ಮಡಿಕೇರಿ: ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಮಡಿಕೇರಿ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ ಇಲ್ಲಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಶನಿವಾರ ನಡೆದ ಸಾರ್ವಜನಿಕರಿಗಾಗಿ ಆರೋಗ್ಯ ತಪಾಸಣಾ ಶಿಬಿರದಲ್ಲಿ 151 ಮಂದಿ ಭಾಗಿಯಾದರು.
ಶಿಬಿರ ಉದ್ಘಾಟಿಸಿದ ಕೆಪಿಸಿಸಿ ಮುಖಂಡ ಎಚ್.ಎಸ್.ಚಂದ್ರಮೌಳಿ, ‘ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬ ನಾಗರಿಕರೂ ಆರೋಗ್ಯವಾಗಿರುವುದು ಮುಖ್ಯ. ಅದಕ್ಕಾಗಿ ಇಂತಹ ಶಿಬಿರಗಳು ಸಹಾಯಕವಾಗುತ್ತವೆ’ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ಅಂಬೆಕಲ್ ನವೀನ್ ಮಾತನಾಡಿ, ‘ಪ್ರತಿಯೊಬ್ಬರೂ ಕನಿಷ್ಠ 6 ತಿಂಗಳಿಗೆ ಒಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.
ವಿಧಾನ ಪರರಿಷತ್ತಿನ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ‘ಪ್ರಸ್ತುತ ವ್ಯವಸ್ಥೆಯಡಿ ಪ್ರತಿಯೊಬ್ಬರು ಒಂದಲ್ಲ ಒಂದು ಒತ್ತಡಗಳಲ್ಲಿ ಸಿಲುಕಿರುತ್ತಾರೆ. ವೈಯಕ್ತಿಕವಾಗಿ ನಮ್ಮ ಆರೋಗ್ಯ ಮತ್ತು ಕುಟುಂಬದ ಆರೋಗ್ಯದೊಂದಿಗೆ ಸಮಾಜದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಇಂತಹ ಶಿಬಿರಗಳು ಅತ್ಯಂತ ಅವಶ್ಯಕ’ ಎಂದು ಅಭಿಪ್ರಾಯಪಟ್ಟರು.
ಮಡಿಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಕನ್ನಂಡ ಕವಿತಾ ಮಾತನಾಡಿ, ‘ಸಮಾಜ ಸೇವೆಯೆ ಲಯನ್ಸ್ ಸಂಸ್ಥೆಯ ಮುಖ್ಯ ಧ್ಯೇಯ. ಆರೋಗ್ಯದ ಬಗೆಗಿನ ಕಾಳಜಿ ಪ್ರತಿಯೊಬ್ಬರಿಗೂ ಇರಬೇಕು’ ಎಂದು ತಿಳಿಸಿದರು.
ಸುಯೋಗ್ ಆಸ್ಪತ್ರೆಯ ಜನರಲ್ ಸರ್ಜನ್ ಡಾ.ಪೊನ್ನಪ್ಪ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್, ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಆರ್.ಹರೀಶ್ ಕುಮಾರ್, ಸುಯೋಗ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಭರತ್, ಸ್ತ್ರೀರೋಗ ತಜ್ಞರಾದ ಡಾ.ಅಂಜು, ಸಂಘದ ಉಪಾಧ್ಯಕ್ಷ ಜಿ.ವಿ.ರವಿ ಕುಮಾರ್, ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್, ಸದಸ್ಯ ರಂಜಿತ್ ಕವಲಪಾರ, ಸಮಿತಿ ಖಜಾಂಚಿ ಕೆ. ತಿಮ್ಮಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.