ಮಡಿಕೇರಿ: ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರು ದೇಶದ ರಕ್ಷಣೆಗಾಗಿ ಹುತಾತ್ಮರಾಗುವ ಮೂಲಕ ಯುವ ಪೀಳಿಗೆಗೆ ಸ್ಫೂರ್ತಿಯಾಗಿದ್ದಾರೆ. ಅವರ ಆದರ್ಶವನ್ನು ಯುವ ಸಮೂಹ ಮೈಗೂಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವ ಮೂಲಕ ದೇಶಸೇವೆಗೆ ಮುಂದಾಗಬೇಕು ಎಂದು ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಕರೆ ನೀಡಿದರು.
ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರು) ಹಾಗೂ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಟ್ರಸ್ಟ್ ವತಿಯಿಂದ ಇಲ್ಲಿನ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಭಾನುವಾರ ನಡೆದ 60ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ನಮ್ಮನ್ನು ದೇವರು ರಕ್ಷಿಸುತ್ತಾರೆ ಎಂದು ನಾವು ಸದಾ ದೇವರನ್ನು ಸ್ಮರಿಸುತ್ತೇವೆ. ನಮ್ಮನ್ನು ಸುರಕ್ಷಿತವಾಗಿಟ್ಟಿರುವ ಸೈನಿಕರು ಕೂಡ ದೇವರಿಗೆ ಸಮಾನರಾಗಿದ್ದು, ನಮಗಾಗಿ ಜೀವ ಕೊಟ್ಟ ಹುತಾತ್ಮರ ಸ್ಮರಣೆ ನಮ್ಮ ಕರ್ತವ್ಯ’ ಎಂದು ತಿಳಿಸಿದರು.
ಪ್ರತಿವರ್ಷ ವೀರ ಯೋಧರ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆ ಇತರರಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಮಾತನಾಡಿ, ‘ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ವೀರಮರಣವನ್ನಪ್ಪಿದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರು ದೇಶಪ್ರೇಮದಲ್ಲಿ ಎಲ್ಲರಿಗೂ ಮಾದರಿಯಾಗಿದ್ದಾರೆ. ತಮ್ಮ ಜೀವದ ಹಂಗನ್ನು ತೊರೆದು ಶತ್ರುಗಳೊಂದಿಗೆ ಹೋರಾಡಿ ದೇಶಪ್ರೇಮವನ್ನು ಮೆರೆದಿದ್ದಾರೆ’ ಎಂದು ಸ್ಮರಿಸಿದರು.
ನಿವೃತ್ತ ಸೇನಾಧಿಕಾರಿ ಬಾಳೆಯಡ ಮಂದಪ್ಪ ಮಾತನಾಡಿ, ‘ಇಂದು ಭಾರತೀಯ ವಾಯುಸೇನೆ ನಮ್ಮ ದೇಶದಲ್ಲೇ ನಿಂತು ಶತ್ರು ರಾಷ್ಟ್ರದ ಮೇಲೆ ಹೋರಾಟ ನಡೆಸುವಷ್ಟು ಸಮರ್ಥವಾಗಿದೆ. ಅಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರು ಶತ್ರುರಾಷ್ಟ್ರದೊಳಗೆ ನುಗ್ಗಿ ಸಾಹಸದಿಂದ ಹೋರಾಟ ನಡೆಸುವ ಮೂಲಕ ವಾಯುಸೇನೆಯ ಗೌರವವನ್ನು ಹೆಚ್ಚಿಸಿದ್ದರು’ ಎಂದು ಶ್ಲಾಘಿಸಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಫೋರಂನ ಮುಖಂಡ ಉಳ್ಳಿಯಡ ಪೂವಯ್ಯ ಮಾತನಾಡಿ, ‘ದೇಶಕ್ಕಾಗಿ ಬಲಿದಾನಗೈದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪುಣ್ಯಸ್ಮರಣೆಯನ್ನು ಪ್ರತಿವರ್ಷ ಸೆ.7ರಂದು ರಾಜ್ಯವ್ಯಾಪಿ ಆಚರಿಸಬೇಕು’ ಎಂದರು.
