ADVERTISEMENT

ಮದ್ಯ ಸೇವಿಸಿ ವಾಹನ ಚಾಲನೆಗೆ ದಂಡ: ಪಿ.ಎ.ಸೂರಜ್ ಎಚ್ಚರಿಕೆ

ಮಹಾಂತ ಶಿವಯೋಗಿ ಜನ್ಮದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 7:11 IST
Last Updated 2 ಆಗಸ್ಟ್ 2025, 7:11 IST
ಮಡಿಕೇರಿಯ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಹಾಂತ ಶಿವಯೋಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು
ಮಡಿಕೇರಿಯ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಹಾಂತ ಶಿವಯೋಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು   

ಮಡಿಕೇರಿ: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದರೆ ₹ 10 ಸಾವಿರ ದಂಡ ವಿಧಿಸಲಾಗುವುದು. 2ನೇ ಬಾರಿಯೂ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದರೆ ಅಂತಹವರ ಚಾಲನಾ ಪರವಾನಗಿಯನ್ನೇ ರದ್ದುಪಡಿಸಲಾಗುವುದು ಎಂದು ಡಿವೈಎಸ್‌ಪಿ ಪಿ.ಎ.ಸೂರಜ್ ಎಚ್ಚರಿಕೆ ನೀಡಿದರು.

ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಕಾರದಲ್ಲಿ ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನದ ಪ್ರಯುಕ್ತ ಶುಕ್ರವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ, ದಂಡ ವಿಧಿಸುವುದು ಅನಿವಾರ್ಯ’ ಎಂದರು.

ADVERTISEMENT

ಯುವಜನರು ಮದ್ಯ ಹಾಗೂ ಮಾದಕ ವಸ್ತುಗಳಿಗೆ ದಾಸರಾದಲ್ಲಿ ಭವಿಷ್ಯವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದೂ ಅವರು ಎಚ್ಚರಿಸಿದರು.

ಇತ್ತೀಚೆಗೆ ಮೈಸೂರಿನಲ್ಲಿ ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ಮೂಲಕ ಬೆಳಕಿಗೆ ಬಂದಿರುವ ಮಾದಕ ವಸ್ತು ತಯಾರಿಕೆ ಹಾಗೂ ಮಾರಾಟ ಜಾಲ ಒಂದು ರೀತಿ ಗಾಬರಿ ಹುಟ್ಟಿಸುವಂತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸಮಾಜದಲ್ಲಿ ಯಾವುದೇ ರೀತಿಯ ಆಗುಹೋಗುಗಳಿಗೆ ಸಂಬಂಧಿಸಿದಂತೆ ದೂರುಗಳನ್ನು 112ಕ್ಕೆ ನೀಡಬಹುದಾಗಿದೆ ಎಂದರು.

ಪ್ರಾಂಶುಪಾಲರಾದ ವಿಜಯ ಮಾತನಾಡಿ. ‘ಜೀವ ಇದ್ದರೆ ಮಾತ್ರ ಜೀವನ, ಯುವಜನರು ಒಳ್ಳೆಯ ಕೆಲಸಗಳಲ್ಲಿ ಪಾಲ್ಗೊಳ್ಳಬೇಕು’ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಉಪನ್ಯಾಸಕರಾದ ಪೂರ್ಣಿಮಾ, ಚಿದಾನಂದ ಭಾಗವಹಿಸಿದ್ದರು.

‘ವ್ಯಸನಮುಕ್ತ ಸಮಾಜಕ್ಕೆ ಸ್ವಾಮೀಜಿ ಶ್ರಮ’

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಿದಾನಂದ ಕುಮಾರ್ ಮಾತನಾಡಿ ‘ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರು ತುಂಬಾ ಶ್ರಮವಹಿಸಿದ್ದಾರೆ’ ಎಂದು ತಿಳಿಸಿದರು.  ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಮದ್ಯ ಹಾಗೂ ಮಾದಕ ವ್ಯಸನಗಳಿಂದ ದೂರವಿರಬೇಕು. ಬಾಯಿಗೆ ರುಚಿ ಇದೆ ಎಂದು ಹಲವು ರೀತಿಯ ತಿನಿಸುಗಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಕಿವಿಮಾತು ಹೇಳಿದರು.

‘ಟೆಲಿ ಮನಸ್ಸು’ ಜಾರಿಯಾಲ್ಲಿದೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನೋವೈದ್ಯರಾದ ಡಾ.ಡೆವಿನ್ ಕರ್ಕಡ ಮಾತನಾಡಿ ‘ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಲ್ಲಿ ‘ಟೆಲಿ ಮನಸ್ಸು’ ಜಾರಿಗೊಳಿಸಿದ್ದು ಶುಲ್ಕ ರಹಿತ ದೂರವಾಣಿ ಸಂಖ್ಯೆ 14416 ಕರೆ ಮಾಡಿ ಮಾಹಿತಿ ಪಡೆಯಬಹುದು’ ಎಂದು ಹೇಳಿದರು. ಪರೀಕ್ಷಾ ಒತ್ತಡಕ್ಕೆ ಒಳಗಾದವರು ಕೌಟುಂಬಿಕ ಸಮಸ್ಯೆಗೆ ತುತ್ತಾದವರು ಮಾದಕ ವಸ್ತು ವ್ಯಸನದ ಸಮಸ್ಯೆಯಲ್ಲಿ ಇರುವವರು ಜ್ಞಾಪಕ ಶಕ್ತಿ ತೊಂದರೆ ಉಳ್ಳವರು ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು 14416 ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು.

ಮಾದಕ ವಸ್ತು ಬಳಕೆ ಮತ್ತು ಸಾಗಾಣಿಕೆಯು ಒಂದು ಶಿಕ್ಷಾರ್ಹ ಅಪರಾಧವಾಗಿದ್ದು ಆರೋಗ್ಯ ಮತ್ತು ಮನಸ್ಸಿಗೆ ಮಾರಕವಾಗಿದೆ
–ಡಾ.ಸನತ್ ಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.