ಸೋಮವಾರಪೇಟೆ: ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿರುವ 11 ವಾರ್ಡ್ಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ತಲಾ 1 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ಮೂರ್ತಿ ತಿಳಿಸಿದರು.
ಸ್ಥಳೀಯ ಪ.ಪಂ.ಯ 2ನೇ ಅವಧಿಯ ಅಧ್ಯಕ್ಷರಾಗಿ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶೇಷ ಸಭೆಯಲ್ಲಿ ಮಾತನಾಡಿದರು. ಪಂಚಾಯಿತಿಯ ಸಾಮಾನ್ಯ ನಿಧಿಯಿಂದ ಪ್ರತಿ ವಾರ್ಡ್ಗೆ ಅನುದಾನ ಕಲ್ಪಿಸಬೇಕು ಎಂದು ಸದಸ್ಯ ಫಯಾಜ್ಖಾನ್ ಮನವಿಗೆ ಸ್ಪಂದಿಸಿದ ಅಧ್ಯಕ್ಷರು ಕೂಡಲೇ ಅಗತ್ಯ ಕಾಮಗಾರಿ ಕೈಗೊಳ್ಳಲು ತಲಾ 1 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಹೇಳಿದರು.
ಪ್ರಸ್ತುತ ಸಾಲಿನಲ್ಲಿ ಪಂಚಾಯಿತಿ ವ್ಯಾಪ್ತಿಯ ವಾರ್ಡ್ಗಳಿಗೆ ವಿವಿಧ ಯೋಜನೆಯಡಿ ತಲಾ 12 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ನಿಗದಿಪಡಿಸಲಾಗಿದೆ. ಈ ತಿಂಗಳ ಕೊನೆಯ ವಾರದಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ನಗರದ ಮಹದೇಶ್ವರ ಬಡಾವಣೆಯಲ್ಲಿ ಗುರುತಿಸಿರುವ ಜಾಗದಲ್ಲಿ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.
ನಗರದ ಖಾಸಗಿ ಬಸ್ ನಿಲ್ದಾಣದ ಮೂರು ಪಾರ್ಶ್ವಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ಆದಷ್ಟು ಶೀಘ್ರವಾಗಿ ಮುಚ್ಚಿ ಇಂಟರ್ಲಾಕ್ ವ್ಯವಸ್ಥೆ ಮಾಡಲಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದ್ದು, ಅನುಮತಿ ಸಿಕ್ಕಿದ ಕೂಡಲೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು. ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಹಿಂದೆಂದಿಗಿಂತಲೂ ಈಗ ಹೆಚ್ಚಿನ ಅಭಿವೃದ್ಧಿ ಕಾಣುತ್ತಿದೆ. ಹೈಟೆಕ್ ಮಾರುಕಟ್ಟೆ ಕಾಮಗಾರಿ ಕೆಲವೇ ಸಮಯದಲ್ಲಿ ಪೂರ್ಣಗೊಂಡು ಜನೋಪಯೋಗಕ್ಕೆ ಲಭ್ಯವಾಗಲಿದೆ ಎಂದು ನುಡಿದರು.
ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ವೇಗ ಕಲ್ಪಿಸುವುದರ ಜೊತೆಗೆ ಎಲ್ಲ ಸದಸ್ಯರು ಮತ್ತು ಸಾರ್ವಜನಿಕರು ಉತ್ತಮ ಸಹಕಾರ ನೀಡಿದ್ದಾರೆ ಎಂದರು. ಪಂಚಾಯಿತಿ ಉಪಾಧ್ಯಕ್ಷೆ ನಳಿನಿ ಗಣೇಶ್, ಮುಖ್ಯಾಧಿಕಾರಿ ಕೆಂಚಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.