ADVERTISEMENT

ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಒತ್ತು ನೀಡಿ

ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಲ್ಲಿ ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ. ಅಶೋಕ್

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 6:49 IST
Last Updated 24 ಜನವರಿ 2026, 6:49 IST
ಸೋಮವಾರಪೇಟೆಯಲ್ಲಿ ಗುರುವಾರ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಾಗಾರವನ್ನು ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ. ಅಶೋಕ್ ಉದ್ಘಾಟಿಸಿದರು
ಸೋಮವಾರಪೇಟೆಯಲ್ಲಿ ಗುರುವಾರ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಾಗಾರವನ್ನು ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ. ಅಶೋಕ್ ಉದ್ಘಾಟಿಸಿದರು   

ಸೋಮವಾರಪೇಟೆ: ‘ಪ್ರತಿಯೊಬ್ಬ ಮಗುವೂ ಸರ್ಕಾರದಿಂದ ಸಿಗುವ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಹೆಣ್ಣು ಮತ್ತು ಗಂಡು ನಡುವೆ ಸಮಾನತೆ ಇರಬೇಕು. ಯಾವುದೇ ಬೇದ ಭಾವ ಮಾಡದೇ ಒಂದೇ ಎಂಬ ಭಾವನೆಯನ್ನು ಎಲ್ಲ ಪೋಷಕರು ಬೆಳೆಸಿಕೊಳ್ಳಬೇಕು’ ಎಂದು ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ. ಅಶೋಕ್ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಗೋಪಾಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಕುರಿತ ಮಾಹಿತಿ ಕಾರ್ಯಾಗಾರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. 

ಕೊಡಗು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಮಿಷನ್ ಸಂಯೋಜಕಿ ಮಮತಾ ಮಾತನಾಡಿ, ‘ಲಿಂಗಾನುಪಾತದ ಅಂತರ ಕಡಿಮೆ ಮಾಡುವುದು, ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆಯನ್ನು ತೆಗೆದುಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಜಾರಿ ಮಾಡಿದೆ. ಈ ಮೂಲಕ ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಲು ಮತ್ತು ಸಮಾಜದಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ’ ಎಂದರು.

ADVERTISEMENT

‘ಎಲ್ಲಾದರೂ ಲಿಂಗ ಪತ್ತೆ ಪರೀಕ್ಷೆ ಮತ್ತು ಮಹಿಳೆಯರ ಅಥವಾ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಕಂಡುಬಂದಲ್ಲಿ ಯಾರೇ ಆದರೂ ಸಂಬಂಧಪಟ್ಟವರಿಗೆ ವರದಿ ಮಾಡಿ, ಕ್ರಮ ಕೈಗೊಳ್ಳುವಂತೆ ಮಾಡಬೇಕು ಎಂದರು.

‘ಮಕ್ಕಳಿಗೆ ತೊಂದರೆಗಳು ಆದಾಗ, ಸಂಕಷ್ಟ ಎದುರಾದಾಗ ತುರ್ತು ಸೇವೆಗಾಗಿ ಮಕ್ಕಳ ಸಹಾಯವಾಣಿ ಇದ್ದು, ಯಾರೇ ಏನೇ ತೊಂದರೆ ಎದುರಾದರೂ ಈ ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು’ ಎಂದರು.

ರಾಜ್ಯ ಸರ್ಕಾರ ಹೊಸದಾಗಿ ‘ಅಕ್ಕಪಡೆ’ ಜಾರಿಗೊಳಿಸಿದ್ದು, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆದು, ರಕ್ಷಣೆ ನೀಡುವ ನಿಟ್ಟಿನಲ್ಲಿ ಈ ಯೋಜನೆ ಇದೆ. ಸಮಸ್ಯೆ ಎದುರಾದರೆ ತುರ್ತು ಸಹಾಯಕ್ಕಾಗಿ ಈ ಯೋಜನೆಯ ಸದುಪಯೋಗಪಡೆದುಕೊಳ್ಳಿ’ ಎಂದು ಹೇಳಿದರು.

ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯ ಮೇಲ್ವಿಚಾರಕಿ ಸಾವಿತ್ರವ್ವ ಮಾತನಾಡಿ, ‘ಮಕ್ಕಳ ರಕ್ಷಣೆಗಾಗಿ ಅನೇಕ ಹಕ್ಕುಗಳಿದ್ದು, ಹಕ್ಕುಗಳ ರಕ್ಷಣೆಯಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಬಾಲ್ಯವಿವಾಹವು ಸಮಾಜಕ್ಕೆ ಒಂದು ಪಿಡುಗು ಆಗಿದ್ದು, ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಪೋಕ್ಸೋ ಕಾಯ್ದೆ ಜಾರಿಗೆ ತಂದಿದ್ದು, ಇದು ಮಕ್ಕಳಿಗೆ ರಕ್ಷಣೆ ನೀಡುವ ಪ್ರಬಲ ಕಾಯ್ದೆಯಾಗಿದೆ’ ಎಂದರು.

ನಿಡ್ತ ಗ್ರಾಮ ಗ್ರಾಮ ಪಂಚಾಯಿತಿ ಸದಸ್ಯರಾದ ತಸ್ಲಿಂ, ಎಸ್. ಕಾರ್ತಿಕ್, ತೀರ್ಥಾನಂದ, ಗೋಪಾಲಪುರ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಪಿ.ಕೆ. ಸಾವಿತ್ರಿ ಹಾಗೂ ಪಿಡಿಒ ಮಾನಸ ಇದ್ದರು.

ಸೋಮವಾರಪೇಟೆಯಲ್ಲಿ ಗುರುವಾರ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು  ನೃತ್ಯ ಪ್ರದರ್ಶಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.