ಮಡಿಕೇರಿ: ಕೇಂದ್ರ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಹಾಗೂ ಸಹಾಯಕ ಸೆಕ್ಷನ್ ಅಧಿಕಾರಿ ಮನೀಶ್ ಕುಮಾರ್ ಅವರು ನಗರದ ಚುನಾವಣಾ ಶಾಖೆ ಹಾಗೂ ಜಿಲ್ಲೆಯ ತಾಲ್ಲೂಕುಗಳಲ್ಲಿರುವ ಚುನಾವಣಾ ಶಾಖೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಜೊತೆಗೆ, ನಿಖರವಾಗಿ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಬಳಿಕ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮತಗಟ್ಟೆ ಅಧಿಕಾರಿಗಳ ಜತೆ ಚುನಾವಣೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ಪಡೆದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗಲಿದ್ದು, ಬಿಎಲ್ಒ ನಮೂನೆ-6, 7 ಮತ್ತು 8 ರ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿ ಮತದಾರರ ಗುರುತಿನ ಚೀಟಿಯ ಮಹತ್ವದ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
18 ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಮತದಾರರ ಗುರುತಿನ ಚೀಟಿ ಪಡೆಯಬೇಕು. ಆ ನಿಟ್ಟಿನಲ್ಲಿ ಬಿಎಲ್ಒಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಅರ್ಹರೆಲ್ಲರೂ ಮತದಾರರ ಗುರುತಿನ ಚೀಟಿ ಪಡೆಯುವುದರ ಜೊತೆಗೆ, ಯಾರಾದರೂ ನಿಧನ ಹೊಂದಿದ್ದಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕುವುದು, ಸ್ಥಳಾಂತರವಾಗಿದ್ದಲ್ಲಿ ಮಾಹಿತಿ ನೀಡುವುದು ಹೀಗೆ ಚುನಾವಣೆಗೆ ಸಂಬಂಧಿಸಿದಂತೆ ನಿಖರ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮತ್ತಿತರ ಬಗ್ಗೆ ಹಲವು ನಿರ್ದೇಶನ ನೀಡಿದರು.
ನೋಡಲ್ ಅಧಿಕಾರಿ ಬಿ.ಬಸಪ್ಪ, ಬಿಎಲ್ಒಗಳು, ಕಂದಾಯ ನಿರೀಕ್ಷಕರು ಭಾಗವಹಿಸಿದ್ದರು.
ಚುನಾವಣೆ ಶಾಖೆಗೆ ಭೇಟಿದ ವೇಳೆ ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಮೋಹನ್ ಕುಮಾರ್, ಶ್ರೀಧರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.