ADVERTISEMENT

ಮಡಿಕೇರಿ: ಜಲಮೂಲಗಳ ಬಗ್ಗೆ ಸ್ಥಳೀಯರ ಆತಂಕ

ಘನತ್ಯಾಜ್ಯ ಸಂಸ್ಕರಣ ಮತ್ತು ವಿಲೇವಾರಿ ಘಟಕ ನಿರ್ಮಾಣ ಕುರಿತು ಚರ್ಚೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 13:01 IST
Last Updated 23 ಸೆಪ್ಟೆಂಬರ್ 2022, 13:01 IST
ಮಡಿಕೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆ ವತಿಯಿಂದ ಗುರುವಾರ ಕರೆಯಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿದರು. ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ ಇದ್ದಾರೆ
ಮಡಿಕೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆ ವತಿಯಿಂದ ಗುರುವಾರ ಕರೆಯಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿದರು. ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ ಇದ್ದಾರೆ   

ಮಡಿಕೇರಿ: 2ನೇ ಮೊಣ್ಣಂಗೇರಿ ಗ್ರಾಮದ 10 ಎಕರೆ ಪ್ರದೇಶದಲ್ಲಿ ನಿರ್ಮಿಸಲುದ್ದೇಶಿಸಿರುವ ಘನತ್ಯಾಜ್ಯ ಸಂಸ್ಕರಣ ಮತ್ತು ವಿಲೇವಾರಿ ಘಟಕ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಾರ್ವಜನಿಕರ ಅಹವಾಲು ಆಲಿಕೆ ಸಭೆಯಲ್ಲಿ ಬಹಳಷ್ಟು ಸ್ಥಳೀಯರು ಅಲ್ಲಿರುವ ಜಲಮೂಲಗಳ ಸುರಕ್ಷತೆ ಕುರಿತು ಮಾತುಗಳನ್ನಾಡಿದರು.

ಕೆ.ನಿಡುಗಣೆ ಗ್ರಾಮ ದಯಾನಂದ ಅವರು ಮಾತನಾಡಿ, ‘2ನೇ ಮೊಣ್ಣಂಗೇರಿ ಗ್ರಾಮದಲ್ಲಿ ಗುರುತಿಸಿರುವ ಜಾಗದಲ್ಲಿ ಜಲ ಮೂಲವಿದೆ. ಆ ನೀರನ್ನು ಕುಡಿಯಲು ಮತ್ತು ತೋಟಗಳಿಗೆ ಬಳಸಲಾಗುತ್ತದೆ. ಒಂದು ವೇಳೆ ಇಲ್ಲಿ ಘನತ್ಯಾಜ್ಯ ಘಟಕವನ್ನು ನಿರ್ಮಿಸಿದರೆ ಸ್ಥಳೀಯರಿಗೆ ತೊಂದರೆಯಾಗುತ್ತದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ADVERTISEMENT

2018 ಮತ್ತು 2022 ರಲ್ಲಿ ಈ ಪ್ರದೇಶದಲ್ಲಿ ಭೂಕುಸಿತವಾಗಿದೆ. ಮುಂದಿನ ದಿನಗಳಲ್ಲಿಯೂ ಭೂಕುಸಿತವಾಗುವ ಸಂಭವ ಇರುವುದರಿಂದ ಘನತ್ಯಾಜ್ಯ ಘಟಕವನ್ನು ನಿರ್ಮಿಸಲು ಬೇರೆ ಕಡೆ ಜಾಗ ಗುರುತಿಸುವುದು ಉತ್ತಮ ಎಂದು ಹೇಳಿದರು.

ಸುಬ್ರಮಣ್ಯ ನಗರದ ನಿವಾಸಿ ಮನು ನಾಚಪ್ಪ ಅವರು ಮಾತನಾಡಿ, ‘ಈಗಾಗಲೇ ಇರುವ ಕಸವಿಲೇವಾರಿ ಘಟಕದಿಂದ ಸ್ಥಳೀಯರಿಗೆ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ. ಇದರ ಬದಲು ನಗರ ವ್ಯಾಪ್ತಿಯ ಹೊರ ವಲಯದ ಪ್ರದೇಶದಲ್ಲಿ ಘನತ್ಯಾಜ್ಯ ಘಟಕ ನಿರ್ಮಿಸುವುದು ಸೂಕ್ತ’ ಎಂದು ಸಲಹೆ ನೀಡಿದರು.

