ADVERTISEMENT

ಸೋಮವಾರಪೇಟೆ: ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯ

ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 5:28 IST
Last Updated 2 ಡಿಸೆಂಬರ್ 2025, 5:28 IST
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾದಿಂದ ಸೋಮವಾರಪೇಟೆ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯಿತು
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾದಿಂದ ಸೋಮವಾರಪೇಟೆ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯಿತು   

ಸೋಮವಾರಪೇಟೆ: ‘ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ’ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ‘ಪ್ರಸಕ್ತ ವರ್ಷ ನಿರಂತರ ಮಳೆಯಾಗಿದ್ದು, ಕಾಫಿ, ಕರಿಮೆಣಸು ನಷ್ಟಗೊಂಡಿದ್ದರೂ ಕಾಂಗ್ರೆಸ್ ಸರ್ಕಾರ ಈವರೆಗೆ ಪರಿಹಾರ ನೀಡಿಲ್ಲ. ರಾಜ್ಯದ ಇತರೆ ಜಿಲ್ಲೆಯ ರೈತರಿಗೆ ಪರಿಹಾರ ಘೋಷಣೆ ಮಾಡಿ, ಕೊಡಗು ಜಿಲ್ಲೆಯನ್ನು ಪಟ್ಟಿಯಿಂದ ಕೈಬಿಟ್ಟಿದ್ದಾರೆ, ಈ ನಡೆಯನ್ನು ಬಿಜೆಪಿ ಖಂಡಿಸುತ್ತದೆ’ ಎಂದರು.

‘ಸ್ಥಳೀಯ ಅಧಿಕಾರಿಗಳು ಶೇ30ಕ್ಕಿಂತ ಕಡಿಮೆ ನಷ್ಟವಾಗಿದೆ ಎಂದು ವರದಿ ನೀಡಿದ್ದಾರೆ. ಇದು ಶಾಸಕರ ಆಡಳಿತ ವೈಖರಿಗೆ ಸಾಕ್ಷಿಯಾಗಿದೆ. ಅಧಿಕಾರಿಗಳಿಗೆ ಸ್ಪಷ್ಟ ಹಾಗೂ ಕಟ್ಟುನಿಟ್ಟಿನ ನಿರ್ದೇಶನ ನೀಡುವಲ್ಲಿ ಶಾಸಕರು ವಿಫಲರಾಗಿದ್ದಾರೆ. ಅಧಿಕಾರಿಗಳ ತಪ್ಪು ಮಾಹಿತಿಯಿಂದಾಗಿ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್‌ನಿಂದ ಬರುವ ನಷ್ಟ ಪರಿಹಾರದಿಂದಲೂ ರೈತರು ವಂಚಿತರಾಗುವಂತಾಗಿದೆ’ ಎಂದು ಆರೋಪಿಸಿದರು.

ADVERTISEMENT

‘ಗ್ರಾಮೀಣ ಭಾಗದಲ್ಲಿ ರೈತರು ಕೃಷಿ ಮಾಡಿಕೊಂಡಿರುವ ‘ಸಿ’ ಮತ್ತು ‘ಡಿ’ ಭೂಮಿ ಸಮಸ್ಯೆಯನ್ನು ಬಗೆಹರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಸಚಿವ ಈಶ್ವರ್ ಖಂಡ್ರೆ ಅವರು 1980ರಿಂದ ಈಚೆಗೆ ಹಕ್ಕುಪತ್ರ ನೀಡಿರುವುದನ್ನು ಪುನರ್ ಪರಿಶೀಲಿಸಲು ಸೂಚಿಸಿದ್ದಾರೆ. ಇದು ಮತ್ತೊಮ್ಮೆ ರೈತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ. ಕೊಡಗಿನಲ್ಲಿ ಆನೆ, ಹುಲಿ ಹಾವಳಿ ತಡೆಗೆ ಯಾವುದೇ ಶಾಶ್ವತ ಪರಿಹಾರ ಕಂಡುಹಿಡಿದಿಲ್ಲ. ನಷ್ಟ ಪರಿಹಾರವನ್ನೂ ಹೆಚ್ಚಿಸಿಲ್ಲ’ ಎಂದು ದೂರಿದರು.

ಬಿಜೆಪಿ ಮುಖಂಡ ಹರಪಳ್ಳಿ ರವೀಂದ್ರ ಮಾತನಾಡಿ, ‘ವ್ಯವಸಾಯ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ರೈತರು ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ್ದರೂ ಸರ್ಕಾರ ಸಹಾಯಕ್ಕೆ ನಿಲ್ಲುತ್ತಿಲ್ಲ, ಸಮಸ್ಯೆ ಆಲಿಸುತ್ತಿಲ್ಲ. ಕೊಡಗಿನಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದರೂ ಅಧಿಕಾರಿಗಳು ಪರಿಶೀಲಿಸುತ್ತಿಲ್ಲ’ ಎಂದು ಆರೋಪಿಸಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಂಜಿ ಪೂಣಚ್ಚ ಮಾತನಾಡಿ, ‘ಕೃಷಿ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ ವಾರ್ಷಿಕ ₹ 6 ಸಾವಿರ, ಹಿಂದಿನ ಬಿಜೆಪಿ ಸರ್ಕಾರ ₹ 4 ಸಾವಿರದಂತೆ ಒಟ್ಟು ₹10 ಸಾವಿರ ಸಹಾಯಧನವನ್ನು ರೈತರಿಗೆ ನೀಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ರಾಜ್ಯದ ಪಾಲನ್ನು ರದ್ದುಗೊಳಿಸಿದೆ. ರೈತರ ಮಕ್ಕಳ ವಿದ್ಯಾರ್ಥಿ ವೇತನವನ್ನೂ ನೀಡುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಹತ್ತಾರು ಭರವಸೆಗಳನ್ನು ಈಡೇರಿಸದೇ ರೈತರಿಗೆ ಮೋಸ ಮಾಡಿದೆ’ ಎಂದರು.

ರೈತರಿಗೆ ಪರಿಹಾರ ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುವ ಮನವಿ ಪತ್ರವನ್ನು ತಹಶೀಲ್ದಾರ್ ಕೃಷ್ಣಮೂರ್ತಿ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ರೈತ ಮೋರ್ಚಾ ರಾಜ್ಯ ಸಮಿತಿ ಸದಸ್ಯೆ ಯಮುನ ಚಂಗಪ್ಪ, ಜಿಲ್ಲಾ ಕಾರ್ಯದರ್ಶಿ ಆಲೇಮಾಡ ಸುಧೀರ್, ಪ್ರಮುಖರಾದ ನೆಲ್ಲೀರ ಚಲನ್, ದರ್ಶನ್ ಜೋಯಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್ ಗೌಡ, ಮನುಕುಮಾರ್ ರೈ, ಅನಂತ್ ಕುಮಾರ್, ಕವಿತಾ ವಿರೂಪಾಕ್ಷ, ಎಚ್.ಕೆ. ಮಾದಪ್ಪ, ಮೋಕ್ಷಿಕ್ ರಾಜ್, ಮೋಹಿತ್ ತಿಮ್ಮಯ್ಯ ಭಾಗವಹಿಸಿದ್ದರು. 

ಆನೆ, ಹುಲಿ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಹಿಡಿಯಿರಿ ನಿರಂತರ ಮಳೆಯಿಂದ ಕಾಫಿ, ಕರಿಮೆಣಸು ನಷ್ಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.