ಭಾರತ್ ಸ್ಕೌಟ್ ಮತ್ತು ಗೈಡ್ಸ್ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಮಾತನಾಡಿ, ‘ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರು ಸೇರಿದಂತೆ ಸಹಸ್ರ ಸಹಸ್ರ ಸೈನಿಕರು ದೇಶಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಇವರುಗಳ ಕೊಡುಗೆ ಅವಿಸ್ಮರಣೀಯ’ ಎಂದು ತಿಳಿಸಿದರು.
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಯಿತು. ಇದೇ ವೇಳೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಫೋರಂನ ಅಧ್ಯಕ್ಷ ಕರ್ನಲ್ ಕಂಡ್ರತಂಡ ಸುಬ್ಬಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮೌನಾಚರಣೆ ಮಾಡಲಾಯಿತು.
ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ, ನಿರ್ದೇಶಕಿ ತೆನ್ನಿರ ಟೀನಾ, ಸಲಹೆಗಾರರಾದ ಐಚಂಡ ರಶ್ಮಿ ಮೇದಪ್ಪ, ಅಜ್ಜಮಾಡ ಒಕ್ಕದ ಅಧ್ಯಕ್ಷ ಲವ ಕುಶಾಲಪ್ಪ, ಮುಖಂಡರಾದ ಅಜ್ಜಮಾಡ ಬೋಪಯ್ಯ, ಅಜ್ಜಮಾಡ ಚಂಗಪ್ಪ, ಅಜ್ಜಮಾಡ ಬೆಳ್ಯಪ್ಪ, ಅಜ್ಜಮಾಡ ರಮೇಶ್, ಅಜ್ಜಮಾಡ ಅಯ್ಯಣ್ಣ, ಅಜ್ಜಮಾಡ ಮಂಜುನಾಥ್, ಭಾರತ್ ಸ್ಕೌಟ್ ಮತ್ತು ಗೈಡ್ಸ್ನ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜಿಲ್ಲಾ ತರಬೇತಿ ಆಯುಕ್ತ ಕೆ.ಯು.ರಂಜಿತ್, ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ಕೇಕಡ ವಿಜು ದೇವಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ಮಾಜಿ ಉಪಾಧ್ಯಕ್ಷ ಮಣವಟ್ಟಿರ ಚಿಣ್ಣಪ್ಪ ಭಾಗವಹಿಸಿದ್ದರು.
ನಿವೃತ್ತ ಯೋಧರಿಗೆ ಭದ್ರತೆ ಬೇಕು
ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ ‘ದೇಶವನ್ನು ರಕ್ಷಿಸಿ ನಿವೃತ್ತರಾಗಿ ಬರುವ ಯೋಧರಿಗೆ ಇಂದು ಜೀವನ ಭದ್ರತೆ ಮತ್ತು ಗೌರವ ಇಲ್ಲದಾಗಿದೆ. ಸರ್ಕಾರ ನಿವೃತ್ತ ಯೋಧರ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಸ್ಪಂದಿಸಿ ಪರಿಹರಿಸಬೇಕು. ಸರ್ಕಾರಿ ಕಚೇರಿಗಳಿಗೆ ಮಾಜಿ ಸೈನಿಕರನ್ನು ಅಲೆದಾಡಿಸಬಾರದು. ಆರೋಗ್ಯ ಸುರಕ್ಷತೆ ಮೂಲಭೂತ ಸೌಲಭ್ಯ ನಿವೇಶನ ಸೇರಿದಂತೆ ನಿವೃತ್ತ ಯೋಧರ ಬೇಡಿಕೆಗಳಿಗೆ ಸರ್ಕಾರ ಮಾನ್ಯತೆ ನೀಡುವ ಮೂಲಕ ಜೀವನ ಭದ್ರತೆ ಒದಗಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.