ಸುಂಟಿಕೊಪ್ಪ: ವಾರದ ರಜೆ ದಿನವಾದ ಶನಿವಾರ ಮತ್ತು ಭಾನುವಾರ ಕೊಡಗಿಗೆ ಪ್ರವಾಸಿಗರ ದಂಡು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಸುಂಟಿಕೊಪ್ಪ ಸಮೀಪದ ಚಿಕ್ಲಿಹೊಳೆ ಜಲಾಶಯದಲ್ಲಿ ಜನಜಂಗುಳಿ ಹೆಚ್ಚಾಗಿತ್ತು.
ಕಳೆದ ಹಲವು ದಿನಗಳಿಂದ ಕೊಡಗಿಗೆ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿತ್ತು. ಆದರೆ ಶನಿವಾರ, ಭಾನುವಾರ ಜೊತೆಗೆ ಸ್ವಾತಂತ್ರ್ಯ ದಿನದ ರಜೆ ಇರುವ ಕಾರಣ ಕೊಡಗಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದರಿಂದ ಚಿಕ್ಲಿಹೊಳೆಗೆ ಜಲಾಶಯ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಜನಸಾಗರ ಹರಿದುಬಂದಿತ್ತು. ವಾಹನ ನಿಲುಗಡೆಗೆ ಕಷ್ಟಕರವಾಗಿದ್ದರಿಂದ ಕಂಬಿಬಾಣೆ- ಚಿಕ್ಲಿಹೊಳೆ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ತಲೆದೋರಿ ಕಿ.ಮೀ ಗಟ್ಟಲೇ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಸಾರ್ವಜನಿಕರ ಅಸಮಾಧಾನ
ರಜೆ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ತಾಣವಾಗಿರುವ ಚಿಕ್ಲಿಹೊಳೆಗೆ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ವಾಹನ ಪಾರ್ಕಿಂಗ್ ಗೆ ಸಮರ್ಪಕವಾದ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆ ಮಾಡದ ಕಾರಣ, ರಜಾ ದಿನಗಳಲ್ಲಿ ವಾಹನ ಸಂಚಾರ ಮತ್ತು ಜನರ ಓಡಾಟಕ್ಕೆ ಕಷ್ಟಕರವಾಗುತ್ತಿದೆ. ಈ ಬಗ್ಗೆ ಇಲಾಖೆಯ ನಿರ್ಲಕ್ಷವೇ ನೇರ ಕಾರಣ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.
ರಸ್ತೆ ದಾಟಲು ತಡಕಾಡಿದ ಜನ
ಸಂತೆ ದಿನವಾದ ಭಾನುವಾರ ರಾಷ್ಟ್ರೀಯ ಹೆದ್ದಾರಿ 275 ಅನ್ನು ದಾಟಲು ಜನರು ತಡಕಾಡಿದ ದೃಶ್ಯ ಕಂಡು ಬಂತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.