ಮಡಿಕೇರಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ನಗರದ ಗೌಳಿ ಬೀದಿಯಲ್ಲಿ ಸೋಮವಾರ ಚಾಲನೆ ನೀಡಿದರು.
ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಈ ಮೂಲಕ ಆರಂಭವಾಗಿದ್ದು, ಒಟ್ಟು 1,131 ಮಂದಿ ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ಮೊದಲ ದಿನ ಕೆಲವೊಂದು ತಾಂತ್ರಿಕ ಅಡಚಣೆಗಳು ಕಂಡು ಬಂದರೂ ಸಮೀಕ್ಷಾ ಕಾರ್ಯಕ್ಕೆ ಹೆಚ್ಚಿನ ತೊಂದರೆಯಾಗಲಿಲ್ಲ. ಸುಗಮವಾಗಿ ಬಹುತೇಕ ಕಡೆ ಸಮೀಕ್ಷೆ ನಡೆಯಿತು.
ಎಷ್ಟು ಮನೆಗಳ ಸಮೀಕ್ಷೆ ನಡೆಯಿತು ಎಂಬ ಮಾಹಿತಿ ಸದ್ಯಕ್ಕೆ ದೊರಕಿಲ್ಲ. ಸೆ. 23ರಿಂದ ಸಮೀಕ್ಷೆ ಮಾಡಿದ ವಿವರಗಳು ನೇರವಾಗಿ ಜಿಲ್ಲಾಧಿಕಾರಿಯವರಿಗೆ ರವಾನೆಯಾಗುವ ಸಂಭವ ಇದೆ ಎಂದು ಮೂಲಗಳು ತಿಳಿಸಿವೆ.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಮೀಕ್ಷಾ ಕಾರ್ಯಕ್ಕೆ ಯಾವುದೇ ತೊಂದರೆಯಾಗಿಲ್ಲ. ಸಮೀಕ್ಷಾ ಕಾರ್ಯ ಆರಂಭವಾಗಿದೆ’ ಎಂದರು.
ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶವನ್ನು ಈಡೇರಿಸಲು, ಅರ್ಹ ಹಿಂದುಳಿದ ವರ್ಗಗಳನ್ನು ನಿಖರವಾಗಿ ಗುರುತಿಸಿ, ಸರ್ಕಾರದ ಸೌಲಭ್ಯವನ್ನು ಸಮಪರ್ಕವಾಗಿ ತಲುಪಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವ ಭೋಸರಾಜು ಹೇಳಿದರು.
‘ಎಲ್ಲರೂ ಅವರವರ ಆತ್ಮಸಾಕ್ಷಿಗೆ ಅನುಗುಣವಾಗಿ ಮಾಹಿತಿ ನೀಡಿ. ಯಾರೋ ಹೇಳಿದರು ಎಂದು ಅವರ ಮಾತನ್ನು ಕೇಳದಿರಿ. ನಿಮಗೆ ಏನು ಅನ್ನಿಸುತ್ತೋ ಆ ಮಾಹಿತಿ ನೀಡಿ’ ಎಂದು ಸಲಹೆ ನೀಡಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ಸಮೀಕ್ಷೆದಾರರು ಉದ್ಘಾಟನೆ ವೇಳೆ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.