ಕುಶಾಲನಗರ: ರಾಷ್ಟ್ರೀಯ ಅಂಧತ್ವ ನಿವಾರಣಾ ಆಶಾಕಿರಣ ಕಾರ್ಯಕ್ರಮದಡಿ ಮಡಿಕೇರಿ ವೈದ್ಯಕೀಯ ಕಾಲೇಜು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಾರ್ವಜನಿಕ ಆಸ್ಪತ್ರೆಗಳ ಎಂಟು ಕಡೆ ಏಕಕಾಲದಲ್ಲಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಉದ್ಘಾಟಿಸಲಾಯಿತು.
ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಸ್ತ್ರ ಚಿಕಿತ್ಸಕರೂ ಆದ ಆಡಳಿತ ವೈದ್ಯಾಧಿಕಾರಿ ಡಾ. ಮಧುಸೂಧನ್ ಕಾರ್ಯಕ್ರಮ ಉದ್ಘಾಟಿಸಿ ಕನ್ನಡಕವನ್ನು ಉಚಿತವಾಗಿ ವಿತರಿಸಿದರು.
ಅಂಧತ್ವ ನಿವಾರಣಾ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ ಡಾ. ಆನಂದ್ ಮಾತನಾಡಿ, ‘ರಾಜ್ಯ ಮತ್ತು ಜಿಲ್ಲೆಯನ್ನು ಅಂಧತ್ವಮುಕ್ತವನ್ನಾಗಿಸುವುದು ‘ಆಶಾಕಿರಣ’ ಕಾರ್ಯಕ್ರಮದ ಮೂಲ ಉದ್ದೇಶವಾಗಿದ್ದು,
ಕೊಡಗಿನಲ್ಲಿ ಏಪ್ರಿಲ್ನಿಂದ ಇಲ್ಲಿಯವರೆಗೆ 4,750 ಜನರಿಗೆ ದೃಷ್ಟಿ ಪರೀಕ್ಷೆ ಮಾಡಲಾಗಿದೆ. 851 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಗಿದೆ. 114 ಫಲಾನುಭವಿಗಳಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ’ ಎಂದು ಹೇಳಿದರು.
‘ಕಣ್ಣಿನ ಸಮಸ್ಯೆ ಇದ್ದಲ್ಲಿ ಉಚಿತವಾಗಿ ಪರೀಕ್ಷೆ ಮಾಡಲಾಗುವುದು, ದೃಷ್ಟಿದೋಷವಿದ್ದಲ್ಲಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು. ಕಣ್ಣಿನ ಪೊರೆ ಇದ್ದಲ್ಲಿ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಡಯಾಬಿಟಿಕ್ ರೆಟಿನೋಪತಿ ಇದ್ದಲ್ಲಿ ಉನ್ನತ ಚಿಕಿತ್ಸೆಗೆ ಸೂಚಿಸಲಾಗುವುದು’ ಎಂದರು.
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಡಾ. ಶಿವಕುಮಾರ್, ಡಾ.ಕೀರ್ತಿರಾಜ್ ಡಾ. ಪ್ರತಿಭಾ, ಡಾ. ಅಂಜಲಿ ಕೃಷ್ಣಯ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ನೇತ್ರಾಧಿಕಾರಿ ಆದರ್ಶ್, ಲಿಪಿಕ ನೌಕರ ಷಣ್ಮುಖ ಮತ್ತು ವಿಶು ಕುಮಾರ್, ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಾ. ಜಮೀರ್, ಡಾ.ಶಿವಪ್ರಸಾದ್, ಡಾ. ಕಿರಣ್, ಡಾ. ಅಫ್ರೀನಾ, ಮೀನಾಕ್ಷಿ ನೇತ್ರಾಧಿಕಾರಿ ಚೇತನ್ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ರಾಜ್ಯದಲ್ಲಿ 393 ಆರೋಗ್ಯ ಸಂಸ್ಥೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬೆಂಗಳೂರಿನ ಬಿಬಿಎಂಪಿ ವಲಯದ ಹೊಸಹಳ್ಳಿ ಆಸ್ಪತ್ರೆಯಲ್ಲಿ ಉದ್ಘಾಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.