ADVERTISEMENT

‘ಹೆಚ್ಚಿನ ದರಕ್ಕೆ ತರಕಾರಿ ಮಾರಿದರೆ ಕ್ರಮ’

ಸೋಮವಾರಪೇಟೆ ಪ.ಪಂ ಸಭಾಂಗಣದಲ್ಲಿ ನಡೆದ ಕೊರೊನಾ ಟಾಸ್ಕ್ ಫೋರ್ಸ್ ಸಭೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 3:27 IST
Last Updated 1 ಜೂನ್ 2021, 3:27 IST
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿದರು
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿದರು   

ಸೋಮವಾರಪೇಟೆ: ‘ಜನಸಾಮಾನ್ಯರು ಕೈಜೋಡಿಸದ ಹೊರತು ಕೋವಿಡ್‌ ನಿಯಂತ್ರಣ ಸಾಧ್ಯವಿಲ್ಲ’ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಕೊರೊನಾ ತಡೆಗಟ್ಟಲು ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಜನಸಾಮಾನ್ಯರು ಕೈಜೋಡಿಸಬೇಕು. ಜಿಲ್ಲೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಿಲ್ಲ. ಇದರೊಂದಿಗೆ ಮೃತರ ಸಂಖ್ಯೆಯೂ ಹೆಚ್ಚಾಗಿದೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುವ ಮೂಲಕ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

ADVERTISEMENT

‘ಸರ್ಕಾರದ ಆದೇಶದಂತೆ ಪ್ರತಿ ಮನೆಗಳಿಗೂ ತೆರಳಿ ಪರೀಕ್ಷೆ ನಡೆಸಬೇಕು. ರೋಗ ಲಕ್ಷಣಗಳಿದ್ದರೆ ಹೋಂ ಐಸೋಲೇಷನ್‌ನಲ್ಲಿ ಇರಿಸಬೇಕು ಮತ್ತು ಒಂದೇ ಶೌಚಾಲಯ ಇರುವ ಮನೆಯಲ್ಲಿ ಸೋಂಕಿತರಿದ್ದರೆ ಅಂಥವರನ್ನು ಕೋವಿಡ್ ಕೇರ್ ಸೆಂಟರ್‌ಗೆ ಕಳುಹಿಸಬೇಕು. ಬೆಂಗಳೂರಿನಿಂದ ಜಿಲ್ಲೆಗೆ ಬಂದವರಿದ್ದರೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ನಡೆಸಿ ಹೊಂ ಕ್ವಾರಂಟೈನ್ ಮಾಡಿಸಿ. ಸಹಕರಿಸದಿದ್ದರೆ ಪೊಲೀಸರಿಗೆ ದೋರು ನೀಡಿ’ ಎಂದರು.

ಪಟ್ಟಣದಲ್ಲಿ ಮೂರು ದಿನ ಅಗತ್ಯ ಸಾಮಗ್ರಿ ಖರೀದಿಸಲು ಅನುವು ಮಾಡಿಕೊಟ್ಟಿದ್ದು, ಜನಸಂದಣಿ ಆಗುತ್ತಿರುವ ಬಗ್ಗೆ ದೂರು ಬಂದಿದೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.

ತರಕಾರಿ ಹಾಗೂ ಹಣ್ಣುಗಳನ್ನು ಜಿಲ್ಲಾಡಳಿತ ನಿಗದಿಪಡಿಸಿದಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ದರಪಟ್ಟಿಯನ್ನು ಅಂಗಡಿಗಳ ಮುಂದೆ ಹಾಕುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಂಥವರ ವಿರುದ್ಧ ಮೊಕದಮ್ಮೆ ದಾಖಲಿಸುವಂತೆ ಪೊಲೀಸರಿಗೆ ತಿಳಿಸಿದರು.

ಲಾಕ್‌ಡೌನ್ ಸಮಯದಲ್ಲಿ ಅನಗತ್ಯವಾಗಿ ಓಡಾಡುವ ವ್ಯಕ್ತಿಗಳು, ವಾಹನಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಎರಡನೇ ಅಲೆ ತೀವ್ರವಾಗಿದೆ. ಮುಂದೆ ಮೂರನೇ ಅಲೆಯ ಸಾಧ್ಯತೆಯೂ ಇದೆ, ಅವುಗಳನ್ನು ಎದುರಿಸಲು ನಾವು ಸಜ್ಜಾಗಬೆಕಾಗಿದೆ ಎಂದರು.

ಪಟ್ಟಣದಲ್ಲಿ 50 ಮಂದಿ ಸೋಂಕಿತರಿದ್ದು, 29 ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. 14 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಾಧಿಕಾರಿ ನಾಚಪ್ಪ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಗೋವಿಂದರಾಜು, ಸಿಪಿಐ ಮಹೇಶ್, ಎಸ್ಐ ಶ್ರೀಧರ್, ಪ.ಪಂ. ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಸ್ಕ್ ಫೋರ್ಸ್ ಸಭೆ: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಐಗೂರು, ಬೇಳೂರು, ಚೌಡ್ಲು, ಹಾನಗಲ್ಲು, ನೆರುಗಳಲೆ, ಗಣಗೂರು, ಕಿರಗಂದೂರುಗಳಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಸಮಿತಿಗಳ ಟಾಸ್ಕ್ ಫೋರ್ಸ್ ಸಭೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.