
ಕುಶಾಲನಗರ: ‘ಸಾಹಿತ್ಯದ ಮೂಲಕ ಪ್ರತಿಭಟನೆಯನ್ನು ದಾಖಲಿಸಿದರೂ ಎಂದಿಗೂ ಹಿಂಸೆಯನ್ನು ಬೆಂಬಲಿಸಲಿಲ್ಲ. ಸಮಸಮಾಜಕ್ಕೆ ಅವರು ಸದಾ ಮಿಡಿಯುತ್ತಿದ್ದರು. ಹಿರಿಯ ಕವಿಗಳ ಆದರ್ಶ ಬದುಕು, ಹೋರಾಟ ವಿದ್ಯಾರ್ಥಿ ಯುವ ಸಮುದಾಯಕ್ಕೆ ಮಾದರಿಯಾಗಿದ್ದರು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ,ಎಸ್ಟಿ ನೌಕರರ ಸಮನ್ವಯ ಸಮಿತಿ ಕೊಡಗು ಜಿಲ್ಲಾ ಘಟಕ ವತಿಯಿಂದ ಸಿದ್ದಲಿಂಗಯ್ಯ ಜನ್ಮದಿನದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಕವಿಗೋಷ್ಠಿ, ವಿಚಾರಗೋಷ್ಠಿ, ಗೀತಾಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ನಾಡು ಕಂಡ ಹೆಮ್ಮೆಯ ಸೂಕ್ಷ್ಮಪ್ರಜ್ಞಾ ಸಾಹಿತಿ ಸಿದ್ಧಲಿಂಗಯ್ಯ, ಇವರ ಹೋರಾಟ ಅನುಕರಣೀಯ ಎಂದರು.
ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಕಾರ್ಯಕ್ರಮ ಉದ್ಘಾಟಿಸಿ, ‘ಸರಳ ಸಜ್ಜನಿಕೆಯ ವ್ಯಕ್ತಿತ್ವವುಳ್ಳ ಸಿದ್ಧಲಿಂಗಯ್ಯನವರು ದಲಿತ ಬಂಡಾಯ ಸಾಹಿತಿ ಎಂದೇ ಖ್ಯಾತಿ ಪಡೆದವರು’ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಖಜಾಂಚಿ ಶಿವರುದ್ರಯ್ಯ ಮಾತನಾಡಿ, ‘ಸಿದ್ಧಲಿಂಗಯ್ಯನವರು ಧೀಮಂತರ ವಿಚಾರಗಳನ್ನು ಓದಿಕೊಂಡು ಇವರ ವಿಚಾರಧಾರೆಗಳಿಂದ ಆಕರ್ಷಣೆಗೆ ಒಳಗಾಗಿ ಪ್ರಭಾವಿತರಾದವರು’ ಎಂದರು.
ಕನ್ನಡ ಸಿರಿ ಸ್ನೇಹ ಬಳಗ ಅಧ್ಯಕ್ಷ ಲೋಕೇಶ್ ಸಾಗರ್ ,ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಸಿದ್ದಲಿಂಗಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಮನ್ವಯ ಸಮಿತಿ ಕೊಡಗು ಜಿಲ್ಲಾ ಘಟಕ ಅಧ್ಯಕ್ಷ ಎಂ.ಎಸ್.ಮಹೇಂದ್ರ ಅಧ್ಯಕ್ಷತೆ ವಹಿಸಿದ್ದರು. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ ಭಾರದ್ವಜ್ ಕೆ.ಆನಂದತೀರ್ಥ ವಹಿಸಿದ್ದರು.
ನಿವೃತ್ತ ಪ್ರಾಂಶುಪಾಲ ಡಾ. ಸೋಮಣ್ಣ, ಸಮನ್ವಯ ಸಮಿತಿ ಕೊಡಗು ಜಿಲ್ಲಾ ಘಟಕದ ಗೌರವಾಧ್ಯಕ್ಷ ಆರ್. ವಿಜಯಾನಂದ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ನಾಗೇಶ್, ಮುಖಂಡರಾದ ದಿನೇಶ್, ಜವರಪ್ಪ ಪಾಲ್ಗೊಂಡಿದ್ದರು. ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ, ಕವನ ವಾಚಿಸಿದ ಯುವ ಕವಿಗಳಿಗೆ ಡಾ.ಸಿದ್ದಲಿಂಗಯ್ಯನವರ ಪುಸ್ತಕದೊಂದಿಗೆ ಪ್ರಶಂಸನಾ ಪತ್ರ, ನೆನಪಿನ ಕಾಣಿಕೆ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.