ADVERTISEMENT

ಮಡಿಕೇರಿ: ಅತಿಸಾರ ತಡೆಯುವಿಕೆಯ ಅಭಿಯಾನಕ್ಕೆ ಚಾಲನೆ

ಜುಲೈ 31ರವರೆಗೆ ನಡೆಯಲಿದೆ ಅಭಿಯಾನ, ಜಿಲ್ಲಾ ಆರೋಗ್ಯಾಧಿಕಾರಿಯಿಂದ ಚಾಲನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 4:51 IST
Last Updated 24 ಜೂನ್ 2025, 4:51 IST
ಅತಿಸಾರ ತಡೆಗಟ್ಟುವಿಕೆ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್‌ಕುಮಾರ್ ಮಾತನಾಡಿದರು
ಅತಿಸಾರ ತಡೆಗಟ್ಟುವಿಕೆ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್‌ಕುಮಾರ್ ಮಾತನಾಡಿದರು   

ಮಡಿಕೇರಿ: ಅತಿಸಾರ ತಡೆಗಟ್ಟುವಿಕೆ ಅಭಿಯಾನವು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ನಡೆಯಿತು.

ಅಭಿಯಾನ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ‘ಸ್ಟಾಪ್ ಡೈಯೇರಿಯ ಕ್ಯಾಂಪೇನ್’ ಅನ್ನು ಜುಲೈ 31ರವರೆಗೆ ಆಯೋಜಿಸಲಾಗಿದೆ. ಎಲ್ಲಾ 5 ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಒಂದು ಮಗುವಿಗೆ ಎರಡು ಪ್ಯಾಕೆಟ್ ಓಆರ್‌ಎಸ್ ಮತ್ತು ಒಂದು ಪ್ಯಾಕೇಟ್, ಜಿಂಕ್ ಮಾತ್ರೆಯನ್ನು ನೀಡಲಾಗುವುದು’ ಎಂದರು.

ಗುಣಮುಖವಾಗದಿದ್ದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೋರಿಸಬೇಕು. ಅತಿಸಾರದಿಂದ ಉಂಟಾಗುವ ಮರಣವನ್ನು ತಪ್ಪಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ADVERTISEMENT

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಮಾತನಾಡಿ, ಅತಿಸಾರ ಭೇದಿಯಿಂದ ಶೂನ್ಯ ಮರಣ ಎಂಬ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಆರೋಗ್ಯ ದಿನಾಚರಣೆ, ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ, ಅಂಗನವಾಡಿ ಮತ್ತು ಶಾಲೆಗಳಲ್ಲಿ, ವಸತಿ ನಿಲಯಗಳಲ್ಲಿ ಎಲ್ಲಾ ಸ್ವಸಹಾಯ ಗುಂಪುಗಳಲ್ಲಿ ಸಭೆ ಏರ್ಪಡಿಸಿ ಮಾಹಿತಿ ನೀಡಲಾಗುತ್ತದೆ’ ಎಂದರು.

ಸ್ವಚ್ಛತೆ ಬಗ್ಗೆ ಮತ್ತು ಕೈ ತೊಳೆಯುವ ಬಗ್ಗೆ ಮಾಹಿತಿ ನೀಡಿ ಮಾಹಿತಿ ಶಿಕ್ಷಣದ ಕರಪತ್ರ ಮತ್ತು ಬ್ಯಾನರ್‌ಗಳನ್ನು ವಿತರಿಸಲಾಗಿದೆ. ಇದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಉತ್ತಮ ಯೋಜನೆಯಾಗಿದೆ ಎಂದು ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ್ ಹೇಳಿದರು.

ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಪುರುಷೋತ್ತಮ್ ಮಾತನಾಡಿ, ‘ಇದು ಕೇವಲ ಕಾರ್ಯಕ್ರಮವಲ್ಲ, ಅನುಷ್ಠಾನಕ್ಕೆ ಬರಬೇಕು. ನಿರ್ಜಲೀಕರಣ ಆಗದಂತೆ ದಿವ್ಯ ಔಷಧವಾದ ಒಆರ್‌ಎಸ್ ಮತ್ತು ಜಿಂಕ್ ಮಕ್ಕಳಿಗೆ ಕೊಡಿಸಿ’ ಎಂದು ಸಲಹೆ ನೀಡಿದರು.

ಡಾ.ದಿವ್ಯರಾಣಿ ಮತ್ತು ಡಾ.ಸಲ್ಮಾ ಅವರು ಅತಿಸಾರ ಆದಾಗ ತಕ್ಷಣವೇ ತಯಾರಿಸುವ ಮನೆಮಟ್ಟದ ಒಆರ್‌ಎಸ್ ಬಗ್ಗೆ ಮಾಹಿತಿ ನೀಡಿದರು. ‘ಯಾವುದೇ ಕಾರಣಕ್ಕೂ ಹುಳಿ ಅಂಶ ಮಿಶ್ರಣ ಮಾಡುವಂತಿಲ್ಲ, ಹಣ್ಣಿನ ಜ್ಯೂಸ್‍ಗೆ ಕೂಡ ಸಕ್ಕರೆ ಮಿಶ್ರಣ ಮಾಡಬಾರದು’ ಎಂದರು. ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಆರೋಗ್ಯ ಸಿಬ್ಬಂದಿ ಕೈ ತೊಳೆಯುವ ವಿಧಾನದ ಬಗ್ಗೆ ಓಆರ್‌ಎಸ್ ದ್ರಾವಣ ತಯಾರಿಸುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.