ADVERTISEMENT

ವಿರಾಜಪೇಟೆ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಜನವರಿ 2025, 5:33 IST
Last Updated 28 ಜನವರಿ 2025, 5:33 IST
ವಿರಾಜಪೇಟೆ ಪುರಭವನದಲ್ಲಿ ಶನಿವಾರ ನಡೆದ ಅಲ್ಪಸಂಖ್ಯಾತ ಪ್ರಮುಖರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್ ಮಾತನಾಡಿದರು
ವಿರಾಜಪೇಟೆ ಪುರಭವನದಲ್ಲಿ ಶನಿವಾರ ನಡೆದ ಅಲ್ಪಸಂಖ್ಯಾತ ಪ್ರಮುಖರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್ ಮಾತನಾಡಿದರು   

ವಿರಾಜಪೇಟೆ: ‘ಜಿಲ್ಲೆಯಲ್ಲಿ ಹೆಚ್ಚು ಅಲ್ಪಸಂಖ್ಯಾತ ಮತದಾರರನ್ನು ಹೊಂದಿರುವ ವಿರಾಜಪೇಟೆ ಬ್ಲಾಕ್‌ನ ನೂತನ ಅಧ್ಯಕ್ಷರಾಗಿ ಅಲ್ಪಸಂಖ್ಯಾತರನ್ನೇ ನೇಮಕಗೊಳಿಸಬೇಕು ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ವಿರಾಜಪೇಟೆ ಬ್ಲಾಕ್‌ನ ಅರ್ಹ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ ಪಕ್ಷದ ಟಿಕೆಟ್ ನೀಡಬೇಕು’ ಎಂದು ವಿರಾಜಪೇಟೆಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ ಪ್ರಮುಖರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್‌ನ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಪುರಭವನದಲ್ಲಿ ನಡೆದ ಅಲ್ಪಸಂಖ್ಯಾತ ಪ್ರಮುಖರ ಸಭೆಯಲ್ಲಿ ಈ ನಿರ್ಣಯ ಕೈಗೊಂಡು, ನಿರ್ಣಯವನ್ನು ಶಾಸಕರಿಗೆ ಮತ್ತು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಕಳುಹಿಸಿಕೊಡುವಂತೆಯೂ ತೀರ್ಮಾನಿಸಲಾಯಿತು.

ಬ್ಲಾಕ್ ಕಾಂಗ್ರೆಸ್‌ನ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್ ಮಾತನಾಡಿ, ‘ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಅವಧಿ ಇದೀಗ ಪೂರ್ಣಗೊಂಡಿದ್ದು, ನೂತನ ಅಧ್ಯಕ್ಷರಾಗಿ ಅಲ್ಪಸಂಖ್ಯಾತರನ್ನೇ ನೇಮಿಸಬೇಕು ಎಂಬ ಗಟ್ಟಿ ಧ್ವನಿ ಕೇಳಿ ಬರುತ್ತಿದೆ. ಈ ಬೇಡಿಕೆಯನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು’ ಎಂದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಎ. ಹನೀಫ್ ಮಾತನಾಡಿ, ‘ಪಕ್ಷದ ಸಾಂಪ್ರದಾಯಿಕ ಮತದಾರರಾಗಿರುವ ಅಲ್ಪಸಂಖ್ಯಾತರು ಯಾವುದೇ ಸಂದಿಗ್ಧತೆ ಪರಿಸ್ಥಿತಿಯಲ್ಲೂ ಪಕ್ಷವನ್ನು ಕೈ ಬಿಟ್ಟಿಲ್ಲ. ಈ ಕಾರಣದಿಂದಲೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಇಬ್ಬರು ಶಾಸಕರನ್ನು ಆರಿಸಿ ಕಳಿಸುವುದರ ಮೂಲಕ 25 ವರ್ಷಗಳ ಕನಸನ್ನು ನನಸಾಗಿದೆ’ ಎಂದರು.

ತಾಲ್ಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ ಮಾತನಾಡಿ, ‘ಶಾಸಕ  ಎ.ಎಸ್. ಪೊನ್ನಣ್ಣ ಅವರ ಕಾರ್ಯವೈಖರಿಯಿಂದಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಮುನ್ನೆಲೆಗೆ ಬಂದಿದೆ. ಪಕ್ಷ ಇನ್ನಷ್ಟು ಬಲಗೊಳ್ಳಲು ಕ್ಷೇತ್ರದ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡಬೇಕಾಗಿದೆ’ ಎಂದರು.

ಪುರಸಭಾ ಸದಸ್ಯರಾದ ಮೊಹಮ್ಮದ್ ರಾಫಿ ಮಾತನಾಡಿದರು. ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಾನ್ಸನ್ ಮಾತನಾಡಿ, ‘ಪ್ರತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಮುಖಂಡರು ಮತ್ತು ಕಾರ್ಯಕರ್ತರು ರಸ್ತೆಗಿಳಿದು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ. ಆದ್ದರಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅಲ್ಪಸಂಖ್ಯಾತರನ್ನೇ ನೇಮಕ ಮಾಡಬೇಕು’ ಎಂದರು.

ಪುರಸಭಾ ಸದಸ್ಯ ಮತೀನ್, ಪಕ್ಷದ ಪ್ರಮುಖರಾದ ಏಜಾಸ್ ಅಹಮದ್, ಜೋಕಿಂ ರಾಡ್ರಿಗಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎ. ನಾಸರ್, ಸಿದ್ದಾಪುರದ ಕೆ.ಸಿ. ಶುಕೂರ್, ಮರ್ವಿನ್ ಲೋಬೋ, ಬಿಳುಗುಂದ ವಲಯ ಕಾಂಗ್ರೆಸ್ ಅಧ್ಯಕ್ಷ ನಾಸಿರ್ ಮಾತನಾಡಿದರು.

ಸಭೆಯಲ್ಲಿ ಪುರಸಭಾ ಸದಸ್ಯ ಬೆನ್ನಿ ಆಗಸ್ಟಿನ್, ಆತಿಫ್ ಮನ್ನ, ಶಾಹುಲ್ ಹಮೀದ್, ಅಬ್ದುಲ್ ಜಲೀಲ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಎಂ.ಎಂ. ಇಸ್ಮಾಯಿಲ್, ಡಿ.ಸಿ.ಸಿ ಸದಸ್ಯ ಅಂದಾಯಿ, ಆರ್ಜಿ ಗ್ರಾ.ಪಂ ಅಧ್ಯಕ್ಷೆ ಫಾತಿಮಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.