ಗೋಣಿಕೊಪ್ಪಲು: ನಾಗರಹೊಳೆ ಹಾಡಿಯೊಂದರ ಗಿರಿಜನ ಹೆಣ್ಣು ಮಗಳ ಮೇಲೆ ಇತ್ತೀಚೆಗೆ ಅತ್ಯಾಚಾರ ನಡೆದು ಆಕೆಯ ಆತ್ಯಹತ್ಯೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ಪ್ರಕರಣ ಸಂಬಂಧಿಸಿದಂತೆ ತನಿಖೆ ಕೈಗೊಂಡು ಇದರಲ್ಲಿ ಭಾಗಿಯಾದ ಇತರ ಮೇಲೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸೋಮವಾರ ಪೊನ್ನಂಪೇಟೆಯಲ್ಲಿ ಬೃಹತ್ ಪ್ರತಿಭಟನಾ ನಡೆಸಲಾಯಿತು.
ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗೀಯ ಸಂಚಾಲಕ ಕೃಷ್ಣಪ್ಪ, ಜಿಲ್ಲಾ ಸಂಚಾಲಕ ಶಿವಣ್ಣ, ತಾಲ್ಲೂಕು ಸಂಚಾಲಕ ರಜನಿಕಾಂತ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ನೂರಾರು ಪ್ರತಿಭಟನಕಾರರು, ‘ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಯಾವುದೇ ಸರ್ಕಾರದ ಬಂದರೂ ತಡೆಯಲು ಸಾಧ್ಯವಾಗಿಲ್ಲ. ದಲಿತ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಇದನ್ನು ಹತ್ತಿಕ್ಕುವಲ್ಲಿ ವಿಫಲವಾಗಿದೆ’ ಎಂದು ದೂರಿದರು.
ವಿಭಾಗೀಯ ಸಂಚಾಲಕ ಕೃಷ್ಣಪ್ಪ ಮಾತನಾಡಿ, ‘ಹೈಸೊಡ್ಲೂರು ಭಾಗದಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿ ಉಳ್ಳವರ ಪಾಲಾಗಿದ್ದರೂ ಸರ್ಕಾರ ಅದನ್ನು ಬಿಡಿಸುವಲ್ಲಿ ವಿಫಲವಾಗಿದೆ. ಬದಲಿಗೆ ಬಡವರು, ಅನಾಥರು ಅಂಗೈ ಅಗಲ ಸರ್ಕಾರಿ ಜಾಗದಲ್ಲಿ ವಾಸಕ್ಕೆ ನಿರ್ಮಿಸಿಕೊಂಡಿರುವ ಗುಡಿಸಲನ್ನು ನಿರ್ದಾಕ್ಷಿಣ್ಯವಾಗಿ ಕಿತ್ತೊಗೆದು ಅವರನ್ನು ಬೀದಿಪಾಲು ಮಾಡುತ್ತಿದೆ. ಇಂಥ ಅನ್ಯಾಯದ ವಿರುದ್ಧ ದಲಿತ ಸಂಘರ್ಷ ಸಮಿತಿ ನಿತಂತರವಾಗಿ ಹೋರಾಟ ನಡೆಸುತ್ತಾ ಬಂದಿದೆ. ಮುಂದೆಯೂ ಕೂಡ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಾಗುವುದು’ ಎಂದು ಹೇಳಿದರು.
ಪೊನ್ನಂಪೇಟೆ ಬಸವೇಶ್ವರ ದೇವಸ್ಥಾನದಿಂದ ಮುಖ್ಯ ರಸ್ತೆಯಲ್ಲಿ ನೀಲಿ ಧ್ವಜ ಹಿಡಿದು ಘೋಷಣೆ ಕೂಗುತ್ತಾ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ಬಳಿಕ ತಹಶೀಲ್ದಾರ್ ರಾಮಚಂದ್ರ ಅವರಿಗೆ ಮನವಿ ಪತ್ರ ಅರ್ಪಿಸಿದರು. ದಲಿತ ಮುಖಂಡ ಮುರುಗ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.