
ವಿರಾಜಪೇಟೆ: ಪುರಸಭೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ₹20 ಕೋಟಿ ಅನುದಾನದಲ್ಲಿ ವಿವಿಧ ಭಾಗಗಳಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು.
ಪಟ್ಟಣದ ಶಿವಕೇರಿ ವಾರ್ಡ್ನಲ್ಲಿ ₹27 ಲಕ್ಷ ಅನುದಾನದಲ್ಲಿ ಮುಖ್ಯ ರಸ್ತೆಯಿಂದ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಕಾಂಕ್ರೀಟ್ ರಸ್ತೆ, ದುರ್ಗಿವಿಷ್ಣು ದೇವಸ್ಥಾನ ಬಳಿಯಿಂದ ಸಾರ್ವಜನಿಕ ರಸ್ತೆ ಅಭಿವೃದ್ಧಿ, ರುದ್ರಭೂಮಿಗೆ ತೆರಳುವ ರಸ್ತೆಗಳನ್ನು ಲೋಕಾರ್ಪಣೆಗೊಳಿಸಿ ಬಳಿಕ ದೇವಾಲಯದ ಸಭಾಂಗಣದಲ್ಲಿ ಸೋಮವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕಾಂಗ್ರೆಸ್ ಹಿಂದಿನಿಂದಲೂ ಬಡವರು ಹಾಗೂ ಹಿಂದುಳಿದವರ ಏಳಿಗೆಗೆ ಕೆಲಸ ಮಾಡುತ್ತಿದೆ. ಪುರಸಭೆಗೆ ಬಂದಿರುವ ₹20 ಕೋಟಿ ಅನುದಾನದಲ್ಲಿ ಎಲ್ಲಾ ವಾರ್ಡ್ಗಳಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇದರಲ್ಲಿ ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು, ಇನ್ನು ಕೆಲವು ಕಾಮಗಾರಿ ಪ್ರಗತಿಯಲ್ಲಿವೆ. ಈಗ ಉಳಿದಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುವುದು’ ಎಂದರು.
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ.ಸತೀಶ್ ಅವರು ಸಭೆಯಲ್ಲಿ ಮಾತನಾಡಿದರು. ವಾರ್ಡ್ನಲ್ಲಿ ಬೇಸಿಗೆ ಸಂದರ್ಭ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಿರುವುದರಿಂದ ತೆರೆದ ಬಾವಿಯನ್ನು ನಿರ್ಮಿಸಿಕೊಡುವಂತೆ ಸ್ಥಳೀಯರು ಈ ಸಂದರ್ಭ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಮಾತನಾಡಿದ ಪೊನ್ನಣ್ಣ, ‘ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ದಿನದಲ್ಲಿ ತೆರೆದ ಬಾವಿ ಕಾಮಗಾರಿ ಮಾಡಿಕೊಡಲಾಗುವುದು’ ಎಂದು ಭರವಸೆ ನೀಡಿದರು.
ವೇದಿಕೆಯಲ್ಲಿ ಪುರಸಭೆಯ ಮಾಜಿ ಸದಸ್ಯೆ ಪೂರ್ಣಿಮಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ರಂಜಿ ಪೂಣಚ್ಚ, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಪಿ.ಎ.ಹನೀಫ್, ದಲಿತ ಸಮಿತಿ ಮುಖಂಡರಾದ ಗಾಯತ್ರಿ ನರಸಿಂಹ, ಎಚ್.ಜಿ.ಗೋಪಾಲ, ಗ್ರಾಮದ ಹಿರಿಯರಾದ ವಿಠಲ, ಸೂರಜ್, ರಾಕೇಶ್, ಸಾಗರ್, ಶ್ರೀನಿವಾಸ್, ಸಚಿನ್ ಪುರಸಭೆ ಮುಖ್ಯಾಧಿಕಾರಿ ಪಿ.ಕೆ.ನಾಚಪ್ಪ, ಇಂಜಿನಿಯರ್ ಹೇಮಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.