ADVERTISEMENT

‘ಪಂದ್ಯಂಡ ಬೆಳ್ಯಪ್ಪ ಪ್ರತಿಮೆ ಸ್ಥಾಪಿಸಿ’

ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 12:40 IST
Last Updated 20 ನವೆಂಬರ್ 2020, 12:40 IST
ಮಡಿಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರಿಗೆ ಕೊಡಗು ಸಹಕಾರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು
ಮಡಿಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರಿಗೆ ಕೊಡಗು ಸಹಕಾರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಹಕಾರ, ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿರುವ ಪಂದ್ಯಂಡ ಬೆಳ್ಯಪ್ಪ ಅವರ ಪ್ರತಿಮೆಯನ್ನು ನಗರದ ಸೀನಿಯರ್ ಕಾಲೇಜು ವೃತ್ತದಲ್ಲಿ ಸ್ಥಾಪಿಸಬೇಕು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಆಗ್ರಹಿಸಿದರು.

ರಾಜ್ಯ ಸಹಕಾರ ಮಹಾ ಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆಯ ಆಶ್ರಯದಲ್ಲಿ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿದೋದ್ಧೇಶ ಸಹಕಾರ ಸಂಘದ ಸಭಾಂಗಣದಲ್ಲಿ ಶುಕ್ರವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ‘ಆರ್ಥಿಕ ಸೇರ್ಪಡೆ, ಡಿಜಿಟಲೀಕರಣ ಮತ್ತು ಸಾಮಾಜಿಕ ಜಾಲತಾಣ’ ದಿನಾಚರಣೆ ಹಾಗೂ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಪಂದ್ಯಂಡ ಬೆಳ್ಯಪ್ಪ ಅವರು ಕೊಡಗಿನ ಗಾಂಧಿ ಎಂದೇ ಪ್ರಸಿದ್ಧರಾಗಿದ್ದರು. ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಹೇಳಿದರು.

ADVERTISEMENT

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ 1950ರಲ್ಲಿ ಸೀನಿಯರ್ ಕಾಲೇಜು ಆರಂಭವಾಗಲು ಪಂದ್ಯಂಡ ಬೆಳ್ಯಪ್ಪ ಅವರ ಕೊಡುಗೆ ಅಪಾರವಾಗಿದೆ. ಅಂದಿನ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಜವಾಹರ್‌ಲಾಲ್‌ ನೆಹರು ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಸೀನಿಯರ್ ಕಾಲೇಜು ಆರಂಭವಾಗಲು ಕಾರಣಕರ್ತರಾಗಿದ್ದಾರೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂಬ ಉದ್ದೇಶದಿಂದ ಅಂದು ಸೀನಿಯರ್ ಕಾಲೇಜು ಆರಂಭವಾಗಲು ಪಂದ್ಯಂಡ ಬೆಳ್ಯಪ್ಪ ಅವರು ಶ್ರಮಿಸಿದ್ದಾರೆ ಎಂದು ಮನು ಮುತಪ್ಪ ಅವರು ಸ್ಮರಿಸಿದರು.

ಕೊಡಗಿನ ಸಹಕಾರ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಪಂದಿಕುತ್ತೀರ ಚಂಗಪ್ಪ ಮತ್ತು ರಾಷ್ಟ್ರಮಟ್ಟದಲ್ಲಿಯೇ ದೊಡ್ಡ ಹೆಸರು ಮಾಡಿದವರು ಎಂ.ಸಿ.ನಾಣಯ್ಯ ಅವರು ಎಂದು ಹೇಳಿದರು.

ಕೊಡಗು ಜಿಲ್ಲೆಯ ಸಹಕಾರ ಯೂನಿಯನ್ ಮೂಲಕ ತ್ರೈಮಾಸಿಕ ಪತ್ರಿಕೆಯನ್ನು ತರಲಾಗುತ್ತಿದ್ದು, ಸಹಕಾರಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು. ಡಿಸಿಸಿ ಬ್ಯಾಂಕ್ ಸಹಕಾರದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಹಕಾರ ಯೂನಿಯನ್ ಮತ್ತಷ್ಟು ಬಲಪಡಿಸುವಂತಾಗಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಅವರು ಹೇಳಿದರು.

