ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವು ಶುಕ್ರವಾರ ಇಲ್ಲಿನ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಸಾಂಕೇತಿಕವಾಗಿ ನಡೆದ ಕಾರ್ಯಕ್ರಮದಲ್ಲಿ ಸಂತ ಮೇರಿ ಶಾಲೆಯ ಮುಖ್ಯಸ್ಥ ಎಡ್ವರ್ಡ್ ವಿಲಿಯಂ ಸಾಲ್ಡಾನ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರಹೊಮ್ಮಿಸಲು ಇದೊಂದು ಪರಿಪೂರ್ಣ ವೇದಿಕೆಯಾಗಲಿದೆ ಎಂದು ಹೇಳಿದರು.
ಹೋಬಳಿ ವ್ಯಾಪ್ತಿಯ ವಿವಿಧ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹೀಗೆ 22 ಶಾಲೆಗಳ ವಿದ್ಯಾರ್ಥಿಗಳು ಭರತನಾಟ್ಯ, ಸಂಗೀತ, ಗಝಲ್, ನೃತ್ಯ, ಸಾಮೂಹಿಕ ನೃತ್ಯ, ಜನಪದ ನೃತ್ಯ, ಕೋಲಾಟ, ದೃಶ್ಯಕಲೆ, ಚಿತ್ರಕಲೆ, ಕ್ಲೇಮಾಡ್ಲಿಂಗ್, ರಸಪ್ರಶ್ನೆ, ನಾಟಕ, ಅಭಿನಯ ಗೀತೆ, ಛದ್ಮವೇಷ, ಕಂಠಪಾಠ, ಲಘು ಸಂಗೀತ, ಭಕ್ತಿಗೀತೆ, ಆಶುಭಾಷಣ ಮುಂತಾದ ಸ್ಪರ್ಧೆಗಳಲ್ಲಿ ಪ್ರತಿಭೆ ಪ್ರದರ್ಶಿಸಿದರು.
ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಸಿಆರ್ ಪಿ ಪುರುಷೋತ್ತಮ್, ಸಂತ ಮೇರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಪಿ.ಸೆಲ್ವರಾಜ್, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ, ಶಿಕ್ಷಕರಾದ ಟಿ.ಜಿ.ಪ್ರೇಮ್ಕುಮಾರ್, ಎಸ್.ಕೆ.ಸೌಭಾಗ್ಯ ಇತರರು ಇದ್ದರು.
ಸಂತ್ರಸ್ತ ಕುಟುಂಬಗಳು ಇಲ್ಲಿನ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯವಿದ್ದ ಹಿನ್ನೆಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಸರಳವಾಗಿ ಆಚರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.