ಕುಶಾಲನಗರ : ಸರ್ಕಾರಿ ಅಧಿಕಾರಿಯೊಬ್ಬರಿಗೆ ಹಣಕ್ಕೆ ಬೇಡಿಕೆ ಇಟ್ಟು ಮಾನಸಿಕ ಕಿರುಕುಳ ನೀಡುತ್ತಿದ್ದ ದೂರಿನ ಮೇರೆಗೆ ಕರ್ನಾಟಕ ಕಾವಲು ಪಡೆಯ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಅವರನ್ನು ಕುಶಾಲನಗರ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್ ಎಂ.ರಾಮಣ್ಣ ಗೌಡ ಎಂಬವವರು ಕರ್ನಾಟಕ ಕಾವಲು ಪಡೆಯ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಹಣಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ಕೊಲೆ ಬೆದರಿಕೆ ಹಾಕುತ್ತಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರಿಗೆ ಸಾಕ್ಷಿ ಸಮೇತ ದೂರು ನೀಡಿದ್ದಾರೆ.
ದೂರಿನ ಅರ್ಜಿಯನ್ನು ಕುಶಾಲನಗರ ಪೊಲೀಸ್ ಠಾಣೆಗೆ ವರ್ಗಾಹಿಸಿದ ಮೇರೆಗೆ ಟೌನ್ ಪೊಲೀಸ್ ಠಾಣೆಯ ಠಾಣಾಧಿಕಾರಿ ನಂದೀಶ್ ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು.
ಶುಕ್ರವಾರ ರಾತ್ರಿ ಎಸ್ಐ ನಂದೀಶ್ ಕುಮಾರ್ ನೇತೃತ್ವದಲ್ಲಿ ಸಿಬ್ಬಂದಿಗಳು ಮನೆಯಲ್ಲಿದ್ದ ಕೃಷ್ಣ ಅವರನ್ನು ವಶಕ್ಕೆ ಪಡೆದು ಈತನ ವಿರುದ್ಧ ಸೆಕ್ಷನ್ 341, 353, 348, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೃಷ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, ನಂತರ ನ್ಯಾಯಾಧೀಶರು ಕೃಷ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.