ಕುಶಾಲನಗರ: ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರದ ಬಿಜೆಪಿ ಸರ್ಕಾರ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಕಾಂಗ್ರೆಸ್ ಕಚೇರಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಸಂವಿಧಾನ ವಿರೋಧಿ ಕಾರ್ಯ ನಡೆಸುತ್ತಿದ್ದಾರೆ. ಕರ್ನಾಟಕದ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಧಿಕ್ಕಾರ ಕೂಗಿದರು.
ನಂತರ ತಹಸೀಲ್ದಾರ್ ಕಚೇರಿ ವರೆಗೆ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಅಧಿಕಾರ ಕೈತಪ್ಪಿ ಹೋದ ಕಡೆಗಳಲ್ಲಿ ಬಿಜೆಪಿ ವಾಮಮಾರ್ಗದ ಮೂಲಕ ಅಧಿಕಾರ ಪಡೆಯುವ ಯತ್ನ ನಡೆಸುವುದು ಸಾಮಾನ್ಯ. ಬಿಜೆಪಿ ವಿರುದ್ಧ ದನಿ ಎತ್ತಿದರೆ ಅವರ ವಿರುದ್ಧ ಪಿತೂರಿ ನಡೆಸಿ ಪ್ರಕರಣ ದಾಖಲಿಸುವ ಪ್ರವೃತ್ತಿ ಹೊಂದಿರುವ ಕೇಂದ್ರ ಸರ್ಕಾರ ಕರ್ನಾಟಕದ ಮುಖ್ಯಮಂತ್ರಿ ವಿರುದ್ಧ ಇ.ಡಿ., ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡು ಹತ್ತಿಕ್ಕುವ ಪ್ರಯತ್ನ ನಡಸುತ್ತಿರುವುದು ಖಂಡನೀಯ ಎಂದರು.
ಯಾವುದೇ ಭ್ರಷ್ಟಾಚಾರವಿಲ್ಲದ ಪ್ರಕರಣ ಬಳಸಿಕೊಂಡು ಸಿದ್ದರಾಮಯ್ಯ ಅವರನ್ನು ಹತ್ತಿಕ್ಕಲು ಮುಂದಾಗಿರುವ ಕೇಂದ್ರ ಸರ್ಕಾರದ ಅಣತಿಯಂತೆ ಹಮ್ಮಿಕೊಂಡಿರುವ ಮೈಸೂರು ಷಲೋ ಆಂದೋಲನ ಅರ್ಥಹೀನ ಎಂದರು.
ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡುರಾವ್, ನಟೇಶ್ ಗೌಡ, ಪ್ರಮುಖರಾದ ಜೋಸೆಫ್ ವಿಕ್ಟರ್ ಸೋನ್ಸ್, ಶಿವಶಂಕರ್, ಕಿರಣ್, ಪದ್ಮಾ, ಜಗದೀಶ್, ಶಾಜಿ, ಖಲೀಮುಲ್ಲಾ, ಟಿ.ಪಿ.ಹಮೀದ್, ನವೀನ್ ಗೌಡ, ಅಣ್ಣಯ್ಯ ರಫೀಕ್, ಶಿವಮ್ಮ, ಕೃಷ್ಣೇಗೌಡ, ಶೇಖರ್, ಆದಂ, ರೋಷನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.