ಮಡಿಕೇರಿ: ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸುವ ಉದ್ದೇಶದಿಂದ ‘ಸೆಸ್ಕ್’ ಉಪ ವಿಭಾಗ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.ಸಭೆಯಲ್ಲಿ ಗ್ರಾಹಕರು ದೂರು ನೀಡುವ ಬದಲು, ಅಧಿಕಾರಿಗಳೇ ಗ್ರಾಹಕರಿಗಾಗಿ ಕಾದು ಕುಳಿತಿದ್ದುದು ವಿಶೇಷವಾಗಿತ್ತು. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1ರ ವರೆಗೆ ದೂರು ಸ್ವೀಕರಿಸಲು ಸಮಯ ನಿಗದಿಪಡಿಸಲಾಗಿತ್ತು. ಈ ಅವಧಿಯಲ್ಲಿ ಒಂದೇ ಒಂದು ದೂರು ಕೂಡ ದಾಖಲಾಗಲಿಲ್ಲ.
ಎರಡು ತಿಂಗಳ ಹಿಂದೆಯಷ್ಟೇ ನಡೆಸಿದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರು ಆರು ದೂರು ಸಲ್ಲಿಸಿದ್ದರು. ಅವುಗಳನ್ನು ನಂತರ ಇತ್ಯರ್ಥಪಡಿಸಲಾಗಿದೆ. ಆದರೆ, ಈ ಬಾರಿ ಜನಸಂಪರ್ಕ ಸಭೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿದ್ದರೂ ಯಾವುದೇ ದೂರುಗಳು ಬಾರದಿರುವ ಬಗ್ಗೆ ‘ಸೆಸ್ಕ್’ ಅಧಿಕಾರಿಗಳು ಅಚ್ಚರಿ ವ್ಯಕ್ತಪಡಿಸಿದರು.
ಈ ಹಿಂದೆ ಜನಸಂಪರ್ಕ ಸಭೆಗೆ ಬಂದಂತಹ ದೂರುಗಳನ್ನು ಪರಿಶೀಲಿಸಿ ಬಗೆಹರಿಸಲಾಗಿದೆ. ಆದರೆ, ಈ ಬಾರಿಯ ಜನಸಂಪರ್ಕ ಸಭೆಗೆ ಗ್ರಾಹಕರೇ ಬಂದಿಲ್ಲ. ಆದರೂ, ಗ್ರಾಹಕರಿಂದ ಯಾವುದೇ ದೂರುಗಳು ಬಂದಲ್ಲಿ ಅದನ್ನು ತಕ್ಷಣವೇ ಪರಿಹರಿಸಲಾಗುವುದು ಎಂದು ‘ಸೆಸ್ಕ್’ನ ಕಾರ್ಯನಿರ್ವಾಹಕ ಎಂಜಿನಿಯರ್ ದಿವಾಕರ್ ತಿಳಿಸಿದ್ದಾರೆ.
ಸಭೆಯಲ್ಲಿ ‘ಸೆಸ್ಕ್’ನ ಮಡಿಕೇರಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರದೀಪ್ ಹಾಗೂ ಮಡಿಕೇರಿ ನಗರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.