ಸೋಮವಾರಪೇಟೆ: ಚುನಾವಣೆಯು ಯಾವುದೇ ಸಂದರ್ಭದಲ್ಲಾದರೂ ಎದುರಾಗುವ ಸಾಧ್ಯತೆಯಿದ್ದು ಕಾರ್ಯಕರ್ತರು ಸ್ವಪ್ರತಿಷ್ಠೆ ಬದಿಗಿಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಮಾಜಿ ಸಚಿವ ಬಿ.ಎ.ಜೀವಿಜಯ ಸಲಹೆ ನೀಡಿದರು.
ಸಮೀಪದ ತೋಳೂರುಶೆಟ್ಟಳ್ಳಿಯ ವಿಎಸ್ಎಸ್ಎನ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜೆಡಿಎಸ್ ವಲಯ ಮಟ್ಟದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಆಡಳಿತದಿಂದ ಜನತೆ ಭ್ರಮ ನಿರಸನಗೊಂಡ್ದ್ದಿದಾರೆ. ರಾಜ್ಯದ ರೈತರ, ಕಾರ್ಮಿಕರ, ಶೋಷಿತರ ಹಾಗೂ ಹಿಂದುಳಿದ ವರ್ಗಗಳ ಏಳಿಗೆ ಜೆಡಿಎಸ್ನಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮ ಮತ್ತು ಹೋಬಳಿ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದರು. ರಾಜ್ಯದಲ್ಲಿ ಉತ್ತಮ ಆಡಳಿತ ದೊರಕಬೇಕಾದರೆ ಜನತೆ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷ ಬೆಂಬಲಿಸುವುದು ಅನಿವಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ ಬಿಜೆಪಿ ಆಡಳಿತದಲ್ಲಿ ಗ್ರಾಮ ಪಂಚಾಯಿತಿಯಿಂದ ಹಿಡಿದು ನಗರ ಸಭೆಯವರೆಗೆ ಭ್ರಷ್ಟಾಚಾರ ಮಿತಿ ಮೀರಿದೆ.
ಜಿಲ್ಲಾ ಉಸ್ತುವಾರಿ ಸಚಿವರು 700 ಕೋಟಿ ರೂಪಾಯಿಗಳ ಶ್ವೇತಪತ್ರವನ್ನು 15 ದಿನದೊಳಗೆ ಪ್ರಕಟಿಸುವುದಾಗಿ ಹೇಳಿದ್ದರು. ಆದರೆ ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದರು.
ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ, ರಾಜ್ಯ ಸಮಿತಿ ಸದಸ್ಯೆ ಎಚ್.ಬಿ.ಜಯಮ್ಮ, ಜಿಲ್ಲಾ ಸಮಿತಿ ಸದಸ್ಯೆ ಜಲಾ ಹೂವಯ್ಯ, ಜಿಲ್ಲಾ ಯುವ ಜೆಡಿಎಸ್ ಕಾರ್ಯಾಧ್ಯಕ್ಷ ಎನ್.ಆರ್.ಅಜೀಶ್ ಕುಮಾರ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಪವಿತ್ರಾ ದೇವೇಂದ್ರ, ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಗದೀಶ್, ಸದಸ್ಯರಾದ ಹರೀಶ್, ಭಾನು ಮಾಚಯ್ಯ, ರಾಧ, ಪಾರ್ವತಿ, ಮುಖಂಡ ಕೆ.ಟಿ.ಪರಮೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.