
ಶನಿವಾರಸಂತೆ: ವಿದ್ಯಾರ್ಥಿಗಳ ನಾಯಕತ್ವದ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ವೇದಿಕೆಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಕಾಲೇಜಿನಲ್ಲಿ ಸ್ಥಾಪಿತವಾದ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಮೂಲಕ ಶಿಬಿರಗಳಲ್ಲಿ ಪಾಲ್ಗೊಂಡು ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಬೇಕು ಎಂದು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್.ಪರಮೇಶ್ ಸಲಹೆ ನೀಡಿದರು.
ಇಲ್ಲಿಗೆ ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮದರ್ಜೆ ಕಾಲೇಜಿನಲ್ಲಿ ಕೊಡಗು ವಿಶ್ವವಿದ್ಯಾನಿಲಯ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಈಚೆಗೆ ನಡೆದ ಒಂದು ದಿನದ ಶಿಬಿರದಲ್ಲಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಎಂ.ಆರ್.ನಿರಂಜನ್ ಮಾತನಾಡಿ, ‘ಕೊಡಗು ಪ್ರತ್ಯೇಕ ವಿಶ್ವವಿದ್ಯಾನಿಲಯವಾಗಿದೆ. ಕೊಡಗು ವಿಶ್ವ ವಿದ್ಯಾನಿಲಯದಡಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕವು ಸಹ ಕಾರ್ಯನಿರ್ವಹಿಸುತ್ತದೆ. ವಿದ್ಯಾರ್ಥಿಗಳು ಎಂದಿನಂತೆ ತಮ್ಮ ಕಾಲೇಜಿನ ಎನ್ಎಸ್ಎಸ್ ಘಟಕದಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಬಿರಾರ್ಥಿಗಳು ಕೊಡಗು ವಿಶ್ವವಿದ್ಯಾನಿಲಯದ ಗಮನ ಸೆಳೆಯಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಜಗದೀಶ್ ಬಾಬು ಮಾತನಾಡಿದರು. ಕಾರ್ಯಕ್ರಮದ ಕುರಿತು ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಕೆ.ಎಚ್.ಯೋಗೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಭಾಗವಹಿಸಿದ್ದರು.
ಘಟಕದ ಶಿಬಿರಾರ್ಥಿಗಳು ಕಾಲೇಜು ಆವರಣದ ಜಾಗವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದ ನಂತರ ಗಿಡಗಳನ್ನು ನೆಡುವ ಮೂಲಕ ಒಂದು ದಿನದ ಶಿಬಿರದಲ್ಲಿ ಕಾರ್ಯಚಟುವಟಿಕೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.