ADVERTISEMENT

‘ಮಡಿಕೇರಿ ಸ್ಕ್ವೇರ್‌’ ಕಾಮಗಾರಿ ಆರಂಭಕ್ಕೆ ಸೂಚನೆ

ಕೊಡಗು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅಧ್ಯಕ್ಷತೆಯಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 13:13 IST
Last Updated 7 ಅಕ್ಟೋಬರ್ 2020, 13:13 IST
ಮಡಿಕೇರಿ ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌ ಮಾತನಾಡಿದರು
ಮಡಿಕೇರಿ ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌ ಮಾತನಾಡಿದರು   

ಮಡಿಕೇರಿ: ‘ನಗರದ ಖಾಸಗಿ ಹಳೇ ಬಸ್ ನಿಲ್ದಾಣದ ಬಳಿ ಕಳೆದ ಮೂರು ವರ್ಷಗಳಿಂದ ‘ಮಡಿಕೇರಿ ಸ್ಕ್ವೇರ್‌’ ಕಾಮಗಾರಿ ಸ್ಥಗಿತಗೊಂಡಿದ್ದು, ಕೂಡಲೇ ಕಾಮಗಾರಿ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದರು.

ನಗರದ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ನಗರ ಮತ್ತು ಪಟ್ಟಣ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಖಾಸಗಿ ಹಳೇ ಬಸ್ ನಿಲ್ದಾಣದ ಕಾಮಗಾರಿ ಆರಂಭಿಸಲು ಕಾರ್ಯಾದೇಶ ನೀಡಬೇಕು. ಈ ಸಂಬಂಧ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತರು ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಇಂದಿರಾ ಕ್ಯಾಂಟಿನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ನಿವಾಸದ ಬಳಿ ತಡೆಗೋಡೆ ನಿರ್ಮಾಣಕ್ಕೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ADVERTISEMENT

ನಗರೋತ್ಥಾನ ಯೋಜನೆಯಡಿ ಬಾಕಿಯಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದಾದರೂ ಕಾಮಗಾರಿ ಬದಲಾವಣೆ ಇದ್ದಲ್ಲಿ ಸ್ಥಳೀಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಗಮನಕ್ಕೆ ತಂದು ಅನುಮೋದನೆ ಪಡೆಯುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಕಾಮಗಾರಿ ಬದಲಾವಣೆಗಿರುವ ಸಂಬಂಧ ನಗರಾಭಿವೃದ್ಧಿ ಯೋಜನಾ ನಿರ್ದೇಶಕರು ಸ್ಥಳವನ್ನು ಪರಿಶೀಲಿಸಿ ವರದಿ ನೀಡಬೇಕು ಎಂದು ತಾಕೀತು ಮಾಡಿದರು.

ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಸ್ಥರು, ಎಂಜಿನಿಯರ್‌ಗಳು, ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ನಿಖರ ಮಾಹಿತಿ ಒದಗಿಸಬೇಕು. ಕಾಲಮಿತಿಯೊಳಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಹೇಳಿದರು.

ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ರಾಜು, ನಗರ ಮತ್ತು ಪಟ್ಟಣ ಪಂಚಾಯಿತಿಗಳ ಅಭಿವೃದ್ಧಿಗೆ ಎಲ್ಲಾ ಹಂತದ ಅಧಿಕಾರಿಗಳು ಪಣ ತೊಡಬೇಕಿದೆ. ಆ ನಿಟ್ಟಿನಲ್ಲಿ ಕಂದಾಯ ಸಂಗ್ರಹ, ನಗರ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಮಳಿಗೆಗಳ ಕಾಲ ಮಿತಿಯಲ್ಲಿ ಬಾಡಿಗೆ ಪಡೆಯುವುದು, ಹೊರಗುತ್ತಿಗೆ, ಇಂಧನ ಇತರ ಕಚೇರಿ ವೆಚ್ಚಕ್ಕೆ ಬಳಸಲು ಕಾರ್ಯ ಪ್ರವೃತ್ತರಾಗಬೇಕು. ಜಾಹೀರಾತು ಫಲಕಗಳ ಅಳವಡಿಕೆಗೆ ಪರವಾನಗಿ ನೀಡುವುದು ಮತ್ತು ತೆರಿಗೆ ಸಂಗ್ರಹಿಸುವ ಕಾರ್ಯವಾಗಬೇಕು ಎಂದು ಹೇಳಿದರು.

ವ್ಯಾಪಾರ ವಹಿವಾಟು ಪರವಾನಗಿ ನೀಡುವ ಸಂಬಂಧ ಸರ್ಕಾರದ ಮಾರ್ಗಸೂಚಿ ಪಾಲಿಸುವುದು ಮತ್ತಿತರ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು.

ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಶ್ರೀಧರ್ (ವಿರಾಜಪೇಟೆ), ಸುಜಯ್ (ಕುಶಾಲನಗರ), ನಾಚಪ್ಪ (ಸೋಮವಾರಪೇಟೆ), ಎಇಇ ನಟರಾಜು, ಸಹಾಯಕ ಎಂಜಿನಿಯರ್‌ ನಾಗರಾಜು, ವನಿತಾ, ನಗರ ಕುಡಿಯುವ ನೀರು ವಿಭಾಗದ ಎಇಇ ಅಜಯ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.