
ಗೋಣಿಕೊಪ್ಪಲು: ರಾಜ್ಯ ವಿಧಾನಪರಿಷತ್ತಿನ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಬೆಂಬಲ ಕಂಡು ಬರುತ್ತಿದೆ ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ತಿಳಿಸಿದರು.
‘ಶಿಕ್ಷಕರು ಮತ್ತು ಪದವೀಧರರ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ. ನಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ. ಶಾಲಾ, ಕಾಲೇಜುಗಳಿಗೆ ಭೇಟಿ ನೀಡಿದ್ದೇವೆ. ಮತದಾರರಲ್ಲಿ ಉತ್ತಮ ಬೆಂಬಲವಾಗುತ್ತಿದೆ’ ಎಂದು ಅವರು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿಕ್ಷಕರಿಗೆ ಹೊಸ ಪಿಂಚಣಿ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದಕ್ಕೆ ಸರ್ಕಾರ ಬದ್ಧವಾಗಿದೆ. 7ನೇ ವೇತನ ಆಯೋಗ ಜಾರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಅವರು ಸ್ಪಷ್ಟಪಡಿಸಿದರು.
‘ಶಾಸಕನಾಗಿ ಒಂದು ವರ್ಷ ಪೂರೈಸಿದ್ದು, ಜನತೆಗೆ ಸಾರ್ಥಕ ಸೇವೆ ನೀಡಿದ್ದೇನೆ ಎಂಬ ತೃಪ್ತಿ ನನಗಿದೆ. ಈ ಅವಧಿಯಲ್ಲಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿರುವೆ’ ಎಂದರು.
ನೀತಿಸಂಹಿತೆ ಅವಧಿಯಲ್ಲಿ ದಬ್ಬಾಳಿಕೆ ನಡೆಸುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಇಷ್ಟು ದೀರ್ಘ ಕಾಲ ಅಧಿಕಾರಿಗಳೇ ಆಡಳಿತ ನಡೆಸಿರುವ ಉದಾಹರಣೆ ಇದೇ ಮೊದಲು. ಮೂರು ತಿಂಗಳಿನಿಂದ ಅಧಿಕಾರಿಗಳದ್ದೇ ಆಡಳಿತ ಎಂದು ಹಲವರು ವರ್ತಿಸುತ್ತಿದ್ದಾರೆ. ಅಬಕಾರಿ, ಪೊಲೀಸ್, ಆರೋಗ್ಯ, ವೈದ್ಯರು ಸೇರಿದಂತೆ ಎಲ್ಲ ಅಧಿಕಾರಿಗಳು ತಮ್ಮ ಲೋಪದೋಷಗಳಿಗೆ ಹೊಣೆಗಾರರು ಎಂಬುದನ್ನು ಅವರು ಮರೆಯಬಾರದು ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ಹಿರಿಯ ಮುಖಂಡ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಕ್ತಾರ ಟಾಟು ಮೊಣ್ಣಪ್ಪ, ಪದವೀಧರ ಕ್ಷೇತ್ರ ಅಭ್ಯರ್ಥಿ ನರೇಂದ್ರ ಕಾಮತ್, ವಿರಾಜಪೇಟೆ ಪುರಸಭೆ ಸದಸ್ಯ ರಾಜೇಶ್ ಪದ್ಮನಾಭ, ಮುಖಂಡ ಮಂಜುನಾಥ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.