ಗೋಣಿಕೊಪ್ಪಲು: ಪಟ್ಟಣದಿಂದ ಅಮ್ಮತ್ತಿ ಹೊಸೂರಿಗೆ ಹಾದುಹೋಗುವ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ,‘ಇದು ಅಮ್ಮತ್ತಿ, ಕಾರ್ಮಾಡು, ಹೊಸೂರು ಗ್ರಾಮ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಈ ರಸ್ತೆ ಬಹಳ ವರ್ಷಗಳಿಂದ ಹೊಂಡ ಬಿದ್ದು ಅಭಿವೃದ್ಧಿ ಕಾಣದೆ ಹಾಳಾಗಿತ್ತು. ಇದರಿಂದ ಜನರ ಓಡಾಟಕ್ಕೆ ತೊಂದರೆಯಾಗಿತ್ತು. ಇದರ ದುರಸ್ತಿಗೆ ಸಾರ್ವಜನಿಕರ ಒತ್ತಡವೂ ಹೆಚ್ಚಾಗಿತ್ತು. ಈ ಕಾರಣದಿಂದ ಜನತೆ ಬೇಡಿಕೆ ಅನುಗುಣವಾಗಿ ಮಳೆಗಾಲ ಆರಂಭವಾಗುವ ಮುನ್ನ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರವಹಿಸಬೇಕು’ ಎಂದು ಹೇಳಿದರು.
ಮುಖಂಡ ಸಿ.ಎಸ್.ಅರುಣ್ ಮಾಚಯ್ಯ ಮಾತನಾಡಿ,‘ಬಹಳ ದಿನಗಳ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿಯನ್ನು ಶಾಸಕರು ತಮ್ಮ ಅನುದಾನದಲ್ಲಿ ಕೈಗೊಳ್ಳುತ್ತಿದ್ದಾರೆ. ಅನುದಾನ ಸಂಪೂರ್ಣವಾಗಿ ಬಳಕೆಗೊಂಡು ಸುಸಜ್ಜಿತ ರಸ್ತೆ ನಿರ್ಮಾಣಗೊಳ್ಳಲಿದೆ’ ಎಂದು ಆಶಿಸಿದರು.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಜೆ. ಬಾಬು, ಹಾತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕೊಕ್ಕಂಡ ರೋಷನ್, ಪೊನ್ನಂಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಪ್ಪಣ್ಣ, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಖಾಲಿದ್, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಸದಸ್ಯರಾದ ಅಫ್ಜಲ್, ಸುಲೇಖಾ, ಮುಖಂಡರಾದ ಎಂ.ಎಸ್.ಕುಶಾಲಪ್ಪ ಹಾಜರಿದ್ದರು.
Highlights - ಜ್ಯೂಸ್ ಫ್ಯಾಕ್ಟರಿಯಿಂದ ಆರಂಭವಾಗುವ ರಸ್ತೆ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿ ಮಳೆಗಾಲ ಆರಂಭವಾಗುವ ಮುನ್ನ ಪೂರ್ಣಗೊಳಿಸಲು ಸೂಚನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.