ADVERTISEMENT

ಹೆಬ್ಬಾಲೆ ಬನಶಂಕರಿ ವೈಭವದ ಜಾತ್ರೋತ್ಸವ

ಜನಮನಗೆದ್ದ ಎತ್ತಿನಗಾಡಿ ಓಟ ಸ್ಪರ್ಧೆ, ಗ್ರಾಮೀಣ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 9:57 IST
Last Updated 27 ನವೆಂಬರ್ 2022, 9:57 IST
ಶ್ರೀ ಬನಶಂಕರಿ ದೇವಿಯ ವಿದ್ಯುತ್ ಅಲಂಕೃತ ಉತ್ಸವ
ಶ್ರೀ ಬನಶಂಕರಿ ದೇವಿಯ ವಿದ್ಯುತ್ ಅಲಂಕೃತ ಉತ್ಸವ   

ಕುಶಾಲನಗರ: ಐತಿಹಾಸಿಕ ಹೆಬ್ಬಾಲೆಯ ಗ್ರಾಮದೇವತೆ ಬನಶಂಕರಿ ಅಮ್ಮನ ವಾರ್ಷಿಕ ಜಾತ್ರೋತ್ಸವ ಶುಕ್ರವಾರ ರಾತ್ರಿ ವಿಜೃಂಭಣೆಯಿಂದ ಜರುಗಿತು.

ಬನಶಂಕರಿ, ಬಸವೇಶ್ವರ ಹಾಗೂ ರಾಮಲಿಂಗೇಶ್ವರ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಶುಕ್ರವಾರ ರಾತ್ರಿ ಶಕ್ತಿ ಸ್ವರೂಪಿಣಿ ಬನಶಂಕರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಬೆಳಿಗ್ಗೆ 7 ಗಂಟೆಗೆ ಗಣಪತಿ ಪೂಜೆ, ಪುಣಾಹಃ, ರಕ್ಷಾಬಂಧನ, ಧ್ವಜಾ ರೋಹಣ, ನವಗ್ರಹ ಸ್ಥಾಪನೆ, ನವಗ್ರಹ ಪೂಜೆ ಮಹಾ ಮಂಗಳಾರತಿ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ದೇವಾಲಯದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನೇತೃತ್ವದಲ್ಲಿ ನಡೆದವು.

ADVERTISEMENT

ವಾರ್ಷಿಕ ಹಬ್ಬದ ಅಂಗವಾಗಿ ಪವಿತ್ರ ಬನದಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ಬೆಳಿಗ್ಗೆ ಕಳಸ ಸ್ಥಾಪಿ ಸುವುದರೊಂದಿಗೆ ವಿವಿಧ ಕಾರ್ಯಗಳು ದೇವಸ್ಥಾನ ಸಮಿತಿ ಅಧ್ಯಕ್ಷ ಯಜಮಾನ್ ಎಚ್.ಎನ್.ಬಸವರಾಜು ಹಾಗೂ ಎಚ್.ಪಿ.ರಾಜಪ್ಪ ಹಾಗೂ ಸಮಿತಿ ಪದಾಧಿ ಕಾರಿಗಳು, ಸದಸ್ಯರ ನೇತೃತ್ವದಲ್ಲಿ ನೆರವೇರಿದವು.

ಸಂಜೆ 4 ಗಂಟೆಗೆ ಕ್ಷೀರಾಭಿಷೇಕ, ಗಣಪತಿ ಪೂಜೆ ನಂತರ ದೇವಿಯನ್ನು ಅಲಂಕರಿಸಲಾಯಿತು. ರಾತ್ರಿ 8 ಗಂಟೆಗೆ ಬನದಲ್ಲಿ ಅಗ್ನಿಕುಂಡ ಸ್ಥಾಪಿಸಲಾಯಿತು. ಹರಕೆ ಹೊತ್ತ ಭಕ್ತಾದಿಗಳು ಅಗ್ನಿಕುಂಡ ತುಳಿದು ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಹಬ್ಬದ ಅಂಗವಾಗಿ ಗ್ರಾಮವನ್ನು ಹಸಿರು ತಳಿರು ತೋರಣಗಳಿಂದ ಹಾಗೂ ದೇವಸ್ಥಾನಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ರಾತ್ರಿ 10.30 ಗಂಟೆ ವೇಳೆಗೆ ಗ್ರಾಮದ ಬಸವೇಶ್ವರ ದೇವಾಲಯದ ಬಳಿಯಿಂದ ವಿದ್ಯುತ್ ಅಲಂಕೃತ ಮಂಟಪದಲ್ಲಿ ಬನಶಂಕರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ನಂತರ ಉತ್ಸವವನ್ನು ಮೆರವಣಿಗೆ ಮೂಲಕ ಪವಿತ್ರ ಬನಕ್ಕೆ ಕೊಂಡೊಯ್ಯಲಾಯಿತು.

