
ಸೋಮವಾರಪೇಟೆ: ‘ಇಂದಿನ ಒತ್ತಡದ ಜೀವನದಲ್ಲಿ ಎಲ್ಲರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು’ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ, ತಾಲ್ಲೂಕು ಒಕ್ಕಲಿಗರ ಸಂಘ, ತಾಲ್ಲೂಕು ಹೋಂ ಸ್ಟೇ ಅಂಡ್ ಟೂರಿಸಂ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಅನಿಯಮಿತ ಆಹಾರ ಪದಾರ್ಥಗಳಿಂದ ರೋಗಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆ ಅವಶ್ಯವಾಗಿದೆ ಎಂದರು.
ವೈದ್ಯರ ಉತ್ತಮ ಮಾತುಗಳು, ಧೈರ್ಯವೇ ರೋಗಿಯ ಅರ್ಧ ರೋಗ ಗುಣಪಡಿಸುತ್ತದೆ. ಶಿಬಿರದಲ್ಲಿ ಭಾಗಿಯಾಗುವ ರೋಗಿಗಳಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದ್ದರೆ, ಜಿಲ್ಲಾಸ್ಪತ್ರೆಯಲ್ಲಿ ಉಚಿತವಾಗಿ ಮಾಡಿಕೊಡಬೇಕು ಎಂದು ಮುಖ್ಯ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ರಾಮ್ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ.ರೋಹಿತ್, ಕಾರ್ಯದರ್ಶಿ ಮಂಜುನಾಥ್ ಚೌಟ, ಖಜಾಂಚಿ ತೇಜಸ್ವಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ವೈದ್ಯಕೀಯ ಸ್ಥಾನೀಯ ವೈದ್ಯಾಧಿಕಾರಿ ಧನಂಜಯ್, ರಕ್ತನಿಧಿ ಘಟಕದ ಮುಖ್ಯಸ್ಥರಾದ ಡಾ.ಕರುಂಬಯ್ಯ, ಡಾ.ಪ್ರವೀಣ್, ಎಸ್.ಕೆ.ಪ್ರಸಾದ್, ಡಾ.ಸತ್ಯ, ಡಾ.ರವೀಂದ್ರ, ಡಾ.ಲಕ್ಷ್ಮೀಪ್ರಸಾದ್ ಉಪಸ್ಥಿತರಿದ್ದರು.
ಶಿಬಿರದಲ್ಲಿ ಎಲ್ಲ ವಿಭಾಗಗಳ ತಜ್ಞ ವೈದ್ಯರು ಉಪಸ್ಥಿತರಿದ್ದು, ರೋಗಿಗಳ ತಪಾಸಣೆ ಮಾಡಿದರು.
ಕೆಲ ರೋಗಿಗಳಿಗೆ ಸ್ಥಳದಲ್ಲಿಯೇ ಔಷಧ ವಿತರಿಸಲಾಯಿತು. ರಕ್ತದಾನ ಶಿಬಿರದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗದಿಂದ ಆಗಮಿಸಿದ್ದ ತದಾನಿಗಳು ರಕ್ತದಾನ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.