ADVERTISEMENT

ದೆಹಲಿ ಧಾರ್ಮಿಕ ಸಭೆಯಲ್ಲಿ ಕೊಡಗು ಜಿಲ್ಲೆಯ 11 ಮಂದಿ: ವಿಳಾಸ ಪತ್ತೆ

ದೆಹಲಿಯಲ್ಲಿ ಐವರ ಕ್ವಾರಂಟೈನ್‌, ಸೈನಿಕರೊಬ್ಬರಿಗೆ ಜಿಲ್ಲೆಯಲ್ಲಿ ನಿಗಾ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 11:34 IST
Last Updated 1 ಏಪ್ರಿಲ್ 2020, 11:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ದೆಹಲಿಯ ನಿಜಾಮುದ್ದೀನ್‌ ಪ್ರದೇಶದ ತಬ್ಲೀಗ್‌ ಜಮಾತ್‌ ಕೇಂದ್ರದಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಜಿಲ್ಲೆಯ 11 ಮಂದಿ ಪಾಲ್ಗೊಂಡಿದ್ದು ಬೆಳಕಿಗೆ ಬಂದ ಬಳಿಕ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಆದರೆ, ಅದರಲ್ಲಿ ಬಹುತೇಕರು ಜಿಲ್ಲೆಗೆ ವಾಪಸ್ಸಾಗಿಲ್ಲ.

ಜಿಲ್ಲೆಯಿಂದ ಭಾಗವಹಿಸಿದ್ದ 11 ಮಂದಿಯ ವಿಳಾಸ ಪತ್ತೆ ಮಾಡಲಾಗಿದ್ದು, ಅಧಿಕಾರಿಗಳ ತಂಡವು ಅವರ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದೆ.

11 ಮಂದಿ ಪೈಕಿ, 5 ಮಂದಿ ದೆಹಲಿಯಲ್ಲೇ ಕ್ವಾರಂಟೈನ್‌ನಲ್ಲಿ ಇದ್ದಾರೆ. ಇನ್ನೂ 5 ಮಂದಿ ಹೊರ ಜಿಲ್ಲೆಗಳಲ್ಲಿ ವಾಸವಿದ್ದು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ADVERTISEMENT

ಒಬ್ಬರು ಮಾತ್ರ ಜಿಲ್ಲೆಯಲ್ಲಿ ವಾಸವಿದ್ದು ಅವರ 14 ದಿನಗಳ ಕ್ವಾರಂಟೈನ್ ಅವಧಿ ಮುಕ್ತಾಯವಾಗಿದೆ. ಆದರೂ, ಮುನ್ನೆಚ್ಚರಿಕಾ ಕ್ರಮವಾಗಿ ಅವರ ಮೇಲೆ ನಿಗಾ ವಹಿಸಲಾಗಿದೆ. ಜಿಲ್ಲೆ ಜನರು ಆತಂಕ ಪಡುವ ಅಗತ್ಯವಿಲ್ಲ. ದೆಹಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರು ಪರಿಶೀಲನೆ ವೇಳೆ ಬಿಟ್ಟು ಹೋಗಿದ್ದರೆ ಹತ್ತಿರದ ಆಸ್ಪತ್ರೆ ಭೇಟಿ ಮಾಡುವಂತೆ ಜಿಲ್ಲಾಧಿಕಾರಿ ಕೋರಿದ್ದಾರೆ.

ಧರ್ಮಸಭೆಯ ವೇಳೆ ಜಿಲ್ಲೆಯ ಇಬ್ಬರು ಸೈನಿಕರು ಆ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಿದ್ದು ಪತ್ತೆಯಾಗಿದೆ. ಇಬ್ಬರೂ ಜಿಲ್ಲೆಗೆ ವಾಪಸ್ಸಾಗಿದ್ದು ಅದರಲ್ಲಿ ಒಬ್ಬರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.