ಇಷ್ಟಾರ್ಥ ನೆರವೇರಿಸುವ ತಾಯೇ ಎಂದು 9 ದಿವಸ ಉಪವಾಸ ವ್ರತ ಆಚರಿಸಿ ಅಂದು ಉತ್ಸವಗಳೊಂದಿಗೆ ಮೆರವಣಿಗೆಯಲ್ಲಿ ತಾಯಿಯ ಬನಕ್ಕೆ ಆಗಮಿಸುವ ಭಕ್ತರು ಅಗ್ನಿಕುಂಡ ತುಳಿದು ದೇವಿಗೆ ಹಣ್ಣು ತುಪ್ಪ ಅಭಿಷೇಕ ಮಾಡಿ ಆಶೀರ್ವಾದವನ್ನು ಪಡೆದು ದೇವಿಗೆ
ಕೃಪೆಗೆ ಪಾತ್ರರಾದರು. ದೇವಿಯ ಉತ್ಸವದೊಂದಿಗೆ ಗ್ರಾಮದ ಇತರೆ ಭಾಗಗಳಿಂದ ಹೊರಟ ಉತ್ಸವ ಮಂಟಪಗಳ ಶೋಭಾಯಾತ್ರೆಯು ಹಬ್ಬಕ್ಕೆ ವಿಶೇಷ ಮೆರುಗು ನೀಡಿದವು. ಮಡಿಕೇರಿ ದಸರಾ ಮಾದರಿಯಲ್ಲಿಯೇ ನಡೆಯುವ ಉತ್ಸವಗಳ ಮೆರವಣಿಗೆ ಗ್ರಾಮದೇವತೆ ಹಬ್ಬಕ್ಕೆ ವಿಶೇಷ ಮೆರಗು ನೀಡಿತು.

ಮೆರವಣಿಗೆ ಸಂದರ್ಭ ಗ್ರಾಮದ ಬಸ್ ನಿಲ್ದಾಣದ ಬಳಿ ಸಿಡಿಸುವ ಬಣ್ಣ ಬಣ್ಣದ ಆಕರ್ಷಕ ಮದ್ದುಗುಂಡುಗಳ ಪ್ರದರ್ಶನ ಹಾಗೂ ಬಾಣ ಬಿರುಸುಗಳ ಚಿತ್ತಾರ ನೋಡುಗರ ಕಣ್ಮನ
ಸೆಳೆಯಿತು. ಈ ಹಬ್ಬಕ್ಕೆ ದೇಶ
ವಿದೇಶದಲ್ಲಿ ನೆಲಸಿರುವ ಗ್ರಾಮಸ್ಥರು, ಮೈಸೂರು, ಹಾಸನ ಜಿಲ್ಲೆಗಳ ಗಡಿಭಾಗದ ಜನರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರೂ ಮಂದಿ ಪಾಲ್ಗೊಂಡಿದ್ದರು.

ದೇವಸ್ಥಾನ ಸಮಿತಿ ವತಿಯಿಂದ ರಾತ್ರಿ ಅಮ್ಮನವರ ದೇವಸ್ಥಾನದಲ್ಲಿ ಭಕ್ತರಿಗೆ ಅನ್ನಸಂರ್ತಪಣೆ ವ್ಯವಸ್ಥೆ ಕಲ್ಪಿಸಲಾಯಿತು.

ಮಾದರಿ ಯುವಕ ಸಂಘದ ಆಶ್ರಯ ದಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಎತ್ತಿನ ಗಾಡಿ ಓಟ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.