ಮಡಿಕೇರಿ: ನಗರದ ಬಿಜೆಪಿ ಕಚೇರಿಯಲ್ಲಿ ಆರ್ಥಿಕ ಪ್ರಕೋಷ್ಠದ ವತಿಯಿಂದ ನಡೆದ ಬಜೆಟ್ ವಿಶ್ಲೇಷಣೆ ಹಾಗೂ ಸಂವಾದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೂರದೃಷ್ಟಿ ಹಾಗೂ ಸಮಾಜದ ಹಿತದೃಷ್ಟಿಗೆ ಅನುಗುಣವಾಗಿ ಬಜೆಟ್ ಮಂಡಿಸಿದೆ. ಪರಿಸ್ಥಿತಿಗೆ ತಕ್ಕಂತೆ ಬಜೆಟ್ ಕೂಡ ಮಂಡಿಸಲಾಗಿದ್ದು, ಕೃಷಿ ವಲಯಕ್ಕೆ ಪೂರಕ ಬಜೆಟ್ ಆಗಿದೆ ಎಂದು ವಿಶ್ಲೇಷಿಸಿದರು.
ಆರ್ಥಿಕ ಪ್ರಕೋಷ್ಠದ ರಾಜ್ಯ ಸದಸ್ಯ ಚಿದಾನಂದ ಮಾತನಾಡಿ, ಆರ್ಥಿಕ ಪರಿಸ್ಥಿತಿ ಸಂಕಷ್ಟದ ನಡುವೆ ಸವಾಲಿನ ಬಜೆಟ್ ಮಂಡಿಸಿದೆ. ₹ 58 ಸಾವಿರ ಕೋಟಿ ಹಣ ಮೂಲ ಸೌಕರ್ಯ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಇದರಿಂದ ಉದ್ಯೋಗ ಕೂಡ ಸೃಷ್ಟಿಯಾಗಲಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಆರ್ಥಿಕ ಪ್ರಕೋಷ್ಠ ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಆರ್ಥಿಕ ಪ್ರಕೋಷ್ಠದ ಸಂಚಾಲಕ ಗೋಪಾಲಕೃಷ್ಣ ಮಾತನಾಡಿದರು.ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ಬಿಜೆಪಿ ನಗರ ಅಧ್ಯಕ್ಷ ಮನು ಮಂಜುನಾಥ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ಎಸ್ಸಿ ಮೋರ್ಚಾದ ಅಧ್ಯಕ್ಷ ಸತೀಶ್ ಸೇರಿದಂತೆ ಇನ್ನಿತರರು ಇದ್ದರು.
ಐತಿಹಾಸಿಕ ಬಜೆಟ್: ರಾಬಿನ್ ದೇವಯ್ಯ
ಕೇಂದ್ರ ಸರ್ಕಾರವು ಐತಿಹಾಸಿಕ ಬಜೆಟ್ ಮಂಡಿಸಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಪಾದನೆ ಹೆಚ್ಚಳ ಮಾಡುವುದು ಸರ್ಕಾರದ ಗುರಿಯಾಗಿದೆ. ಸಂಕಷ್ಟ ಪರಿಸ್ಥಿತಿಯಲ್ಲಿಯೂ ಉತ್ತಮ ಬಜೆಟ್ ಮಂಡಿಸಲಾಗಿದೆ ಎಂದು ಹೇಳಿದರು. ರಾಜ್ಯ ಕಾರ್ಯದರ್ಶಿ ಡಾ.ಬಿ.ಸಿ. ನವೀನ್ ಕುಮಾರ್ ಮಾತನಾಡಿ, ದೇಶದ ಸಮಗ್ರತೆಗೆ ಪೂರಕವಾಗಿ ಬಜೆಟ್ ಮಂಡಿಸಲಾಗುತ್ತದೆ. ಸೆಸ್, ತೆರಿಗೆ ಸಂಗ್ರಹವನ್ನು ವೈಜ್ಞಾನಿಕವಾಗಿ ಮಾಡಲಾಗುತ್ತದೆ. ಪೆಟ್ರೋಲ್, ಡಿಸೇಲ್ಗೆ ಕೃಷಿ ಸೆಸ್ ಹೇರಿರುವುದರಿಂದ ರೈತರ ಸಬಲೀಕರಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.