ಸುಬ್ರಮಣ್ಯ ನಗರದ ನಿವಾಸಿ ಡಾ.ಮೋಹನ ಅಪ್ಪಾಜಿ ಅವರು ಮಾತನಾಡಿ, ‘ಒಂದು ಪ್ರದೇಶದಲ್ಲಿ ದೊಡ್ಡದಾಗಿ ಘನತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಿಸುವ ಬದಲು ಬೇರೆ ಬೇರೆ ಕಡೆ ಸಣ್ಣ ಘನತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಿಸುವುದು ಉತ್ತಮ ’ಎಂದರು.

ಪರಿಸರ ಸಂಯೋಜಕ ಮುನಿರಾಜು ಘನತ್ಯಾಜ್ಯ ಸಂಸ್ಕರಣ ಮತ್ತು ವಿಲೇವಾರಿ ಘಟಕದ ನಿರ್ಮಾಣ ಯೋಜನೆ ಕುರಿತು ಮಾಹಿತಿ ನೀಡಿದರು.

ಸಾರ್ವಜನಿಕರ ಸಹಕಾರಕ್ಕೆ ಮನವಿ

ಅಭಿಪ್ರಾಯಗಳನ್ನು ಆಲಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ‘ದಿನದಿಂದ ದಿನಕ್ಕೆ ನಗರ ಬೆಳೆಯುತ್ತಿದ್ದು, ಘನತ್ಯಾಜ್ಯಗಳು ಹೆಚ್ಚುತ್ತಿದೆ. ಇದರಿಂದ ಹೊಸ ಸಮಸ್ಯೆಗಳು ಹುಟ್ಟಿಕೊಳ್ಳುತ್ತಿವೆ. ಇದನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕಿರುವುದರಿಂದ ಸಾರ್ವಜನಿಕರ ಸಹಕಾರ ಅಗತ್ಯ’ ಎಂದು ತಿಳಿಸಿದರು.

ನಗರದಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು 2ನೇ ಮೊಣ್ಣಂಗೇರಿ ಗ್ರಾಮದಲ್ಲಿ ನಿಗದಿಪಡಿಸಿರುವ ಜಾಗವನ್ನು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡೇ ಸ್ಥಳವನ್ನು ಗುರುತಿಸಲಾಗಿದೆ. ಘಟಕ ನಿರ್ಮಿಸಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಕಸ ನಿರ್ವಹಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಜಿಲ್ಲಾಡಳಿತದ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ನಗರಸಭೆ ವತಿಯಿಂದ ಪ್ರತಿವಾರ ಅಂಗಡಿಗಳ ಮೇಲೆ ದಾಳಿ ಮಾಡಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ಕುರಿತು ಇನ್ನೊಬ್ಬರಿಗೆ ಹೇಳುವ ಮೊದಲು ನಾವು ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಬೇಕು ಎಂದು ತಿಳಿಸಿದರು.

ಹೈಕೋರ್ಟ್ ಆದೇಶದಂತೆ ಘನತಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲು ಜಾಗ ಗುರುತಿಸಿ ವೀಕ್ಷಣೆ ಮಾಡಲಾಗಿದೆ. ಘನತಾಜ್ಯಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮನೆಯಲ್ಲಿಯೇ ಸ್ವಯಂ ಪ್ರೇರಿತರಾಗಿ ನಿರ್ವಹಣೆ ಮಾಡುವಂತಾಗಬೇಕು. ಈ ರೀತಿ ನಿರ್ವಹಣೆ ಮಾಡುವವರಿಗೆ ಆಸ್ತಿ ತೆರಿಗೆಯಲ್ಲಿ ವಿನಾಯತಿ ನೀಡಲು ಅವಕಾಶವಿದೆಯೇ ಎಂದು ಪರಿಶೀಲಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರ ಸಲಹೆ ಆಕ್ಷೇಪಗಳ ನಡುವೆಯೂ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರ ಅಭಿಪ್ರಾಯಗಳನ್ನು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯವರಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.

ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯರಾದ ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಅಪ್ಪಣ್ಣ, ವಲಯ ಪರಿಸರ ಅಧಿಕಾರಿ ರಘುರಾಮ್, ಪೌರಾಯುಕ್ತ ವಿಜಯ್, ನಗರಸಭೆ ಆರೋಗ್ಯ ಶಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೌಮ್ಯಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.