ಮಡಿಕೇರಿ: ಕಲ್ಲಡ್ಕ ಪ್ರಭಾಕರ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ವುಮೆನ್ ಇಂಡಿಯಾ ಮೂವ್ಮೆಂಟ್ ಸಂಘಟನೆಯ ಅಧ್ಯಕ್ಷೆ ಎಂ.ಇ.ಸಲಿಕತ್ ಅವರು ಇಲ್ಲಿನ ನಗರ ಠಾಣೆಗೆ ದೂರು ನೀಡಿದ್ದಾರೆ.
ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಲವ್ ಜಿಹಾದ್’ ಕುರಿತು ಉಲ್ಲೇಖಿಸಿ ಮುಸ್ಲಿಂ ಯುವತಿಯರನ್ನು ಅವಮಾನಿಸಿದ್ದಾರೆ. ತ್ರಿವಳಿ ತಲಾಕ್ ರದ್ದುಪಡಿಸಿರುವ ಕ್ರಮವನ್ನು ಪ್ರಸ್ತಾಪಿಸಿ ಮಹಿಳೆಯರ ವೈವಾಹಿಕ ಜೀವನದ ಕುರಿತು ಅತ್ಯಂತ ಕೀಳಾಗಿ ಮಾತನಾಡಿದ್ದಾರೆ. ದೇಶದ್ರೋಹದ ಆರೋಪ ಹೊರಿಸುವ ಮೂಲಕ ಮುಸ್ಲಿಂ ಸಮುದಾಯದ ಸಾಂವಿಧಾನಿಕವಾದ ಬದುಕುವ ಹಕ್ಕಿನ ಮೇಲೆ ದಾಳಿಗೆ ಪ್ರಚೋದಿಸುವ ಕೃತ್ಯ ಮಾಡಿದ್ದಾರೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಡಿಕೇರಿ ನಗರಸಭಾ ಸದಸ್ಯೆಯರಾದ ಮೇರಿ ವೇಗಸ್, ನೀಮಾ ಹರ್ಷದ್ ಹಾಗೂ ಜಿಲ್ಲಾ ಸಮಿತಿ ಸದಸ್ಯೆ ತಾಹಿರಾ ಇಬ್ರಾಹಿಂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.