ಕೊಡಗು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂ.ಪಿ.ಮುತಪ್ಪ ಅವರು ಮಾತನಾಡಿ, ಸಹಕಾರ ಕ್ಷೇತ್ರವನ್ನು ಪ್ರತಿಯೊಬ್ಬರೂ ಪ್ರೀತಿಸಬೇಕು. ಜನರಿಂದ ಜನರಿಗಾಗಿ ಜನರಿಗೋಸ್ಕರ ಸಹಕಾರ ಕ್ಷೇತ್ರ ಇದೆ ಎಂಬುದನ್ನು ಅರ್ಥಮಾಡಿಕೊಂಡು ಸಹಕಾರ ಕ್ಷೇತ್ರವನ್ನು ಬೆಳೆಸಬೇಕಿದೆ ಎಂದು ಕರೆ ನೀಡಿದರು.

ಕೊಡಗು ಜಿಲ್ಲೆ ಸೇನೆ, ಸಹಕಾರ, ಸಿನಿಮಾ, ಶಿಕ್ಷಣ... ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಸಹ ಮುಂದಿದ್ದು ಅದನ್ನು ಉಳಿಸಬೇಕಿದೆ. ಇಂದಿನ ಆಧುನಿಕ ಜಗತ್ತಿನಲ್ಲಿ ಸಹಕಾರ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಜೊತೆಗೆ ಮಾಹಿತಿ ಹಂಚಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

ಕೊಡಗು ಸಹಕಾರ ರತ್ನ ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಸಹಕಾರಿಗಳಾದ ಮಾತಂಡ ಎ.ರಮೇಶ್ ಅವರು, ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದರು.

ಶ್ರೇಷ್ಠ ಸಹಕಾರ ಸನ್ಮಾನ ಸ್ವೀಕರಿಸಿದ ಕುಂಬುಗೌಡನ ಉತ್ತಪ್ಪ ಹಾಗೂ ಸನ್ಮಾನಿತರಾದ ಮಚ್ಚಮಾಡ ಕಂದಾ ಭೀಮಯ್ಯ, ಚೊಟ್ಟೆಯಂಡಮಾಡ ಬೇಬಿ ಪೂವಯ್ಯ, ಕೆ.ಐ.ಸಿ.ಎಂ. ಪ್ರಾಂಶುಪಾಲಾರದ ಡಾ.ಆರ್.ಎಸ್.ರೇಣುಕಾ ಅವರು ಮಾತನಾಡಿದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಜಿಲ್ಲಾ ಸಹಕಾರ ಯೂನಿಯನ್‍ನ ಉಪಾಧ್ಯಕ್ಷ ಪಟ್ಟಡ ಮನು ರಾಮಚಂದ್ರ, ನಿರ್ದೇಶಕರಾದ ಬಿ.ಡಿ.ಮಂಜುನಾಥ್, ಎಚ್.ಎಂ.ರಮೇಶ್, ಪಿ.ಬಿ.ರಘು ನಾಣಯ್ಯ, ಕನ್ನಂಡ ಸಂಪತ್, ಕೆ.ಎ.ಜಗದೀಶ್, ಉಷಾ ತೇಜಸ್ವಿ, ಬಿ.ಎ.ರಮೇಶ್ ಚಂಗಪ್ಪ, ಎನ್.ಎ.ರವಿಬಸಪ್ಪ, ಎಂ.ಪ್ರೇಮಾ ಸೋಮಯ್ಯ, ಎಚ್.ಎನ್.ರಾಮಚಂದ್ರ, ಪಿ.ಸಿ.ಅಚ್ಚಯ್ಯ, ಕೊಡಪಾಲು ಗಣಪತಿ, ಕೆ.ಎಂ.ತಮ್ಮಯ್ಯ ಮೊದಲಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.