
ಕುಶಾಲನಗರದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿಸಿದ ಸುಸಜ್ಜಿತ ಕಂಪ್ಯೂಟರ್ ಕೊಠಡಿಯನ್ನು ಶಾಸಕ ಡಾ.ಮಂತರ್ ಗೌಡ ಶನಿವಾರ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್, ಉಪಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ , ವಿ.ಪಿ.ಶಶಿಧರ್, ಕೆ.ಪಿ.ಚಂದ್ರಕಲಾ ಭಾಗವಹಿಸಿದ್ದರು.
ಕುಶಾಲನಗರ: ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣ ಪಡೆದು ತಮ್ಮ ಜ್ಞಾನ ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಸಲಹೆ ನೀಡಿದರು.
ಪಟ್ಟಣದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘ ₹12 ಲಕ್ಷ ವೆಚ್ಚದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿಸಿರುವ ಸುಸಜ್ಜಿತ ಕಂಪ್ಯೂಟರ್ ಕೊಠಡಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ತುಂಬ ಅಗತ್ಯವಾಗಿದೆ. ಮಕ್ಕಳು ಧನಾತ್ಮಕ ಚಿಂತನೆ ಹೊಂದಿ, ಕಂಪ್ಯೂಟರ್ನಲ್ಲಿ ಪಠ್ಯಕ್ಕೆ ಪೂರಕವಾದ ವಿಚಾರ ತಿಳಿಯಬೇಕು ಎಂದರು. ಕಾಲೇಜಿಗೆ ತಡೆಗೋಡೆ ನಿರ್ಮಿಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದರು.
ಸಹಕಾರ ಸಂಘದ ಅಧ್ಯಕ್ಷ ಟಿ.ಆರ್. ಶರವಣ ಕುಮಾರ್ ಮಾತನಾಡಿ, ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗಾಗಿ ಕಂಪ್ಯೂಟರ್ ಶಿಕ್ಷಣದ ಯೋಜನೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬೇಕು. 21 ಕಂಪ್ಯೂಟರ್, ಇನ್ನಿತರ ಸಲಕರಣೆ ಕೊಡುಗೆ ನೀಡಲಾಗಿದೆ. ಕಂಪ್ಯೂಟರ್ಗಳ ತಾಂತ್ರಿಕ ನಿರ್ವಹಣೆಯನ್ನು ಸಂಘ ವಹಿಸಲಿದೆ ಎಂದರು.
ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ. ಪಿ. ಶಶಿಧರ್ ಮಾತನಾಡಿ, ಜನಪರ ಕಾರ್ಯಗಳ ಮೂಲಕ ಸಂಘದ ಅಧ್ಯಕ್ಷ ಶರವಣಕುಮಾರ್ ಸರ್ಕಾರಿ ಕಾಲೇಜಿಗೆ ಗುಣಮಟ್ಟದ ಕಂಪ್ಯೂಟರ್ ಲ್ಯಾಬ್ ನಿರ್ಮಿಸಿಕೊಟ್ಟಿರುವುದು ಹೆಮ್ಮೆಯ ಸಂಗತಿ. ಕಾಲೇಜುಗಳು ಅಭಿವೃದ್ಧಿ ಹೊಂದುತ್ತಿವೆ ಎಂದರು. ಪ್ರಭಾರ ಡಿಡಿಪಿಯು ಪಿ.ಆರ್. ವಿಜಯ್ ಮಾತನಾಡಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಂಘಸಂಸ್ಥೆಗಳ ಕೊಡುಗೆ ತುಂಬ ಅಗತ್ಯವಾಗಿದೆ ಎಂದರು. ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಮತ್ತು ಪದಾಧಿಕಾರಿಗಳನ್ನು ಗೌರವಿಸಿದರು. ಸಾಧಕ ವಿದ್ಯಾರ್ಥಿಗಳಾದ ಚಿಂತನಾ , ದಿವ್ಯಾ, ಅಭಿಯಾ ಅವರನ್ನು ಸನ್ಮಾನಿಸಲಾಯಿತು.
ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಸ್.ಎನ್. ರಾಜೇಂದ್ರ, ಪ್ರಭಾರ ಪ್ರಾಂಶುಪಾಲೆ ಬಿ.ಜಿ. ಶಾಂತಿ ಮತ್ತು ಸಂಘದ ಉಪಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಸಂಘದ ನಿರ್ದೇಶಕರಾದ ರಾಮಕೃಷ್ಣಯ್ಯ, ಶಿವಪ್ರಕಾಶ್, ನಾರಾಯಣ, ಸುರೇಶ್ ಕುಮಾರ್, ಶರತ್, ಕವಿತಾ, ಅಮೃತ್, ಸುರೇಶ್, ಕೃತಿಕಾ ಪೊನ್ನಪ್ಪ ಮತ್ತು ಕೀರ್ತಿ ಲಕ್ಷ್ಮಿ , ಸಹ ನಿರ್ದೇಶಕರಾದ ಆರ್. ಕೆ.ನಾಗೇಂದ್ರ ಬಾಬು ಸೇರಿದಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಡಿ. ಶ್ರೀಜೇಶ್, ವ್ಯವಸ್ಥಾಪಕ ಆರ್. ರಾಜು, ನಾಡಪ್ರಭು ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್, ಉಪನ್ಯಾಸಕಿ ಪ್ರಿಯಾಂಕಾ, ಪ್ರಾಂಶುಪಾಲೆ ಬಿ.ಜಿ.ಶಾಂತಿ, ನಂದೀಶ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.