ಮಡಿಕೇರಿ: ‘ಸದಸ್ಯತ್ವ ನೋಂದಣಿ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ. ಆಯ ವಲಯದ ಮುಖಂಡರು ಇನ್ನೂ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸಬೇಕು’ ಎಂದು ಜಿಲ್ಲಾ ಬಿಜೆಪಿ ಚುನಾವಣೆ ಉಸ್ತುವಾರಿ ಗಣೇಶ್ ಕಾರ್ಣಿಕ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದ ಭಾಲಭವನದಲ್ಲಿ ಶುಕ್ರವಾರ ತಾಲ್ಲೂಕು ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಸಭೆಯಲ್ಲಿ ಅವರು ಮಾತನಾಡಿದರು.
‘ರಾಷ್ಟ್ರದಲ್ಲಿ ಬಿಜೆಪಿ ಅತ್ಯಂತ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಿದೆ. ಪ್ರಧಾನಿ ಮೋದಿ, ಅಮಿತ್ ಶಾ ಮಾರ್ಗದರ್ಶನದಲ್ಲಿ ಸಮರ್ಥವಾಗಿ ಮುನ್ನಡೆಯುತ್ತಿದೆ. ಪಕ್ಷಕ್ಕೆ ನಮ್ಮ ಕೊಡಗೆಯೂ ಅತೀ ಮುಖ್ಯವಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರೂ ಪಕ್ಷದ ಕೆಲಸವನ್ನು ನಮ್ಮ ಮನೆ ಕೆಲಸವೆಂದೇ ಪರಿಗಣಿಸಿ ನಿರ್ವಹಿಸಬೇಕು’ ಎಂದು ಕರೆ ನೀಡಿದರು.
‘ಹೆಚ್ಚು ಹೆಚ್ಚು ಸದಸ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿ ಕನಿಷ್ಠ 25 ಮಂದಿಯನ್ನಾದರೂ ಸದಸ್ಯರಾಗಿ ಸೇರಿಸಿಕೊಳ್ಳಬೇಕು’ ಎಂದು ಹೇಳಿದರು.
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಬಿಜೆಪಿ ಸರ್ವ ವ್ಯಾಪಿಯಾಗಿದ್ದು ಮತ್ತೆ ಸದಸ್ಯತ್ವ ನೋಂದಣಿಗಾಗಿ ಪ್ರಧಾನಿ ಮೋದಿಯವರು 100 ದಿನಗಳ ಅವಕಾಶ ನೀಡಿದ್ದಾರೆ. ಈ ಅವಧಿಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಭಾಗಮಂಡಲದ ಕುದುಕುಳಿ ಭರತ್ ಮಾತನಾಡಿ, ನದಿಗಳಲ್ಲಿ ಹೂಳು ತುಂಬಿಕೊಂಡಿದ್ದು ಮರಳು ಸಾಗಣಿಕೆಗೆ ಅವಕಾಶ ನೀಡಬೇಕು. ಕೊಡಗಿನ ಸಮಸ್ಯೆಯನ್ನು ಅರಿತುಕೊಂಡಿರುವ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಿದರು.
ಬಳಿಕ ಆ ಮನವಿಗೆ ಸ್ಪಂದಿಸಿದ ಕೆ.ಜಿ.ಬೋಪಯ್ಯ, ಗದ್ದೆಗಳಲ್ಲಿ ಹೂಳೆತ್ತಲು, ಮರಳು ತೆಗೆಯಲು ಅವಕಾಶ ನೀಡಲಾಗಿದೆ. ಸಣ್ಣ ನೀರಾವರಿ ಇಲಾಖೆ ವತಿಯಿಂದ ನದಿಯಲ್ಲಿ ಹೂಳೆತ್ತುವ ಕಾರ್ಯಕ್ಕೆ ₹ 175 ಕೋಟಿ ಕಾರ್ಯ ಯೋಜನೆ ಹಾಕಿಕೊಳ್ಳಲಾಗಿದೆ. ಸಚಿವ ಸ್ಥಾನ ನೀಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಕುಶಾಲಪ್ಪ, ಮಡಿಕೇರಿ ತಾಲ್ಲೂಕು ಪಂಚಾಯಿತಿ ಸದಸ್ಯ ನಾಗೇಶ್ ಕುಂದಲ್ಪಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡೀನ್ ಬೋಪಣ್ಣ, ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.