ADVERTISEMENT

ಮಡಿಕೇರಿ | ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ವೆಂಕಟ್ ರಾಜಾ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 5:14 IST
Last Updated 21 ಆಗಸ್ಟ್ 2025, 5:14 IST
ಮಡಿಕೇರಿಯ ಗಾಂಧಿ ಭವನದಲ್ಲಿ ಬುಧವಾರ ನಡೆದ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪುಷ್ಪನಮನ ಸಲ್ಲಿಸಿದರು
ಮಡಿಕೇರಿಯ ಗಾಂಧಿ ಭವನದಲ್ಲಿ ಬುಧವಾರ ನಡೆದ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪುಷ್ಪನಮನ ಸಲ್ಲಿಸಿದರು   

ಮಡಿಕೇರಿ: ಡಿ.ದೇವರಾಜ ಅರಸು ಅವರ ಆದರ್ಶವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಡಿ.ದೇವರಾಜ ಅರಸು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಳುವವನೆ ಭೂಮಿಯ ಒಡೆಯ, ಜೀತ ಪದ್ಧತಿ ನಿರ್ಮೂಲನೆ, ವಿದ್ಯಾರ್ಥಿ ನಿಲಯ ಸ್ಥಾಪನೆ, ಹಿಂದುಳಿದ ವರ್ಗಗಳಿಗೆ ನ್ಯಾಯ  ಆರಂಭ ಹೀಗೆ ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೂರದೃಷ್ಟಿಯಿಂದ ಆಡಳಿತ ನಡೆಸಿದರು ಎಂದು ಹೇಳಿದರು.

ADVERTISEMENT

ಸಾಮಾಜಿಕ ನ್ಯಾಯಕ್ಕಾಗಿ ಕಾನೂನನ್ನು ತಿದ್ದುಪಡಿ ಮಾಡಿ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಲು ಶ್ರಮಿಸಿದ್ದಾರೆ. ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಇರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಹಾನ್ ವ್ಯಕ್ತಿಯಾಗಿ ರೂಪುಗೊಂಡರು ಎಂದು ತಿಳಿಸಿದರು.

ವಿರಾಜಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಕೆ.ಸಿ.ದಯಾನಂದ ಮಾತನಾಡಿ, ‘ಡಿ.ದೇವರಾಜ ಅರಸು ಅವರು ಸಾಮಾಜಿಕ ಸುಧಾರಣೆಯ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ’ ಎಂದು ತಿಳಿಸಿದರು.

ಉಳುವವನೇ ಭೂಮಿಯ ಒಡೆಯ, ಭೂ ಸುಧಾರಣೆ ಮಂಡಳಿ ಸ್ಥಾಪನೆಯಿಂದ ಲಕ್ಷಾಂತರ ಗೇಣಿದಾರರಿಗೆ ಅನುಕೂಲ, ಜೀತ ಮುಕ್ತ ಮಾಡುವಲ್ಲಿ ಪ್ರಯತ್ನಿಸಿದ್ದಾರೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸ್ಥಾಪನೆ, ವೃಕ್ಷ ಸಂರಕ್ಷಣೆ ಕಾಯ್ದೆ ಜಾರಿ, ಮಲ ಹೊರುವ ಪದ್ಧತಿ ನಿಷೇಧ, ಋಣ ಮುಕ್ತ ಪರಿಹಾರ ಕಾಯ್ದೆ, ಕುಶಲಕರ್ಮಿಗಳಿಗೆ ನೆರವು, ಭಾಗ್ಯಜ್ಯೋತಿ ಯೋಜನೆ ಜಾರಿ, ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ, ಎನ್.ಜಿ.ಹಾವನೂರು ವರದಿ ಜಾರಿ, ಆರ್ಥಿಕ ಸಾಮಾಜಿಕ ಪರಿಸ್ಥಿತಿ ಹೀಗೆ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದರು. ಪ್ರತಿಯೊಬ್ಬರ ಬದುಕು ಬದಲಾಯಿಸಲು ಪ್ರಯತ್ನಿಸಿದ್ದಾರೆ ಎಂದರು.

ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಸದ್ಭಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕಿ ಕವಿತಾ ಬೋಧಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಭಿಕರು

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ತಹಶೀಲ್ದಾರ್ ಶ್ರೀಧರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ವ್ಯವಸ್ಥಾಪಕ ಶಿವಶಂಕರ, ಹಿಂದುಳಿದ ವರ್ಗಗಳ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್ ಭಾಗವಹಿಸಿದ್ದರು.

ಹಿಂದುಳಿದ ವರ್ಗಗಳ ಆಶಾಕಿರಣ; ಕೇಶವ ಕಾಮತ್

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೇಶವ ಕಾಮತ್ ಮಾತನಾಡಿ ‘ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅತ್ಯುತ್ತಮ ಆಡಳಿತ ನೀಡಿದ ಜನಸೇವಕ ಹಿಂದುಳಿದ ವರ್ಗಗಳ ಆಶಾಕಿರಣ ಹಾಗೂ ಬೆಳಕು’ ಎಂದು ಹೇಳಿದರು. ಇಂದಿರಾ ಗಾಂಧಿ ಅವರು 20 ಅಂಶಗಳನ್ನು ಜಾರಿಗೊಳಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದ್ದರು. ಅದೇ ರೀತಿ ರಾಜ್ಯದಲ್ಲಿ ಡಿ.ದೇವರಾಜ ಅರಸು ಅವರು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮರ್ಥ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದರು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.