ADVERTISEMENT

ಕೇರಳದಲ್ಲಿ ಹಕ್ಕಿಜ್ವರ: ಕೊಡಗು ಜಿಲ್ಲೆಯಲ್ಲಿಯೂ ಮುನ್ನೆಚ್ಚರಿಕೆಗೆ ಸೂಚನೆ

ಕೇರಳದಲ್ಲಿ ಬಾತುಕೋಳಿಗಳಲ್ಲಿ ಕೋಳಿಗೆ ಶೀತಜ್ವರ; ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 12:54 IST
Last Updated 6 ಜನವರಿ 2021, 12:54 IST
ಹಕ್ಕಿಜ್ವರದ ಮುನ್ನೆಚ್ಚರಿಕೆ ಕ್ರಮ ಕುರಿತು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಮಾತನಾಡಿದರು
ಹಕ್ಕಿಜ್ವರದ ಮುನ್ನೆಚ್ಚರಿಕೆ ಕ್ರಮ ಕುರಿತು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಮಾತನಾಡಿದರು   

ಮಡಿಕೇರಿ: ನೆರೆಯ ಕೇರಳ ರಾಜ್ಯದ ಕೊಟ್ಟಾಯಂ ಮತ್ತು ಅಲಪ್ಪುಳ ವ್ಯಾಪ್ತಿಯಲ್ಲಿ ಬಾತುಕೋಳಿಗಳಲ್ಲಿ ಶೀತಜ್ವರ ಕಂಡುಬಂದಿದೆ. ಕೊಡಗು ಜಿಲ್ಲೆಯಲ್ಲಿಯೂ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕೋಳಿ ಶೀತಜ್ವರ (ಹಕ್ಕಿ ಜ್ವರ) ನಿಯಂತ್ರಣ ಸಂಬಂಧ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ADVERTISEMENT

ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಭಾಗದಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಿ, ಕೇರಳ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಕೋಳಿ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯ ವಾಹನಗಳನ್ನು ಪರಿಶೀಲಿಸುವುದರ ಜೊತೆಗೆ, ಸಾಗಾಣಿಕೆ ವಾಹನಗಳನ್ನು ಸ್ಯಾನಿಟೈಸರ್ ಮಾಡಿ ಜಿಲ್ಲೆಯ ಒಳಗೆ ಪ್ರವೇಶಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಚೆಕ್‍ಪೋಸ್ಟ್‌ಗಳ ಸ್ಥಾಪನೆ, ಅಗತ್ಯ ಸಹಕಾರಕ್ಕೆ ಅರಣ್ಯ, ಪೊಲೀಸ್, ಸಾರಿಗೆ ಇಲಾಖೆ ಅಧಿಕಾರಿಗಳು ಸಹ
ಕಾರ ನೀಡಲಿದ್ದು, ಈ ಸಂಬಂಧ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಸುರೇಶ್ ಭಟ್ ಅವರು, ಪಶುಪಾಲನಾ ಇಲಾಖೆಯಿಂದ ಹಕ್ಕಿಜ್ವರ ನಿಯಂತ್ರಣ ಮತ್ತು ನಿರ್ವಹಣೆ ಮಾರ್ಗಸೂಚಿಯ ಅನ್ವಯ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರ್‍ಯಾಪಿಡ್‌ ರೆಸ್ಪಾನ್ಸ್ ತಂಡ ರಚಿಸಿದೆ ಎಂದು ಹೇಳಿದರು.

ಜಿಲ್ಲೆಯ ಕೇರಳ ರಾಜ್ಯದ ಗಡಿಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಅರಣ್ಯ, ಪೊಲೀಸ್, ಸಾರಿಗೆ, ಆರೋಗ್ಯ, ಪಂಚಾಯತ್‌ರಾಜ್ ಇಲಾಖೆಗಳ ಸಹಕಾರ ಅಗತ್ಯ ಎಂದು ಕೋರಿದರು.

ಅಸ್ವಾಭಾವಿಕವಾಗಿ ಕೋಳಿ ಅಥವಾ ವನ್ಯ ಪಕ್ಷಿಗಳ ಮರಣ ಕಂಡುಬಂದಲ್ಲಿ ಈ ಬಗ್ಗೆ ಗಮನಹರಿಸಿ ವರದಿ ಸಲ್ಲಿಸಲಾಗುವುದು ಎಂದರು.

ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಚಿದಾನಂದ ಅವರು, ಹಕ್ಕಿಜ್ವರವು ಪಕ್ಷಿಗಳು ಹಾಗೂ ಕೋಳಿ ಮತ್ತಿತರ ಮೂಲಕ ಹರಡುವ ಸಾಧ್ಯತೆ ಇದ್ದು, ಕೇರಳ ರಾಜ್ಯದಲ್ಲಿ ಕಂಡು ಬಂದಿರುವುದರಿಂದ ಕೇರಳ ರಾಜ್ಯದ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೋಳಿ ಮತ್ತು ಪಕ್ಷಿಗಳ ರಕ್ತ ಹಾಗೂ ಇಕ್ಕೆ ಮಾದರಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಕ್ಷ್ಮಾಣು ಜೀವಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ನಜೀಮ ತಬಸೀರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಲಿ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಪ್ರಸನ್ನ, ಡಾ.ಹರೀಶ್, ಡಾ.ಬಾದಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.