ADVERTISEMENT

ಜಿಲ್ಲೆಯಲ್ಲಿ ಸಂವಿಧಾನ ದಿನಾಚರಣೆ

ಜಿಲ್ಲಾಡಳಿತದ ವತಿಯಿಂದ ಮಡಿಕೇರಿಯಲ್ಲಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 3:21 IST
Last Updated 27 ನವೆಂಬರ್ 2025, 3:21 IST
ಸಂವಿಧಾನ ದಿನಾಚರಣೆ ಪ್ರಯುಕ್ತ ಮಡಿಕೇರಿಯಲ್ಲಿ ನಡೆದ ಮೆರವಣಿಗೆಯಲ್ಲಿ ಡೊಳ್ಳುಕುಣಿತ ತಂಡ ಗಮನ ಸೆಳೆಯಿತು
ಸಂವಿಧಾನ ದಿನಾಚರಣೆ ಪ್ರಯುಕ್ತ ಮಡಿಕೇರಿಯಲ್ಲಿ ನಡೆದ ಮೆರವಣಿಗೆಯಲ್ಲಿ ಡೊಳ್ಳುಕುಣಿತ ತಂಡ ಗಮನ ಸೆಳೆಯಿತು   

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವರ ಸಂವಿಧಾನ ದಿನಾಚರಣೆ ನಡೆಯಿತು. ಜನರು ಸಂವಿಧಾನದ ಪೀಠಿಕೆಯನ್ನು ವಾಚಿಸಿ, ಪ್ರಜಾಪ್ರಭುತ್ವಕ್ಕೆ ಗೌರವ ತೋರಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯು ಇಲ್ಲಿನ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಅವರು ಸಂವಿಧಾನ ಪೀಠಿಕೆಯನ್ನು ವಾಚಿಸಿದರು. ಸಂವಿಧಾನದ ಪೀಠಿಕೆಯ ಸಾಲುಗಳಿಗೆ ಸಭೆಯಲ್ಲಿ ಭಾಗಿಯಾಗಿದ್ದ ಎಲ್ಲರೂ ದನಿಗೂಡಿಸಿದರು.

ADVERTISEMENT

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದಿದ್ದ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ ₹ 25 ಸಾವಿರ, ದ್ವಿತೀಯ ₹ 15 ಸಾವಿರ ಮತ್ತು ತೃತೀಯ ₹ 10 ಸಾವಿರವನ್ನು ಆರ್‌ಟಿಜಿಎಸ್ ಮೂಲಕ ವಿತರಿಸಲಾಯಿತು.

ಚಿತ್ರಕಲಾ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಮಾದಾಪುರದ ಸರ್ಕಾರಿ ಪ್ರೌಢಶಾಲೆಯ ಆರ್.ಕಿಶೋರ್‌ರಾಜ್ ಪ್ರಥಮ, ಚಂಬು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎನ್.ಪಿ.ವನ್ಯಶ್ರೀ ದ್ವಿತೀಯ, ಮೂರ್ನಾಡಿನ ಸರ್ಕಾರಿ ಪ್ರೌಢಶಾಲೆಯ ಎಚ್.ಡಿ.ಆಶಿಕಾ ತೃತೀಯ ಸ್ಥಾನ ಪಡೆದರು.

ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಚ್.ಡಿ.ಅಕುಲ್ ಪ್ರಥಮ, ನಾಪೋಕ್ಲುವಿನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಡಬ್ಲೂ.ಎ.ಅಶಿಕ ದ್ವಿತೀಯ, ತಿತಿಮತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್.ಬಿ.ಸ್ನೇಹಾ ತೃತೀಯ ಸ್ಥಾನ ಪಡೆದರು.

ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಈ.ರಾಜು ಮತ್ತು ತಂಡದವರು ನಾಡಗೀತೆ ಮತ್ತು ಸಂವಿಧಾನ ಗೀತೆಯನ್ನು ಹಾಡಿದರು. 

ಜಾಥಾಕ್ಕೆ ಸಿಇಒ ಚಾಲನೆ

ಭಾರತ ಸಂವಿಧಾನ ದಿನಾಚರಣೆ ಪ್ರಯುಕ್ತ ನಗರದ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ನಡೆದ ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಚಾಲನೆ ನೀಡಿದರು. ಜಾಥದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಡೊಳ್ಳು ಕುಣಿತ ಕಾರ್ಯಕ್ರಮ ಜರುಗಿತು.  ಹಾಗೆಯೇ, ಜಾಥಾ ವಾಹನದಲ್ಲಿ ವಿದ್ಯಾರ್ಥಿಯೊಬ್ಬರು ಅಂಬೇಡ್ಕರ್ ವೇಷ ಧರಿಸಿ ಸಂವಿಧಾನ ಪುಸ್ತಕ ಹಿಡಿದು ಕೈ ತೋರಿಸುತ್ತಿದ್ದ ದೃಶ್ಯ ಮನ ಸೆಳೆಯಿತು.

ವಿವಿಧ ಶಾಲಾ-ಕಾಲೇಜಿನ ಎನ್‍ಸಿಸಿ, ಎನ್‍ಎಸ್‍ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಂವಿಧಾನದ ಮಹತ್ವ ಕುರಿತ ಘೋಷವಾಕ್ಯ ಪ್ರದರ್ಶನ ಗಮನ ಸೆಳೆಯಿತು. ಶಾಲಾ-ಕಾಲೇಜಿನ ಶಿಕ್ಷಕರು, ಉಪನ್ಯಾಸಕರು, ಅಧಿಕಾರಿಗಳು ಸಿಬ್ಬಂದಿ ಪಾಲ್ಗೊಂಡಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ತಹಶೀಲ್ದಾರ್ ಶ್ರೀಧರ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಚಾಲಕಿ ದಮಯಂತಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಅಧ್ಯಕ್ಷ ದಿವಾಕರ,  ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ರಮೇಶ್, ನಗರಸಭೆ ಸದಸ್ಯರಾದ ಸತೀಶ್, ಮುಖಂಡರಾದ ದಿವಾಕರ, ಕುಮಾರ, ಸಿದ್ದೇಶ್, ಚಂದನ್ ಭಾಗವಹಿಸಿದ್ದರು.

ಮಡಿಕೇರಿಯಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ಸಭಿಕರು ಸಂವಿಧಾನ ಪೀಠಿಕೆ ವಾಚಿಸಿದರು
ಮಡಿಕೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.