ADVERTISEMENT

ಕುಶಾಲನಗರ: ಪ್ರವಾಹ ಉಂಟಾಗದಂತೆ ಎಚ್ಚರಿಕೆ ವಹಿಸಿ ಶಾಸಕ ಡಾ.ಮಂತರ್ ಗೌಡ ಸೂಚನೆ

ಅಧಿಕಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2023, 14:55 IST
Last Updated 2 ಜುಲೈ 2023, 14:55 IST
ಕುಶಾಲನಗರ ಸಮೀಪದ ಹಾರಂಗಿ‌ ಪ್ರವಾಸಿ ಮಂದಿರದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ‌ವಿವಿಧ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ‌ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಡಾ.ಮಂತರ್ ಗೌಡ ಮಾತನಾಡಿದರುಹಾರಂಗಿ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ರಘುಪತಿ, ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ, ಅರಣ್ಯ ಇಲಾಖೆ ಡಿ ಎಫ್ ಓ ಪೂವಯ್ಯ ಇದ್ದಾರೆ..
ಕುಶಾಲನಗರ ಸಮೀಪದ ಹಾರಂಗಿ‌ ಪ್ರವಾಸಿ ಮಂದಿರದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ‌ವಿವಿಧ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ‌ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಡಾ.ಮಂತರ್ ಗೌಡ ಮಾತನಾಡಿದರುಹಾರಂಗಿ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ರಘುಪತಿ, ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ, ಅರಣ್ಯ ಇಲಾಖೆ ಡಿ ಎಫ್ ಓ ಪೂವಯ್ಯ ಇದ್ದಾರೆ..   

ಕುಶಾಲನಗರ: ‘ಕಾವೇರಿ ಹಾಗೂ ಹಾರಂಗಿ ನದಿ ದಂಡೆಯ ಮೇಲಿರುವ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಗಾಲದ ಅವಧಿಯಲ್ಲಿ ಯಾವುದೇ ಪ್ರವಾಹ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು’ ಎಂದು ಶಾಸಕ ಡಾ.ಮಂತರ್ ಗೌಡ ಸೂಚನೆ ನೀಡಿದರು.

ಸಮೀಪದ ಹಾರಂಗಿ ಪ್ರವಾಸಿ ಮಂದಿರದಲ್ಲಿ ಶನಿವಾರ ಸಂಜೆ ಕಾವೇರಿ ನೀರಾವರಿ ನಿಗಮ, ಅರಣ್ಯ ಇಲಾಖೆ ಮತ್ತು ವಿದ್ಯುತ್ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಅಧಿಕಾರಿಗಳೊಂದಿಗೆ ಚರ್ಚೆ‌ ನಡೆಸಿದರು.

‌‘ಹಾರಂಗಿ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಬೀಳುವ ಮಳೆಯನ್ನು ಆಧಾರಿಸಿ ಜಲಾಶಯದಲ್ಲಿ ನೀರಿನ‌‌ ಸಂಗ್ರಹ ಹಾಗೂ ನದಿಗೆ ಹರಿ ಬಿಡುವ ಬಗ್ಗೆ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು. ಜಲಾಶಯದ ನೀರಿನ‌ ಮಟ್ಟ ಹಾಗೂ ಒಳಹರಿವಿನ‌ ಪ್ರಮಾಣದ ಕುರಿತು ಮಾಹಿತಿ ನೀಡಬೇಕು. ನದಿ ನೀರು ಬಡಾವಣೆಗಳಿಗೆ ನುಗ್ಗದಂತೆ ಎಚ್ಚರವಹಿಸುವುದು. ನದಿ ತಟದ ಬಡಾವಣೆಗಳು ಪ್ರವಾಹ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುವಂತೆ’ ಸೂಚಿಸಿದರು.

ADVERTISEMENT

ಹಾರಂಗಿ ಜಲಾಶಯದ ಹೂಳೆತ್ತುವ ಯೋಜನೆ ವಿಳಂಬವಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ‘ಮಳೆಗಾಲ ಆರಂಭವಾದ‌ ಮೇಲೆ ಕಾಮಗಾರಿ ಕೈಗೊಳ್ಳಲು ಸಾಧ್ಯವೆ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

‌‌ಇದುವರೆಗೂ ಕಾಮಗಾರಿ ಕೈಗೊಳ್ಳದ ಬಗ್ಗೆ ಅಧಿಕಾರಿಗಳನ್ನು ‌ತರಾಟೆಗೆ ತೆಗೆದುಕೊಂಡ ಶಾಸಕರು, ‘ಗುತ್ತಿಗೆದಾರರನ್ನು ಬದಲಾಯಿಸಲು ಸರ್ಕಾರದ ಗಮನಕ್ಕೆ ತರುವಂತೆ’ ಸಲಹೆ ನೀಡಿದರು.

ಹಾರಂಗಿ ಯೋಜನೆಗಳಿಗೆ ಸಂಬಂಧಿಸಿದಂತೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

‘ಯಾವುದೇ ಕಾಮಗಾರಿಗಳು ವಿಳಂಬವಾಗದಂತೆ ಗಮನಹರಿಸಬೇಕು. ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಂದ ದೂರು ಬರದಂತೆ ನೋಡಿಕೊಳ್ಳುವುದು ಕೂಡಾ ಅಧಿಕಾರಿಗಳ ಜವಾಬ್ದಾರಿಯಾಗಿದೆ. ತಪ್ಪು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕಚೇರಿಗಳಲ್ಲಿ ಯಾವುದೇ ರೀತಿಯ ಅನಾವಶ್ಯಕ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಸರ್ಕಾರಿ ಹಣ ಪೋಲಾಗದಂತೆ ಎಚ್ಚರವಹಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಹಾರಂಗಿ ಯೋಜನಾ ವೃತ್ತದ ಸೂಪರಿಂಟೆಂಡರೆಂಟ್ ಎಂಜಿನಿಯರ್ ರಘುಪತಿ, ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ, ಡಿಎಫ್‌ಓ ಪೂವಯ್ಯ, ಮತ್ತಿತರ ಇಲಾಖೆ ಅಧಿಕಾರಿಗಳು ಇದ್ದರು.

ನದಿ ನೀರು ಬಡಾವಣೆಗಳಿಗೆ ನುಗ್ಗದಂತೆ ಎಚ್ಚರವಹಿಸಿ ಗುತ್ತಿಗೆದಾರರನ್ನು ಬದಲಾಯಿಸಲು ಮಾಹಿತಿ ನೀಡಿ ಸಾರ್ವಜನಿಕರಿಂದ ದೂರು ಬಂದರೆ ಕ್ರಮ; ಎಚ್ಚರಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.