ADVERTISEMENT

ರಸ್ತೆ ಕಾಮಗಾರಿ: ಶೀಘ್ರ ಚಾಲನೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2011, 5:40 IST
Last Updated 22 ಸೆಪ್ಟೆಂಬರ್ 2011, 5:40 IST

ಮಡಿಕೇರಿ: ಅಕ್ಟೋಬರ್ ಕೊನೆ ಅಥವಾ ನವೆಂಬರ್ ಮೊದಲ ವಾರದಲ್ಲಿ ಹಟ್ಟಿಹೊಳೆ-ಹಮ್ಮಿಯಾಲ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಜಿ.ಪಂ. ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ ತಿಳಿಸಿದ್ದಾರೆ.

ಮಕ್ಕಂದೂರಿನ ವ್ಯವಸಾಯ ಸೇವಾ ಸಹಕಾರ ಸಂಘದ ಸಭಾಭವನದಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಟ್ಟಿಹೊಳೆ-ಹಮ್ಮಿಯಾಲ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ದೂರು-ದುಮ್ಮೋನಗಳು ಕೇಳಿ ಬಂದಿದ್ದು, ಈ ರಸ್ತೆ ಕಾಮಗಾರಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ. ಅವ್ಯವಹಾರಕ್ಕೆ ಆಸ್ಪದ ನೀಡುವುದೂ ಇಲ್ಲ ಎಂದು ಅವರು ಹೇಳಿದರು.

ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆ, ಕುಡಿಯುವ ನೀರು, ಸೇತುವೆ ನಿರ್ಮಾಣ ಮತ್ತಿತರ ಕಾಮಗಾರಿಗಳಿಗೆ ಸುಮಾರು 61 ಲಕ್ಷ ರೂಪಾಯಿಗಳ ಕ್ರಿಯಾಯೋಜನೆ ಮಾಡಲಾಗಿದ್ದು, ಹಾಗೆಯೇ ಲೋಕೋಪಯೋಗಿ ಇಲಾಖೆಯಡಿ ರೂ. 30ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳ ಲಾಗುತ್ತದೆ ಎಂದರು.

ಈ ವ್ಯಾಪ್ತಿಯ ಅಂಗನವಾಡಿ, ಶಾಲಾ ಕೊಠಡಿ, ಕಾಂಪೌಂಡ್, ಶೌಚಾಲಯ ಮತ್ತಿತರ ಕಾಮಗಾರಿ ಗಳನ್ನು ಇನ್ನೂ 3 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಅವರು ಜಿ.ಪಂ.ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.

ಮಡಿಕೇರಿ ತಾಲ್ಲೂಕು ಅಕ್ರಮ-ಸಕ್ರಮ ಸಮಿತಿಯ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ  ಅವರು ಮಾತ ನಾಡಿ ಮಕ್ಕಂದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಮುಕ್ಕೋಡ್ಲು ಗ್ರಾಮಕ್ಕೆ ಹೆಚ್ಚಿನ ಅನುದಾನ ಬಿಡುಗಡೆಯಾಗಿದ್ದು, ಮಕ್ಕಂದೂರು-ಹಮ್ಮಿಯಾಲ ಗ್ರಾಮಗಳಿಗೂ ಅನುದಾನವನ್ನು ಸಮಾನವಾಗಿ ಹಂಚಿಕೆ ಮಾಡಬೇಕು ಎಂದರು.
ಮಡಿಕೇರಿ ತಾ.ಪಂ.ಅಧ್ಯಕ್ಷರಾದ ಹೊಸಮನೆ ಕವಿತಾ ಪ್ರಭಾಕರ್ ಅವರು ಮಾತನಾಡಿದರು.
 
ತಾ.ಪಂ. ಕಾರ್ಯಪಾಲಕ ಅಭಿಯಂತರರಾದ ಮಹದೇವಸ್ವಾಮಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರಮೋದ್, ಪಶು ವೈದ್ಯಾಧಿಕಾರಿ ಡಾ.ಚಿದಾನಂದ, ಕೃಷಿ ಇಲಾಖೆಯ ಗಿರೀಶ್, ಸೆಸ್ಕ್‌ನ ಸಹಾಯಕ ಅಭಿಯಂತರರಾದ ಸುರೇಶ್, ಜಿ.ಪಂ. ಸಹಾಯಕ ಅಭಿಯಂತರರಾದ ಶ್ರೀಕಂಠಯ್ಯ, ವನ್ಯಜೀವಿ ವಿಭಾಗದ ಚಂದ್ರಶೇಖರ, ಮೀನುಗಾರಿಕೆ ಇಲಾಖೆಯ ದರ್ಶನ್, ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಅವರು ತಮ್ಮ ತಮ್ಮ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸತ್ಯ ನಾರಾಯಣ ಅವರು ಸಭೆಯಲ್ಲಿ ಮಾತನಾಡಿದರು. ಮಕ್ಕಂದೂರು ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ, ತಾ.ಪಂ. ಸದಸ್ಯೆ ರೇಣುಕಾ ಚೆನ್ನಯ್ಯ, ಪದ್ಮಾವತಿ, ಕೆ. ನಿಡುಗಣೆ ಗ್ರಾ.ಪಂ. ಅಧ್ಯಕ್ಷರಾದ ಬೋಪಣ್ಣ, ಸಂದೇಶ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.