯಪ್ಪ ಪಾಲ್ಗೊಳ್ಳಲಿದ್ದಾರೆ. ಕವಿ, ವಿಮರ್ಶಕ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಅಧ್ಯಕ್ಷತೆ ವಹಿಸಲಿದ್ದಾರೆ. ಕೃತಿ ಪರಿಚಯವನ್ನು ಕವಿ, ಲೇಖಕ ಅಬ್ದುಲ್‌ ರಶೀದ್‌ ಮಾಡಿಕೊಡಲಿದ್ದಾರೆ ಎಂದು ಹೇಳಿದರು.

ಮಡಿಕೇರಿ ನಗರಸಭೆ ಚುನಾವಣೆಯಲ್ಲಿ 10 ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜನಾದೇಶ ನೀಡಿದ ಜನತೆಗೆ ಸಂಸದ ಎಚ್‌. ವಿಶ್ವನಾಥ್‌ ಕೃತಜ್ಞತೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.